ಕನ್ನಡಿಗರಿಗೆ ಬೀರು-ತಮಿಳುನಾಡಿಗೆ ನೀರು: ಸರ್ಕಾರದ ವಿರುದ್ಧ ಮಹಿಳೆಯರ ಆಕ್ರೋಶ
ಚಾಮರಾಜನಗರ, ಅಕ್ಟೋಬರ್ 09: ರಾಜ್ಯ ಸರ್ಕಾರ ಹೊಸದಾಗಿ ಮದ್ಯದಂಗಡಿಗಳನ್ನು ತೆರೆಯಲು ಮುಂದಾಗುತ್ತಿದೆ ಎಂದು ಆರೋಪಿಸಿ ಚಾಮರಾಜನಗರ ಬಿಜೆಪಿ ಮಹಿಳಾ ಮೋರ್ಚಾ ಅಣಕು ಶವಯಾತ್ರೆ ನಡೆಸಿ ಆಕ್ರೋಶ ಹೊರಹಾಕಿದರು.
ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಸಂತೇಮರಹಳ್ಳಿ ವೃತ್ತದಲ್ಲಿ ಖಾಲಿ ಮದ್ಯದ ಬಾಟಲಿಗಳ ಜೊತೆ ಅಣಕು ಶವಯಾತ್ರೆ ನಡೆಸಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಆರಂಭದಲ್ಲಿ ಪೊಲೀಸರು ಅಣಕು ಶವಯಾತ್ರೆಗೆ ಅವಕಾಶ ಕೊಡದ ಹಿನ್ನೆಲೆ ಆಕ್ರೋಶಗೊಂಡ ಮಹಿಳಾ ಕಾರ್ಯಕರ್ತರು ಪಟ್ಟು ಬಿಡದೇ ಅಣಕು ಶವಯಾತ್ರೆ ನಡೆಸಿದರು.
ಸಂತೇಮರಹಳ್ಳಿ ವೃತ್ತದಿಂದ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಶವಯಾತ್ರೆ ನಡೆಸಿ- ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ವಿರುದ್ದ ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರರು ಕನ್ನಡಿಗರಿಗೆ ಬೀರು-ತಮಿಳುನಾಡಿಗೆ ನೀರು ಕೊಟ್ಟ ಸರ್ಕಾರ ಎಂದು ಘೋಷಣೆಗಳನ್ನು ಕೂಗಿದರು.
ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋ ಮೀಟರ್ ಗಟ್ಟಲೇ ವಾಹನಗಳು ನಿಂತು ಸಂಚಾರ ಅಸ್ತವ್ಯಸ್ತವಾಗಿತ್ತು. ಮಹಿಳಾ ಮೋರ್ಚಾ ಪ್ರತಿಭಟನೆಗೆ ಮಾಜಿ ಶಾಸಕ ಎನ್.ಮಹೇಶ್ ಸಾಥ್ ನೀಡಿದ್ದಾರೆ.

ಕಾವೇರಿ ಕಿಚ್ಚು: ಚಾಮರಾಜನಗರದಲ್ಲಿ ಪೊರಕೆ ಚಳವಳಿ
ಕಳೆದ 1 ತಿಂಗಳಿನಿಂದಲೂ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದೆಂದು ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು ಇಂದು ಪೊರಕೆ ಚಳವಳಿ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಚಾಮರಾಜನಗರದ ಚಾಮರಾಜೇಶ್ವರ ದೇವಾಲಯದಿಂದ ಭುವನೇಶ್ವರಿ ವೃತ್ತದ ತನಕ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಪೊರಕೆ ಹಿಡಿದು ಮೆರವಣಿಗೆ ನಡೆಸಿ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದರು.
ಕಾವೇರಿ ನೀರನ್ನು ತಮಿಳುನಾಡಿನ 3 ಬೆಳೆಗೆ ಹರಿಸಲಾಗುತ್ತಿದೆ. ಆದರೆ, ನಮ್ಮಲ್ಲಿ ಕುಡಿಯಲು ನೀರಿಲ್ಲ, ತರಕಾರಿ ಬೆಳೆಗಳು ಒಣಗುತ್ತಿವೆ, ನಮ್ಮ ರೈತರು, ಜನರು ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು, ನೀರು ಹರಿಸಿ ಮತ್ತೇ ಮತ್ತೇ ರೈತರನ್ನು ಸಂಕಷ್ಟಕ್ಕೆ ದೂಡಬಾರದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ವಿರುದ್ಧ ಗಾಯದ ಮೇಲೆ ಬರೆ ಎಳೆಯುತ್ತಿದ್ದು ವಾಸ್ತವ ಸ್ಥಿತಿ ಅರಿತು ಸಂಕಷ್ಟ ಸೂತ್ರ ಕೊಡಲಿ ಎಂದು ಹೋರಾಟಗಾರರು ಒತ್ತಾಯಿಸಿದರು.
ಇದೇ ರೀತಿ ರಾಜ್ಯಕ್ಕೆ ಅನ್ಯಾಯ ಮುಂದುವರೆದರೇ ತಮಿಳುನಾಡಿನ ಉತ್ಪನ್ನಗಳನ್ನು ಬಹಿಷ್ಕಾರ ಮಾಡುತ್ತೇವೆ. ತಮಿಳುನಾಡು ಗಡಿಯನ್ನು ಬಂದ್ ಮಾಡುತ್ತೇವೆ ಎಂದು ಹೋರಾಟಗಾರರು ಎಚ್ಚರಿಕೆ ಕೊಟ್ಟರು.












Click it and Unblock the Notifications