ಕಾಂಗ್ರೆಸ್ ಜೋಡೋ ಯಾತ್ರೆ: ಚಾಮರಾಜನಗರದಲ್ಲಿ ಕಾಂಗ್ರೆಸ್ ಸಿದ್ಧತಾ ಸಭೆ
ಚಾಮರಾಜನಗರ, ಸೆಪ್ಟೆಂಬರ್ 7: ಬಿಜೆಪಿ ನೀತಿಗಳು, ಆಡಳಿತ ವೈಖರಿ, ಸಂಘರ್ಷದ ವಿರುದ್ಧ ಕಾಂಗ್ರೆಸ್ ಆರಂಭಿಸಿರುವ ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ ಸೆಪ್ಟೆಂಬರ್ 30 ರಂದು ಗುಂಡ್ಲುಪೇಟೆ ಮೂಲಕ ಆರಂಭಗೊಳ್ಳಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೇರಳದ ವೈನಾಡು (ರಾಹುಲ್ ಗಾಂಧಿ ಪ್ರತಿನಿಧಿಸುವ ಸಂಸತ್ ಕ್ಷೇತ್ರ) ಮೂಲಕ ಕರ್ನಾಟಕದ ಗಡಿ ಭಾಗ ಗುಂಡ್ಲುಪೇಟೆ ತಲುಪಿ ರಾಜ್ಯದಲ್ಲಿ ಯಾತ್ರೆ ಆರಂಭಗೊಳ್ಳಲಿದ್ದು, 21 ದಿನಗಳ ಕಾಲ ಕೈಪಡೆ 510 ಕಿಮೀ ನಡೆಯಲಿದ್ದು ರಾಜ್ಯದ 8 ಜಿಲ್ಲೆಗಳಲ್ಲಿ ಪಾದಯಾತ್ರೆ ಹಾದುಹೋಗಲಿದೆ.
ಸೆ. 30 ರಂದು ಗುಂಡ್ಲುಪೇಟೆಯಲ್ಲಿ ಆರಂಭವಾಗುವ ಯಾತ್ರೆ ಮಧ್ಯಾಹ್ನದ ಊಟಕ್ಕೂ ಮುನ್ನ ಬೆಂಡಗಳ್ಳಿಯಲ್ಲಿ ರಾಹುಲ್ ಗಾಂಧಿ ಕಾರ್ನರ್ ಮೀಟಿಂಗ್ ನಡೆಸಲಿದ್ದಾರೆ. ಇದಾದ ನಂತರ ಬೇಗೂರು ಸಮೀಪ ಮೊದಲ ದಿನ ವಾಸ್ತವ್ಯ ಹೂಡಲಿದ್ದು ಸಂಜೆ ಹೊತ್ತಿಗೆ ವಕೀಲರು, ವಿದ್ಯಾರ್ಥಿಗಳು, ಚಿಂತಕರು, ಕಲಾವಿದರೊಟ್ಟಿಗೆ ರಾಹುಲ್ ಗಾಂಧಿ ಜೊತೆಗೆ ಸಂವಾದ ನಡೆಸಲಿದ್ದಾರೆ.

ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಇರುವ ಹಿನ್ನೆಲೆ ನಂಜನಗೂಡು ತಾಲೂಕಿನ ಬದನವಾಳುವಿಗೆ ರಾಹುಲ್ ಗಾಂಧಿ ಭೇಟಿ ಕೊಡಲಿದ್ದಾರೆ. ಮಹಾತ್ಮ ಗಾಂಧೀಜಿ ಬದನವಾಳುವಿಗೆ ಬಂದು ಖಾದಿ ಉದ್ಯಮವನ್ನು ಉತ್ತೇಜಿಸಿ ಸ್ವಾತಂತ್ರ್ಯ ಹೋರಾಟದ ಕಹಳೆ ಮೊಳಗಿಸಿದ್ದರು.
ರಾಹುಲ್ ಗಾಂಧಿಗೆ ಭರ್ಜರಿ ಸ್ವಾಗತಕ್ಕೆ ಸಿದ್ಧತೆ
ಗುಂಡ್ಲುಪೇಟೆ ಮೂಲಕ ಪಾದಯಾತ್ರೆ ರಾಜ್ಯ ಪ್ರವೇಶಿಸಲಿದೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯವರಿಗೆ ಅದ್ದೂರಿ ಸ್ವಾಗತ ಕೋರಲು ರಾಜ್ಯ ಕಾಂಗ್ರೆಸ್ ನಿರ್ಧರಿಸಿದೆ. ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಯಲ್ಲಿ ಪಾದಯಾತ್ರೆ ಯಶಸ್ವಿಗೊಳಿಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿದಿನ 25 ಸಾವಿರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಬೇಕು. ಪ್ರತಿದಿನ 25 ಕಿಮೀ ಪಾದಯಾತ್ರೆ ನಡೆಯಲಿದ್ದು, ಬಡವರ, ರೈತರ ಹಾಗೂ ದಿನ ದಲಿತರಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು ಎಂದಿದ್ದಾರೆ.
ಕಾಂಗ್ರೆಸ್ ಜೋಡೋ ಯಾತ್ರೆ ರಾಜ್ಯದಲ್ಲಿ ಆರಂಭವಾಗುವ ಗುಂಡ್ಲುಪೇಟೆ ತಾಲೂಕಿನ ಹಾದಿಯನ್ನು 4-5 ಬಾರಿ ಕೈ ನಾಯಕರು ಪರಿಶೀಲನೆ ನಡೆಸಿದ್ದಾರೆ. ಡಿ.ಕೆ.ಶಿವಕುಮಾರ್ ಒಮ್ಮೆ, ಸಲೀಂ ಅಹಮ್ಮದ್ ಹಾಗೂ ಹರಿಪ್ರಸಾದ್ , ಮಂಗಳವಾರ ಮಾಜಿ ಸಿಎಂ ಸಿದ್ದರಾಮಯ್ಯ ಸ್ಥಳ ಪರಿಶೀಲನೆ ನಡೆಸಿದ್ದಾರೆ.












Click it and Unblock the Notifications