Cauvery Water Dispute: ಖಾಲಿ ಮಡಕೆ ಕರ್ನಾಟಕಕ್ಕೆ, ನೀರು ತಮಿಳುನಾಡಿಗೆ: ಸುಪ್ರೀಂ ಆದೇಶದ ವಿರುದ್ಧ ಚಾಮರಾಜನಗರದಲ್ಲಿ ಸಮರ
ಚಾಮರಾಜನಗರ, ಸೆಪ್ಟೆಂಬರ್, 21: ತಮಿಳುನಾಡಿಗೆ ನೀರು ಹರಿಸಬೇಕೆಂಬ ಸುಪ್ರೀಂ ಆದೇಶ ವಿರೋಧಿಸಿ ಇಂದು ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳ ಮುಖಂಡರು ಖಾಲಿ ಮಡಕೆ ಹಿಡಿದು ಪ್ರತಿಭಟನೆ ನಡೆಸಿದರು.
ಚಾಮರಾಜೇಶ್ವರ ದೇಗುಲ ಮುಂಭಾಗ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಖಾಲಿ ಮಡಕೆಗಳನ್ನು ಹಿಡಿದು ಸುಪ್ರೀಂ ಕೋರ್ಟ್ ತೀರ್ಪು ಹಾಗೂ ತಮಿಳುನಾಡು ಸರ್ಕಾರಕ್ಕೆ ಧಿಕ್ಕಾರದ ಘೋಷಣೆ ಕೂಗಿದರು. ಖಾಲಿ ಮಡಕೆ ಕರ್ನಾಟಕಕ್ಕೆ- ನೀರು ತಮಿಳುನಾಡಿಗೆ ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು, ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಲಿ ಮಡಕೆಗಳನ್ನು ಒಡೆದು ಆಕ್ರೋಶ ಹೊರಹಾಕಿದರು.

ತಮಿಳುನಾಡು ನಾಶವಾಗಲಿ, ಸುಪ್ರೀಂ ಕೋರ್ಟ್ ತೀರ್ಪಿಗೆ ಧಿಕ್ಕಾರ, ಸತ್ತುಹೋಯ್ತು ತಮಿಳುನಾಡು ಎಂದು ಘೋಷಣೆಗಳನ್ನು ಕೂಗಿ ಮಡಕೆಗಳನ್ನು ಒಡೆದು ಹಾಕಿ ಆಕ್ರೋಶ ಹೊರಹಾಕಿದರು.
ಸುಪ್ರೀಂ ಆದೇಶದ ವಿರುದ್ಧ ರೈತರ ಆಕ್ರೋಶ
ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನೀಡಿರುವ ಸುಪ್ರೀಂ ಕೋರ್ಟ್ ಆದೇಶದ ವಿರುದ್ಧ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ, ರಾಷ್ಟ್ರಪಕ್ಷ ಸಮಿತಿ, ಮೈಷುಗರ್ ಕಬ್ಬು ಬೆಳೆಗಾರರ ಸಂಘ ಸೇರಿದಂತೆ ಹಲವು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ಕರ್ನಾಟಕ ರಾಷ್ಟ್ರಪಕ್ಷ ಸಮಿತಿ ಕಾರ್ಯಕರ್ತರು ವೃತ್ತದಲ್ಲಿ ಕೆಲ ಕಾಲ ಮಾನವ ಸರಪಳಿ ನಿರ್ಮಿಸಿ ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿದರು. ಬಳಿಕ ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಯುತ್ತಿರುವ ಧರಣಿ ಸ್ಥಳಕ್ಕೆ ತೆರಳಿ ರಸ್ತೆ ತಡೆ ನಡೆಸಿದರು. ಇದರಿಂದ ಕೆಲ ಕಾಲ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿತ್ತು.
15 ದಿನಗಳ ಕಾಲತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಿರುವುದು ಅವೈಜ್ಞಾನಿಕವಾಗಿದೆ. ನಮ್ಮ ರಾಜ್ಯದಲ್ಲಿ ಕಡಿಯುವ ನೀರಿಗೂ ಬರ ಎದುರಾಗಿದೆ. ಹೀಗಿರುವಾಗ ನಾವು ಹೇಗೆ ತಮಿಳುನಾಡಿಗೆ ನೀರು ಬಿಡಲು ಸಾಧ್ಯ ಎಂದು ನಗರಸಭೆ ಮಾಜಿ ಅಧ್ಯಕ್ಷೆ ಅಂಬುಜಮ್ಮ ಕಣ್ಣೀರು ಹಾಕಿದರು. ಅಲ್ಲದೆ ಸುಪ್ರೀಂ ಕೋರ್ಟ್ನ ನ್ಯಾಯಾಧೀಶರು ಸಾಕ್ಷಾತ್ ದೇವರೆಂದೇ ಭಾವಿಸಲಾಗಿದೆ. ಅವರು ನೀಡುವ ತೀರ್ಪು ನ್ಯಾಯಸಮ್ಮತವಾಗಿರುತ್ತದೆ ಎಂದು ತಿಳಿಸಿದಿದ್ದೆವು. ಆದರೆ ಒಂದು ರಾಜ್ಯದ ಪರವಾಗಿ ತೀರ್ಪು ನೀಡುವ ಮೂಲಕ ಅನ್ಯಾಯ ಮಾಡುತ್ತಿದ್ದಾರೆ ಎಂದು ದೂರಿದರು.
