ಚಾಮರಾಜನಗರದಲ್ಲಿ ಕಾವೇರಿ ಕಿಚ್ಚು: ಖಾಲಿ ಟಿನ್ಗಳನ್ನು ಬಡಿದು ಸರ್ಕಾರದ ವಿರುದ್ಧ ಆಕ್ರೋಶ
ಚಾಮರಾಜನಗರ, ಅಕ್ಟೋಬರ್ 05: ರಾಜ್ಯ ಸರ್ಕಾರವು ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ಸೇನಾ ಪಡೆಯಿಂದ ಪ್ರತಿಭಟನೆ ಮುಂದುವರೆದಿದ್ದು, ಇಂದು ಕೂಡ ಖಾಲಿ ಟೀನ್ಗಳನ್ನು ಬಡಿಯುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.
ಚಾಮರಾಜನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ಖಾಲಿ ಟೀನ್ಗಳನ್ನು ಬಡಿಯುತ್ತಾ ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಿದರು.

ಕೇಂದ್ರ, ರಾಜ್ಯ ಹಾಗೂ ಕಾವೇರಿ ನಿರ್ವಹಣ ಮಂಡಳಿ ,ತಮಿಳುನಾಡು ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, 'ರಾಜ್ಯ ಸರ್ಕಾರ ಕಳೆದ ಇಪ್ಪತ್ತಾರು ದಿನಗಳಿಂದಲೂ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಮೂಲಕ ಖಾಲಿ ಟಿನ್ ಆಗಿದೆ . ಕೂಡಲೇ ರಾಜ್ಯ ಸರ್ಕಾರ ನೀರನ್ನು ನಿಲ್ಲಿಸಬೇಕು' ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿ ರಾಜು, ಮಹೇಶ್ ಗೌಡ, ನಿಜಧ್ವನಿ ಗೋವಿಂದರಾಜು ಸೇರಿದಂತೆ ಕರ್ನಾಟಕ ಸೇನಾ ಪಡೆಯ ಇತರ ಸದಸ್ಯರು ಭಾಗಿಯಾಗಿದ್ದರು.
ಚಾಮರಾಜನಗರದಲ್ಲಿ ಕಾವೇರಿ ಕಿಚ್ಚು :ಕಿವಿ ಮೇಲೆ ಹೂವಿಟ್ಟುಕೊಂಡು ರಸ್ತೆ ತಡೆ
ಚಾಮರಾಜನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ಚಾಮರಾಜನಗರದಲ್ಲಿ ಕಳೆದ 29 ದಿನಗಳಿಂದಲೂ ನಿರಂತರ ಪ್ರತಿಭಟನೆ ನಡೆಸಲಾಗುತ್ತಿದೆ.
ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕಿವಿಗೆ ಚೆಂಡು ಹೂ ಇಟ್ಟುಕೊಂಡು ರಸ್ತೆ ತಡೆ ನಡೆಸಿದರು.
ಕಾವೇರಿ ನೀರು ನಿರ್ವಹಣ ಪ್ರಾಧಿಕಾರ ಕನ್ನಡಿಗರಿಗೆ ಹೂವು ಮುಡಿಸಿದೆ, ಕರ್ನಾಟಕ ಸರ್ಕಾರ ನಿರಂತರವಾಗಿ ನೀರು ಹರಿಸುವ ಮೂಲಕ ರೈತರು, ಜನರ ಕಿವಿಗೆ ಹೂವು ಮುಡಿಸಿದೆ ಎಂದು ಆಕ್ರೋಶ ಹೊರಹಾಕಿದರು. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಸ್ಟಾಲಿನ್ ಹಾಗೂ ಕಾವೇರಿ ಪ್ರಾಧಿಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.












Click it and Unblock the Notifications