ವ್ಯಾಪಕ ಆಕ್ರೋಶ; ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ಸಂಚಾರ ನಿಷೇಧ ಆದೇಶ ವಾಪಸ್
ಸಾರ್ವಜನಿಕರು ಹಾಗೂ ಭಕ್ತಾದಿಗಳಿಂದ ಭಾರೀ ಟೀಕೆ ವ್ಯಕ್ತವಾದ ಹಿನ್ನೆಲೆ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಮಧ್ಯಾಹ್ನ 3 ಗಂಟೆಯೊಳಗೆ ಬಸ್ ಸಂಚಾರ ನಿಷೇಧಿಸಿ ಹೊರಡಿಸಿದ ಆದೇಶವನ್ನು ತಹಸೀಲ್ದಾರ್ ಟಿ.ರಮೇಶ್ ಬಾಬು ಒಂದೇ ದಿನಕ್ಕೆ ಹಿಂಪಡೆದಿದ್ದಾರೆ. ಈ ಮೂಲಕ ಪ್ರವಾಸಿಗರಿಗೆ ಗೋಪಾಲನ ದರ್ಶನ ಎಂದಿನಂತೆ ಸಿಗಲಿದೆ.
ವಿವಿಧ ಕಾರಣ ನೀಡಿ ತಾಲ್ಲೂಕು ಆಡಳಿತ ಹಾಗೂ ತಹಸೀಲ್ದಾರ್ ಟಿ.ರಮೇಶ್ ಬಾಬು ಗೋಪಾಲಸ್ವಾಮಿ ಬೆಟ್ಟಕ್ಕೆ ಮಧ್ಯಾಹ್ನ 3 ಗಂಟೆಗೆ ಬಸ್ ಸಂಚಾರ ನಿಷೇಧಿಸಿ ಗುರುವಾರ ಆದೇಶ ಹೊರಡಿಸಿದ್ದರು. ಆದರೆ ಸಾರ್ವಜನಿಕರು ಹಾಗೂ ಭಕ್ತಾದಿಗಳು ಈ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

ಕನ್ನೇಗಾಲ ಗ್ರಾಮಸ್ಥರು ಸ್ವತಃ ತಹಸೀಲ್ದಾರ್ ಬಳಿ ಆದೇಶ ಹಿಂಪಡೆಯುವಂತೆ ಲಿಖಿತ ಮನವಿ ಸಲ್ಲಿಸಿದ್ದರು. ಈ ಕುರಿತು ತಹಸೀಲ್ದಾರ್ ಟಿ.ರಮೇಶ್ ಬಾಬು ಮೇಲಾಧಿಕಾರಿಗಳ ಜೊತೆ ಚರ್ಚಿಸಿ ಅವರ ಸೂಚನೆಯ ಮೇರೆಗೆ ಈ ಹಿಂದೆ ಇದ್ದ ನಿಯಮದಂತೆ 4 ಗಂಟೆಯವರೆಗೆ ಬಸ್ ಸಂಚಾರಕ್ಕೆ ಅನುವು ಮಾಡಿಕೊಟ್ಟು ಹೊಸ ಆದೇಶವನ್ನು ಹಿಂಪಡೆದಿದ್ದಾರೆ. ಜೊತೆಗೆ ಅರಣ್ಯ ಇಲಾಖೆಯಿಂದ ಹೆಚ್ಚುವರಿ ಸಿಬ್ಬಂದಿ ನೇಮಿಸಿ ದೇವಾಲಯಕ್ಕೆ ಪ್ರಸಾದ ತಿನ್ನಲು ಬರುವ ಕಾಡಾನೆಯ ಮೇಲೆ ನಿಗಾವಹಿಸುವಂತೆ ಸೂಚಿಸಿದ್ದಾರೆ.
ಈ ಕುರಿತು ತಹಸೀಲ್ದಾರ್ ಟಿ.ರಮೇಶ್ ಬಾಬು ಪ್ರತಿಕ್ರಿಯೆ ನೀಡಿದ್ದು, ದೂರದ ಊರುಗಳಿಂದ ಬರುವ ಪ್ರವಾಸಿಗರು, ಭಕ್ತಾದಿಗಳು ಹಾಗೂ ಸಾರ್ವಜನಿಕರಿಗೆ 3 ಗಂಟೆಯೊಳಗೆ ಬಸ್ ಸಂಚಾರ ನಿಷೇಧದ ಆದೇಶದಿಂದ ಸಮಸ್ಯೆಯಾಗುತ್ತದೆ ಎಂದು ದೂರುಗಳು ಕೇಳಿಬಂದ ಹಿನ್ನೆಲೆ ಜೊತೆಗೆ ಪ್ರವಾಸಿಗರ ಅನುಕೂಲತೆಯ ಉದ್ದೇಶದಿಂದ ಹೊಸ ಆದೇಶವನ್ನು ಹಿಂಪಡೆಯಲಾಗಿದೆ ಎಂದಿದ್ದಾರೆ.












Click it and Unblock the Notifications