ಬಿಜೆಪಿ ಮುಖಂಡರಿಗೂ ತಿಳಿಸದೆ ಚಾಮರಾಜನಗರದ ಹರಳುಕೋಟೆ ಆಂಜನೇಯ ದೇವಸ್ಥಾನಕ್ಕೆ ದಿಢೀರ್ ಭೇಟಿ ನೀಡಿದ ಯತ್ನಾಳ್
ಚಾಮರಾಜನಗರ, ಮೇ, 18: ಗಡಿಜಿಲ್ಲೆ ಚಾಮರಾಜನಗರಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಭೇಟಿ ನೀಡಿದ್ದು, ಇಲ್ಲಿನ ಹರಳುಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಬಸನಗೌಡ ಪಾಟೀಲ ಯತ್ನಾಳ್ ಅವರು ಜಿಲ್ಲೆಯ ಬಿಜೆಪಿ ಮುಖಂಡರಿಗೂ ಮಾಹಿತಿ ನೀಡದೆ ಆರಾಧ್ಯ ದೈವ ಹರಳುಕೋಟೆ ಆಂಜನೇಯ ಸ್ವಾಮಿಯ ದರ್ಶನಕ್ಕೆ ತೆರಳಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಬಳಿಕ ಅವರು ಪೂಜೆ ಮುಗಿಸಿಕೊಂಡು ಮಾಧ್ಯಮದವರಿಗೂ ಸಿಗದೆ ವಾಪಸ್ಸಾಗಿದ್ದು, ಅವರ ಈ ನಡೆ ಕುತೂಹಲಕ್ಕೆ ಕಾರಣವಾಗಿದೆ.

ಅಲ್ಲದೆ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕರ್ನಾಟಕ ವಿಧಾನಸಭೆ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸಬೇಕು ಎಂದು ಜಿಲ್ಲೆಯ ಸಮಾಜ ಸೇವಕ ಹಾಗೂ ಯುವ ಮುಖಂಡ ಮಂಜುನಾಥ.ಎಸ್.ಕಟ್ಟಿಮನಿ ಅವರು ಇತ್ತೀಚೆಗಷ್ಟೇ ಆಗ್ರಹಿಸಿದ್ದರು.ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿದ್ದ ಯತ್ನಾಳ್ ಅವರು ಉತ್ತರ ಕರ್ನಾಟಕದ ರಾಜಕಾರಣದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದವರಾಗಿದ್ದಾರೆ.
ಸಚಿವ ಸ್ಥಾನದ ಸದ್ದು
ಇನ್ನು ಬಿಜೆಪಿ ಪ್ರಭಾವಿ ಮುಖಂಡ, ಲಿಂಗಾಯತ ಸಮುದಾಯದ ನಾಯಕ ವಿ.ಸೋಮಣ್ಣ ಅವರನ್ನು ಸೋಲಿಸಿ ಚಾಮರಾಜನಗರದಲ್ಲಿ ಸತತ ನಾಲ್ಕನೇ ಬಾರಿ ಶಾಸಕರಾಗಿರುವ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಪಟ್ಟ ಒಲಿಯಲಿದೆ ಎನ್ನುವ ಮಾತುಗಳು ಜೋರಾಗಿಯೇ ಕೇಳಿಬರುತ್ತಿವೆ.
ಚಾಮರಾಜನಗರ ಜಿಲ್ಲೆಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳಿದ್ದು, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಚಾಮರಾಜನಗರದ ಮೂವರು ಕಾಂಗ್ರೆಸ್ ಶಾಸಕರಲ್ಲಿ 68ರ ಹರೆಯದ ಪುಟ್ಟರಂಗಶೆಟ್ಟಿ ಹಿರಿಯ ಶಾಸಕರಾಗಿದ್ದು, ಇವರು ಉಪ್ಪಾರ ಜಾತಿಯ ರಾಜ್ಯದ ಏಕೈಕ ಶಾಸಕ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಆದ್ದರಿಂದ ಸಿದ್ದರಾಮಯ್ಯ ಸಂಪುಟದಲ್ಲಿ ಇವರು ಸ್ಥಾನ ಗಿಟ್ಟಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಸಿ.ಪುಟ್ಟರಂಗಶೆಟ್ಟಿ ಸಿದ್ದರಾಮಯ್ಯ ಕಟ್ಟಾ ಬೆಂಬಲಿಗರಾಗಿದ್ದು, ಇವರು ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದ ವೇಳೆ ಈಗಲೂ ನನಗೇ ಸಿದ್ದರಾಮಯ್ಯನೇ ಸಿಎಂ ಎನ್ನುವ ಮೂಲಕ ಗಮನ ಸೆಳೆದಿದ್ದರು. ಕ್ಷೇತ್ರ ಹುಡುಕಾಟದ ವೇಳೆ ಚಾಮರಾಜನಗರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಲಿ ಎಂದು ಆಹ್ವಾನ ಕೊಟ್ಟಿದ್ದರು.
ಅಲ್ಲದೆ ಸಿದ್ದರಾಮಯ್ಯ ಆಪ್ತ ಬಳಗದ ಶಾಸಕರಲ್ಲಿ ಗುರುತಿಸಿಕೊಂಡಿರುವ ಪುಟ್ಟರಂಗಶೆಟ್ಟಿ ಅವರಿಗೆ ಸಿದ್ದರಾಮಯ್ಯ ಮಣೆ ಹಾಕುವುದು ನಿಶ್ಚಿತ ಅಂತಾ ಹೇಳಲಾಗುತ್ತಿದೆ. ಚಾಮರಾಜನಗರಕ್ಕೆ ಪ್ರಾತಿನಿಧ್ಯ ಕೊಡಬೇಕಾಗಿರುವುದರಿಂದ ಜೊತೆಗೆ, ಹಿಂದುಳಿದ ವರ್ಗ ಉಪ್ಪಾರ ಸಮುದಾಯಕ್ಕೂ ಆದ್ಯತೆ ಕೊಡಬೇಕಿರುವುದರಿಂದ ಪುಟ್ಟರಂಗಶೆಟ್ಟಿಗೆ ಮಂತ್ರಿ ಭಾಗ್ಯ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಸಿಗಬಹುದು ಎನ್ನಲಾಗಿದೆ.
ಹಳೇ ಮೈಸೂರು ಭಾಗದಲ್ಲಿ ಚಾಮರಾಜನಗರ ಕಳೆದ 4 ಸಾಲಿನಿಂದ ಕಾಂಗ್ರೆಸ್ ಭದ್ರಕೋಟೆ ಆಗಿದ್ದು, ಕ್ಷೇತ್ರದಲ್ಲಿ ಸತತವಾಗಿ 4 ಬಾರಿ ಗೆದ್ದ ಮೊದಲ ಶಾಸಕರಾಗಿದ್ದಾರೆ. ಈ ಮೂಲಕ ಸೋಲಿಲ್ಲದ ಸರದಾರ ಅಂತಲೂ ಕರೆಸಿಕೊಂಡಿದ್ದಾರೆ. ಒಟ್ಟಿನಲ್ಲಿ ಸಿ.ಪುಟ್ಟರಂಗಶೆಟ್ಟಿ ಅವರು ವಿ.ಸೋಮಣ್ಣ ಅವರನ್ನು ಸೋಲಿಸಿ ಎರಡನೇ ಬಾರಿ ಸಚಿವರಾಗುವ ಉತ್ಸಾಹದಲ್ಲಿದ್ದಾರೆ.












Click it and Unblock the Notifications