ಆಸ್ಪತ್ರೆ ಆಕ್ಸಿಜನ್ ದುರಂತ; ಚಾಮರಾಜನಗರ ಡಿಸಿ ಎತ್ತಂಗಡಿ
ಚಾಮರಾಜನಗರ, ಮೇ 20; ಚಾಮರಾಜನಗರ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ವರ್ಗಾವಣೆ ಮಾಡಲಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಉಂಟಾಗಿ 24 ಕೋವಿಡ್ ಸೋಂಕಿತರು ಮೃತಪಟ್ಟ ಪ್ರಕರಣದ ಹಿನ್ನಲೆಯಲ್ಲಿ ವರ್ಗಾವಣೆ ಮಾಡಲಾಗಿದೆ.
ಯಾವುದೇ ಹುದ್ದೆಯನ್ನು ನೀಡದೆ ಡಾ. ಎಂ. ಆರ್. ರವಿ ವರ್ಗಾವಣೆ ಮಾಡಲಾಗಿದೆ. ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ಬಿ. ಸಿ. ಸತೀಶ್ ನೇಮಕಗೊಂಡಿದ್ದಾರೆ. ಗುರುವಾರವೇ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಉಂಟಾಗಿ 24 ಕೋವಿಡ್ ಸೋಂಕಿತರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆದಿತ್ತು. ಜಿಲ್ಲಾಧಿಕಾರಿಗಳು, ಜಿಲ್ಲಾ ಆಸ್ಪತ್ರೆ ಸಿಬ್ಬಂದಿ ಕಾರಣ ಎಂದು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಸಮಿತಿ ಕರ್ನಾಟಕ ಹೈಕೋರ್ಟ್ಗೆ ವರದಿ ನೀಡಿತ್ತು.
ಬಿ. ಸಿ. ಸತೀಶ್ ಧಾರವಾಡ ಜಿಲ್ಲಾ ಪಂಚಾಯಿತಿ ಸಿಇಓ ಆಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ಕೆಲವು ದಿನಗಳ ಹಿಂದೆಯೇ ಅವರನ್ನು ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು. ಆದರೆ ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಡಾ. ಎಂ. ಆರ್. ರವಿ ಜಿಲ್ಲಾಧಿಕಾರಿಯಾಗಿ ಮುಂದುವರೆದಿದ್ದರು.
ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಮೆ 3ರ ರಾತ್ರಿ ಆಕ್ಸಿಜನ್ ಕೊರತೆ ಉಂಟಾಗಿತ್ತು. ರಾತ್ರಿ 10.30ರಿಂದ ಸುಮಾರು 4 ಗಂಟೆಗಳ ಕಾಲ ಆಕ್ಸಿಜನ್ ಇರಲಿಲ್ಲ. ಈ ಘಟನೆಗೆ ಜಿಲ್ಲಾ ಆಸ್ಪತ್ರೆ ಸಿಬ್ಬಂದಿ ಮತ್ತು ಜಿಲ್ಲಾಧಿಕಾರಿಗಳು ಹೊಣೆ ಎಂದು ವರದಿ ಬಂದಿತ್ತು.
ನಿವೃತ್ತ ನ್ಯಾಯಮೂರ್ತಿ ಎ. ಎಸ್. ವೇಣುಗೋಪಾಲ್ ಗೌಡ ನೇತೃತ್ವದ ಸಮಿತಿ ಘಟನೆ ಬಗ್ಗೆ ತನಿಖೆ ನಡೆಸಿತ್ತು. ಜಿಲ್ಲಾಧಿಕಾರಿಗಳು ಘಟನೆಗೆ ಕಾರಣ ಎಂದು ವರದಿಯಲ್ಲಿ ಹೇಳಿತ್ತು. ಈ ವರದಿ ಬಳಿಕ ಸರ್ಕಾರ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿದೆ.












Click it and Unblock the Notifications