ಕಾವೇರಿ ಕಿಚ್ಚು: ಚಾಮರಾಜನಗರದಲ್ಲಿ ತಮಟೆ ಬಾರಿಸಿ ರಸ್ತೆ ತಡೆ, ಅರೆ ಬೆತ್ತಲೆ ಉರುಳುಸೇವೆ
ಚಾಮರಾಜನಗರ, ಸೆಪ್ಟೆಂಬರ್ 29: ಕಾವೇರಿ ನೀರಿಗಾಗಿ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಇಂದು ಬೆಳಗ್ಗೆ 6ರಿಂದಲೇ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಭುವನೇಶ್ವರಿ ವೃತ್ತದಲ್ಲಿ ಕಬ್ಬು ಬೆಳೆಗಾರರ ಸಂಘ, ಕನ್ನಡಪರ ಸಂಘಟನೆಗಳು ರಸ್ತೆ ತಡೆ ನಡೆಸಿ ತಮಿಳುನಾಡು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ರೈತ ಮುಖಂಡ ಹಳ್ಳಿಕೆರೆಹುಂಡಿ ಹುಂಡಿ ಭಾಗ್ಯರಾಜ್, ಕನ್ನಡಪರ ಹೋರಾಟಗಾರ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಮಟೆ ಬಾರಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಬಳಿಕ ರಸ್ತೆ ಮಧ್ಯದಲ್ಲಿ ಅರೆಬೆತ್ತಲೆಯಾಗಿ ಉರುಳುಸೇವೆ ನಡೆಸಿ ಸರ್ಕಾರದ ವಿರುದ್ಧ ಕಿಡಿಕಾರಿದರು. 'ಬಂದಪ್ಪ ಬಂದ್ದು-ಕರ್ನಾಟಕ ಬಂದ್' ಎಂದು ತಮಟೆ ಬಾರಿಸಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಪ್ರತಿಭಟನಾಕಾರರು ಧರಣಿ ಮುಂದುವರಿಸಿದ್ದಾರೆ.
'ರೈತರಿಗೆ ಮೋಸ ಮಾಡಿದ ಸರ್ಕಾರ': ಕಿವಿ ಮೇಲೆ ಹೂವಿಟ್ಟು ಪ್ರತಿಭಟನೆ
ಗಡಿಜಿಲ್ಲೆ ಚಾಮರಾಜನಗರದಲ್ಲಿ ಕರ್ನಾಟಕ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರೈತರು, ಕನ್ನಡಪರ ಸಂಘಟನೆಗಳು, ದಲಿತಪರ ಹೋರಾಟಗಾರರು ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಭುವನೇಶ್ವರಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಕೆಎಸ್ಆರ್ ಟಿಸಿ ಬಸ್ ನಿಲ್ದಾಣ, ಷರೀಫ್ ವೃತ್ತ, ಗುಂಡ್ಲುಪೇಟೆ ವೃತ್ತ, ಸಂತೇಮರಹಳ್ಳಿ ವೃತ್ತ, ಅಂಗಡಿ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಗುಂಡ್ಲುಪೇಟೆ ವೃತ್ತದಲ್ಲಿ 'ಸತ್ತೊದ್ರಪ್ಪ, ಸತ್ತೋದ್ರು' ಎಂದು ಸಂಸದರು, ಶಾಸಕರು ಹಾಗೂ ಸಚಿವರ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ನೃತ್ಯ ಮಾಡಿದರು. ಸಂತೇಮರಹಳ್ಳಿ ವೃತ್ತದಲ್ಲಿ ಕಿವಿ ಮೇಲೆ ಗುಲಾಬಿ ಹೂಗಳನ್ನು ಇಟ್ಟುಕೊಂಡು ರೈತರ ಕಿವಿ ಮೇಲೆ ಹೂವಿಡುವ ಸರ್ಕಾರ ಎಂದು ಆಕ್ರೋಶ ಹೊರಹಾಕಿದರು.
ಬೆಳಗ್ಗೆ 6ರಿಂದಲೇ ಚಾಮರಾಜನಗರದಲ್ಲಿ ಸಾರಿಗೆ ಸಂಸ್ಥೆ ಹಾಗೂ ಖಾಸಗಿ ಬಸ್ ಗಳು, ಆಟೋಗಳು, ಲಾರಿಗಳು ರಸ್ತೆಗಿಳಿದಿಲ್ಲ, ಬಹುತೇಕ ಎಲ್ಲಾ ಅಂಗಡಿಗಳು ಕೂಡ ಮುಚ್ಚಿದ್ದು, ಹಾಲಿನ ಕೇಂದ್ರಗಳು ಮಾತ್ರ ತೆರೆದಿವೆ. ಕರ್ನಾಟಕ ಬಂದ್ಗೆ ಆರಂಭದಿಂದಲೂ ಚಾಮರಾಜನಗರದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ.












Click it and Unblock the Notifications