ಕರ್ನಾಟಕದ ವಾಸ್ತವ ಪರಿಸ್ಥಿತಿಯನ್ನು ಅರಿತು ನ್ಯಾಯದಾನ ಮಾಡಬೇಕು. ಅದು ಬಿಟ್ಟು ಒಂದು ರಾಜ್ಯದ ಪರವಾಗಿ ತೀರ್ಪು ನೀಡಿ ಮತ್ತೊಂದು ರಾಜ್ಯಕ್ಕೆ ಅನ್ಯಾಯ ಮಾಡುವುದು ಎಷ್ಟು ಸರಿ? ಈ ಆದೇಶದಿಂದ ಜನ-ಜಾನುವಾರುಗಳ ಕುಡಿಯುವ ನೀರಿಗೂ ತತ್ವಾರ ಉಂಟಾಗುತ್ತದೆ. ಮುಂದೆ ಆಗುವ ಅನಾವುತಕ್ಕೆ ಯಾರು ಕಾರಣ ಎಂದು ಪ್ರಶ್ನಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ರೈತರಿಬ್ಬರಿಂದ ಸುಪ್ರೀಂ ಕೋರ್ಟ್ಗೆ ಅರ್ಜಿ
ಕಾವೇರಿ ನೀರಿಗಾಗಿ ಸುಪ್ರೀಂಕೋರ್ಟ್ಗೆ ಜಿಲ್ಲೆಯ ಇಬ್ಬರು ರೈತರು ಕಾನೂನು ಸಂಘರ್ಷಕ್ಕೆ ಮುಂದಾಗಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತರೀಕೆರೆ ಗ್ರಾಮದ ಪ್ರಗತಿಪರ ರೈತ ಕೆ.ಕೆಂಪರಾಜು, ಮತ್ತು ಪಾಂಡವಪುರ ತಾಲೂಕಿನ ನಿವೃತ್ತ ಯೋಧ ಮತ್ತು ರೈತ ಆರ್.ಪಿ. ರವಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ತಮ್ಮನ್ನೂ ಮೂಲ ದಾವೆಯಲ್ಲಿ ಪಕ್ಷಗಾರರನ್ನಾಗಿ ಮಾಡಿಕೊಳ್ಳುವಂತೆ ಅಹವಾಲು ಅರ್ಜಿ ಸಲ್ಲಿಸಿದ್ದಾರೆ.
ಈಗಾಗಲೇ ಶಾಸಕ ದರ್ಶನ್ ಪುಟ್ಟಣ್ಣಯ್ಯ ರೈತ ಸಂಘದ ಪರವಾಗಿ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದು, ಇದೀಗ ಇಬ್ಬರೂ ರೈತರು ಸಲ್ಲಿಸಿರುವ ಅರ್ಜಿಗಳು ನಾಳೆ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ಬರಲಿವೆ. ಸರ್ಕಾರದ ಜೊತೆ ರೈತರು ಮತ್ತು ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಪರಿಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲು ಅವಕಾಶವಾಗಲಿದೆ. ಕಾನೂನು ಸಂಘರ್ಷಕ್ಕೆ ಮಂಡ್ಯ ರೈತರು ಮುಂದಾಗುವ ಮೂಲಕ ತಮ್ಮ ಹೋರಾಟಕ್ಕೆ ಕೇವಲ ಸಾಂಕೇತಿಕವಾಗಿರದೆ, ರೈತರ ಹಿತರಕ್ಷಣೆಗಾಗಿ ನೆರೆಯ ರಾಜ್ಯದ ಕಾನೂನು ಹೋರಾಟಕ್ಕೆ ಪ್ರತಿ ಸವಾಲು ಒಡ್ಡುವ ಮೂಲಕ ಗಮನ ಸೆಳೆದಿದ್ದಾರೆ.
ಮೈಷುಗರ್ ಕಬ್ಬು ಬೆಳೆಗಾರರ ಒಕ್ಕೂಟದಿಂದ ಪ್ರತಿಭಟನೆ
ಸುಪ್ರೀಂ ಕೋರ್ಟ್ ಆದೇಶ ವಿರೋಧಿಸಿ, ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಹರಿಸದಂತೆ ಒತ್ತಾಯಿಸಿ ಮೈಷುಗರ್ ಕಬ್ಬು ಬೆಳೆಗಾರರ ಒಕ್ಕೂಟದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜೆ.ಸಿ. ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಬಳಿಕ ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ಧರಣಿ ಸ್ಥಳಕ್ಕೆ ತೆರಳಿ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುವ ಮೂಲಕ ಬೆಂಬಲ ಸೂಚಿಸಿದರು.
ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ, ಮುಖಂಡರಾದ ಮೀರಾ ಶಿವಲಿಂಗಯ್ಯ, ಸುನಂದಾ ಜಯರಾಂ, ಅಂಬುಜಮ್ಮ, ಪ್ರೊ.ಬಿ.ಶಿವಲಿಂಗಯ್ಯ, ಕನ್ನಡ ಸೇನೆ ಮಂಜುನಾಥ್, ರೈತ ಮುಖಂಡ ಚಂದ್ರಶೇಖರ್, ದಸಂಸದ ಎಂ.ವಿ.ಕೃಷ್ಣ, ಕಬ್ಬು ಬೆಳೆಗಾರರಾದ ವೇಣುಗೋಪಾಲ್, ಹೊಸಹಳ್ಳಿ ಶಿವು, ಇಂಡುವಾಳು ಬಸವರಾಜು, ರಾಮಯ್ಯ, ಬೋರಯ್ಯ, ಎಂ.ಎಲ್.ತುಳಸೀಧರ್ ಸೇರಿದಂತೆ ನೂರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.












Click it and Unblock the Notifications