ಇಂದಿನಿಂದ ಚಿಕ್ಕಲ್ಲೂರು ಜಾತ್ರೆ: ಸೂಕ್ತ ಪೊಲೀಸ್ ಬಂದೋಬಸ್ತ್
ಚಾಮರಾಜನಗರ, ಜನವರಿ 21: ಪ್ರಸಿದ್ಧ ಚಿಕ್ಕಲ್ಲೂರು ಜಾತ್ರಾ ಮಹೋತ್ಸವವು ಜನವರಿ 21 ರಿಂದ 26 ರ ವರೆಗೆ ನಡೆಯಲಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತ ಭಕ್ತಾಧಿಗಳಿಗೆ ಮೂಲ ಸೌಕರ್ಯ ಹಾಗೂ ನ್ಯಾಯಾಲಯದ ನಿರ್ದೇಶನದಂತೆ ಪ್ರಾಣಿಬಲಿ ತಡೆಗೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ.
ಆರು ದಿನಗಳ ಕಾಲ ನಡೆಯಲಿರುವ ಚಿಕ್ಕಲ್ಲೂರು ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನಲೆಯಲ್ಲಿ ಜಿಲ್ಲಾಡಳಿತ ಕುಡಿಯುವ ನೀರು, ಶೌಚಾಲಯ, ರಸ್ತೆ, ಇನ್ನಿತರೆ ಮೂಲ ಸೌಲಭ್ಯಗಳಿಗೆ ಸಕಲ ವ್ಯವಸ್ಥೆ ಮಾಡಿದೆ. ದೇವಸ್ಥಾನದ ಟ್ರಸ್ಟ್ ವತಿಯಿಂದಲೂ ಭಕ್ತಾಧಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ.
ಬಂದೇಬಿಟ್ಟಿತು ಚುಂಚನಕಟ್ಟೆ ಜಾತ್ರೆ, ಮತ್ತೇಕೆ ತಡ ಹೋಗೋಣ ಬನ್ನಿ...
ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಹಾಗೂ ಪ್ರಾಣಿಬಲಿ ತಡೆಗೆ ಹೈಕೋರ್ಟ್ ನೀಡಿರುವ ಆದೇಶವನ್ನು ಯಾವುದೇ ಕಾರಣಕ್ಕೂ ಉಲ್ಲಂಘಿಸದಂತೆ ಅಗತ್ಯ ಕ್ರಮಗಳನ್ನು ವಹಿಸಬೇಕೆಂದು ದೇವಾಲಯದ ಮಂಡಳಿಗೆ ಸೂಚಿಸಿದ್ದಾರೆ.
ದೇವರ ಹೆಸರಿನಲ್ಲಿ ಪ್ರಾಣಿಬಲಿ ನಡೆಸದಂತೆ ಹಾಗೂ ಕರ್ನಾಟಕ ಪ್ರಾಣಿಬಲಿ ಪ್ರತಿಬಂಧಕ ಅಧಿನಿಯಮ 1963 (ಕರ್ನಾಟಕ ಪ್ರಿವೆನ್ಶನ್ ಆಫ್ ಅನಿಮಲ್ ಸಾಕ್ರಿಪೈಸ್ ಆಕ್ಟ್ 1959 ಮತ್ತು ಕರ್ನಾಟಕ ಪ್ರೆವೆಷನ್ ಆಫ್ ಅನಿಮಲ್ ಸಾಕ್ರಿಪೈಸ್ ಆಕ್ಟ್ 1963) ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪ್ರಾಣಿಬಲಿ ತಡೆ ಸಂಬಂಧ ಜಾತ್ರೆಯ ವಿವಿಧ ಸ್ಥಳಗಳಲ್ಲಿ ಮೂರು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳನ್ನು ನಿಯೋಜಿಸಿ ಆದೇಶ ಹೊರಡಿಸಿದ್ದಾರೆ. ಪ್ರಾಣಿಬಲಿ ಹಾಗೂ ಮಾರಕಾಸ್ತ್ರಗಳನ್ನು ತರುವುದನ್ನು ನಿಷೇಧಿಸಲಾಗಿದ್ದು, ಈ ಸಂಬಂಧ ಕಾಯ್ದೆ ಆದೇಶವನ್ನು ಉಲ್ಲಂಘಿಸಬಾರದು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದ್ದಾರೆ.