ಬಂಡೀಪುರಕ್ಕೆ ಪ್ರಧಾನಿ ಮೋದಿ ಭೇಟಿ: ಏ.6 ರಿಂದ ನಾಲ್ಕು ದಿನ ಸಫಾರಿ ಬಂದ್
ಚಾಮರಾಜನಗರ, ಏಪ್ರಿಲ್ 5: ಬಂಡೀಪುರ ಹುಲಿ ಸಂರಕ್ಷಿತ ಯೋಜನೆಗೆ 50 ವರ್ಷ ತುಂಬಿರುವ ಕಾರಣ ಏಪ್ರಿಲ್ 9 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ವನ್ಯಜೀವಿ ಸಫಾರಿ ನಿಷೇಧಿಸಿ ಚಾಮರಾಜನಗರ ಜಿಲ್ಲಾಧಿಕಾರಿ ರಮೇಶ್ ಆದೇಶ ಹೊರಡಿಸಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಸೂಕ್ತ ಬಿಗಿ ಭದ್ರತೆ ಹಾಗೂ ಪೂರ್ವ ಸಿದ್ಧತೆ ಕೈಗೊಳ್ಳುವ ಉದ್ದೇಶದಿಂದ ಏಪ್ರಿಲ್ 6ರಿಂದ ಏಪ್ರಿಲ್ 9 ರವರೆಗೆ ಸಾರ್ವಜನಿಕರ ವನ್ಯಜೀವಿ ಸಫಾರಿಯನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಮೇಶ್ ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ. ಅಲ್ಲದೇ ಏಪ್ರಿಲ್ 6ರಿಂದ ಬಂಡೀಪುರ ವ್ಯಾಪ್ತಿಯ ಎಲ್ಲಾ ಹೋಂಸ್ಟೇ, ರೆಸಾರ್ಟ್ ಮತ್ತು ಲಾಡ್ಜ್ಗಳು ಬಂದ್ ಆಗಲಿವೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವು ರಾಜ್ಯದಲ್ಲೇ ಅತ್ಯಧಿಕ ಹುಲಿಗಳಿರುವ ರಕ್ಷಿತಾರಣ್ಯವಾಗಿದ್ದು, ಪ್ರತಿದಿನ ಬೆಳಗ್ಗೆ ಹಾಗೂ ಸಂಜೆ ಸಫಾರಿ ನಡೆಯುತ್ತಿತ್ತು. ಬಂಡೀಪುರ ಕಾಡು ನೋಡಲೆಂದೇ ಸಾವಿರಾರು ಪ್ರವಾಸಿಗರು ಇಲ್ಲಿಗೆ ಬರುತ್ತಿದ್ದರು. ಏಪ್ರಿಲ್ 9 ರಂದು ದೇಶದ ಪ್ರಧಾನಿ ನರೇಂದ್ರ ಮೋದಿ ಅವರೇ ಬಂಡೀಪುರದಲ್ಲಿ ಸಫಾರಿ ನಡೆಸಲಿದ್ದಾರೆ. ಜೊತೆಗೆ, ಅರಣ್ಯ ಸಿಬ್ಬಂದಿ ಜೊತೆ ಸಂವಾದ ನಡೆಸಲಿದ್ದಾರೆ.
1973 ರಲ್ಲಿ ಪ್ರಾಜೆಕ್ಟ್ ಟೈಗರ್ ಘೋಷಿಸಿದ ವೇಳೆ ಅದರಲ್ಲಿ ಬಂಡೀಪುರವೂ ಒಂದಾಗಿತ್ತು. ಜೊತೆಗೆ, ಕರ್ನಾಟಕದಲ್ಲಿ ಅತೀ ಹೆಚ್ಚು ಹುಲಿಗಳಿರುವ ಸಂರಕ್ಷಿತ ಪ್ರದೇಶವೂ ಇದಾಗಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವು ತಮಿಳುನಾಡಿನ ಮಧುಮಲೈ ಹಾಗೂ ಕೇರಳದ ವೈನಾಡು ಅರಣ್ಯ ಪ್ರದೇಶದ ಗಡಿ ಹೊಂದಿದ್ದು 1973 ರಲ್ಲಿ ಹುಲಿ ಯೋಜನೆ ಘೋಷಿಸಿದ ವೇಳೆ ಕೇವಲ 10-15 ಹುಲಿಗಳಿದ್ದವು ಈಗ ಅವುಗಳ ಸಂಖ್ಯೆ 150 ದಾಟಿದೆ ಎಂಬ ಮಾಹಿತಿ ಇದೆ. ಹೀಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.

