ಚಾಮರಾಜನಗರ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಸೇರಿ ಹಲವರು ಪೊಲೀಸರ ವಶಕ್ಕೆ-ಕಾರಣ ಏನು?
ಚಾಮರಾಜನಗರ, ಜೂನ್, 28: ವಾಲ್ಮೀಕಿ ನಿಗಮದ ಹಗರಣ ವಿರುದ್ಧ ಬಿಜೆಪಿಗರು ಚಾಮರಾಜನಗರದಲ್ಲಿ ಇಂದು (ಜೂನ್ 28) ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರ ವಶಕ್ಕೆ ಪಡೆದ ಘಟನೆ ನಡೆದಿದೆ.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಹೇಶ್, ಜಿಲ್ಲಾಧ್ಯಕ್ಷ ನಿರಂಜನಕುಮಾರ್, ಹನೂರು ವೆಂಕಟೇಶ್ ಸೇರಿ 30ಕ್ಕೂ ಅಧಿಕ ಮಂದಿ ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಅವರನ್ನು ವಶಕ್ಕೆ ಪಡೆದರು.

ಇನ್ನು, ಜಿಲ್ಲಾಡಳಿತ ಮುತ್ತಿಗೆ ಪ್ರತಿಭಟನೆಗೆ ಚಾಮರಾಜೇಶ್ವರ ದೇಗುಲದಿಂದ ಮೆರವಣಿಗೆ ನಡೆಸಿ ಸರ್ಕಾರ, ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದರು. ಜೋಡಿ ರಸ್ತೆ ತಡೆದು ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆಸಿದ ಬಿಜೆಪಿ ಕಾರ್ಯಕರ್ತರು ಕೂಡಲೇ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಮಾತನಾಡಿ, ಇಂಧನ ಬೆಲೆ ಏರಿಕೆ ಬಳಿಕ ಹಾಲಿನ ದರವನ್ನು ಸರ್ಕಾರ ಹೆಚ್ಚು ಮಾಡಿದೆ. ಗ್ಯಾರಂಟಿ ಹಣ ಕೊಡಲು ಜನರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ. ಪ.ವರ್ಗದ ಕಲ್ಯಾಣಕ್ಕೆ ಬಳಸಬೇಕಿದ್ದ ನೂರಾರು ಕೋಟಿ ಹಣ ಗುಳುಂ ಮಾಡಲಾಗಿದ್ದು, ದೊಡ್ಡ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಕಿಡಿಕಾರಿದರು.
ಹಗರಣದ ಹೊಣೆ ಹೊತ್ತು ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಿದ್ದರೂ ಯಾವ ನೈತಿಕತೆ ಮೇಲೆ ಇವರು ಆಡಳಿತ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.
ಶಿವಾಚಾರ್ಯ ಸ್ವಾಮೀಜಿ ಹೇಳಿದ್ದೇನು?: ಇದೀಗ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೂಗು ಜೋರಾಗಿ ಕೇಳಿಬರುತ್ತಿದೆ. ಇನ್ನು ಈ ಬಗ್ಗೆ ಚಿಕ್ಕೋಡಿಯಲ್ಲಿ ಮಾತನಾಡಿದ ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತರಾದ್ಯ ಶಿವಾಚಾರ್ಯ ಸ್ವಾಮೀಜಿ ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಲಿಂಗಾಯತ ಮುಖ್ಯಮಂತ್ರಿಗೆ ಬೇಡಿಕೆ ಹೆಚ್ಚಾಗಿದೆ. ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು ಎಂದು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತರಾದ್ಯ ಶಿವಾಚಾರ್ಯ ಸ್ವಾಮೀಜಿ ಚಿಕ್ಕೋಡಿಯಲ್ಲಿ ಆಗ್ರಹಿಸಿದ್ದಾರೆ.
ಇನ್ನು ನಿನ್ನೆ (ಜೂನ್ 27) ಚಂದ್ರಶೇಖರ ಸ್ವಾಮೀಜಿ ಡಿ.ಕೆ ಶಿವಕುಮಾರಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವಂತೆ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ಸ್ವಾಮೀಜಿಗಳ ಮೂಲಕವೇ ಲಿಂಗಾಯತ ಮುಖ್ಯಮಂತ್ರಿ ಕೂಗು ಎದ್ದಿದೆ.
ಚಿಕ್ಕೋಡಿಯ ಯಡೂರ ಗ್ರಾಮದಲ್ಲಿ ಶ್ರೀಶೈಲ ಜಗದ್ಗುರುಗಳಾದ ಶಿವಾಚಾರ್ಯ ಸ್ವಾಮೀಜಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಹಾಗೂ ಡಿಸಿಎಂ ಸ್ಥಾನಗಳನ್ನು ಹೆಚ್ಚುವರಿ ಮಾಡಿದರೆ, ಲಿಂಗಾಯತರಿಗೆ ಹೆಚ್ಚಿನ ಸ್ಥಾನಗಳನ್ನು ನೀಡಬೇಕು. ಚುನಾವಣೆ ಸಂದರ್ಭದಲ್ಲಿ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಿದ್ದಾರೆ ಎಂದು ಹೇಳಿದರು.
ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ, ಎಸ್.ಎಸ್.ಮಲ್ಲಿಕಾರ್ಜುನ್, ಶಾಮನೂರು ಶಿವಶಂಕರಪ್ಪ ಇಂತಹವರಿಗೆ ಅವಕಾಶ ನೀಡಬೇಕು. ಕಾಶಿ, ಉಜ್ಜಯಿನಿ, ಜಗದ್ಗುರುಗಳ ಜೊತೆಗೂ ಈ ವಿಚಾರದಲ್ಲಿ ಚರ್ಚೆ ಮಾಡಲಾಗಿದೆ ಎಂದು ಹೇಳಿದರು.












Click it and Unblock the Notifications