ಇನ್ನು ಬಂಡೀಪುರಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ಸಕಲ ಸಿದ್ಧತೆ ನಡೆಸುತ್ತಿದೆ. ಪ್ರಧಾನಿ ಭೇಟಿ ವೇಳೆ ಯಾವುದೇ ಅಹಿತಕರ ಘಟನೆ ಹಾಗೂ ಭದ್ರತಾ ಲೋಪ ಉಂಟಾಗದ ರೀತಿ ಬಿಗಿ ಭದ್ರತೆ ಕೈಗೊಳ್ಳುವ ಉದ್ದೇಶದಿಂದ ಎಡಿಜಿಪಿ ಅಲೋಕ್ ಕುಮಾರ್ ಬಂಡೀಪುರಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಪ್ರಧಾನಿ ಮೋದಿ ಭೇಟಿಗಾಗಿ ಬಂಡೀಪುರದ ಸಫಾರಿ ಕೇಂದ್ರದ ಸಮೀಪವೇ 3 ಹೆಲಿಪ್ಯಾಡ್ ನಿರ್ಮಾಣಗೊಳ್ಳುತ್ತಿದ್ದು ಸಾರ್ವಜನಿಕರು, ಅಭಿಮಾನಿಗಳನ್ನು ನಿಯಂತ್ರಿಸಲು ಸೂಕ್ತ ಬ್ಯಾರಿಕೇಡ್ ಹಾಗೂ ಕಾಂಪೌಂಡ್ ವ್ಯವಸ್ಥೆ ಕೈಗೊಳ್ಳುವಂತೆ. ಅಲ್ಲದೇ ಸಫಾರಿ ಪ್ರದೇಶಗಳು ವನ್ಯಜೀವಿಗಳು ರಸ್ತೆ ದಾಟುವುದರ ಬಗ್ಗೆ ನಿಗಾ ಇಡುವಂತೆ ಐಜಿಪಿ ಮಧುಕರ್ ಪವಾರ್ ಹಾಗೂ ಚಾಮರಾಜನಗರ ಎಸ್ಪಿ ಪದ್ಮಿನಿ ಸಾಹೋ ಅವರಿಗೆ ಅಲೋಕ್ ಕುಮಾರ್ ಸೂಚನೆ ನೀಡಿದ್ದಾರೆ.

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯ ಘಟಿಕೋತ್ಸವ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಹುಲಿ ಗಣತಿ ವರದಿ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಮೋದಿ ಅವರ ಅಧಿಕೃತ ಪ್ರವಾಸ ಪಟ್ಟಿ ಇನ್ನೂ ಬಿಡುಗಡೆ ಆಗಿಲ್ಲ. ಆದರೂ ಬಂಡೀಪುರ ಹಾಗೂ ಮೈಸೂರಿಗೆ ಪ್ರಧಾನಿಯವರ ಭೇಟಿ ಬಹುತೇಕ ಖಚಿತವಾಗಿದೆ. ಏಪ್ರಿಲ್ 9ರಂದು ವಿಶೇಷ ಹೆಲಿಕಾಪ್ಟರ್ ಮೂಲಕ ಬಂಡೀಪುರಕ್ಕೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಸಫಾರಿ ಬಳಿಕ ರಾಂಪುರ ಆನೆ ಶಿಬಿರಕ್ಕೆ ಭೇಟಿ ಕೊಡಲಿದ್ದಾರೆ. ಈ ವೇಳೆ ಮಾವುತರ ಜೊತೆ ಸಂವಾದ ನಡೆಸಲಿದ್ದಾರೆ ಎನ್ನಲಾಗುತ್ತಿದೆ.












Click it and Unblock the Notifications