ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಪ್ರವೇಶವಿಲ್ಲ: ಸಚಿವ ಪುಟ್ಟರಂಗಶೆಟ್ಟಿ
ಮೈಸೂರು, ನವೆಂಬರ್. 12: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಹಾದು ಹೋಗುವ ಅಂತರಾಜ್ಯ ಸಂಪರ್ಕ ರಸ್ತೆಯಲ್ಲಿ ರಾತ್ರಿ ಸಂಚಾರಕ್ಕೆ ಅನುಮತಿ ಕೊಡುವ ಪ್ರಶ್ನೆಯೇ ಇಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಚಾಮರಾಜ ನಗರ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಂಡೀಪುರ ಅತೀ ಸೂಕ್ಷ್ಮ ಅರಣ್ಯ ಪ್ರದೇಶ. ರಾತ್ರಿ ವೇಳೆ ವನ್ಯಪ್ರಾಣಿಗಳು ಓಡಾಡುತ್ತಿರುತ್ತವೆ. ಹೀಗಿರುವಾಗ ವಾಹನ ಸಂಚಾರಕ್ಕೆ ಅವಕಾಶ ಕೊಡಲು ಬರಲ್ಲ. ಇದಲ್ಲದೆ ಸೂಕ್ಷ್ಮ ಪರಿಸರ ವಲಯ ಅಂತ ಘೋಷಣೆ ಮಾಡಿರುವ ಕಾರಣ ಕಾರಿಡಾರ್ ನಿರ್ಮಿಸಲು ಸಾಧ್ಯವಿಲ್ಲ. ನಾನು, ಅರಣ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದವರೊಡನೆ ಸಮಾಲೋಚನೆ ನಡೆಸಿದ್ದೇನೆ ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದಲೂ ಹೋಬಳಿಗೊಂದು ಮೊರಾರ್ಜಿ ದೇಸಾಯಿ ವಸತಿ ಶಾಲೆ, ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಸ್ಥಾಪಿಸುವ ಪ್ರಸ್ತಾವನೆ ಇದೆ. ನಮ್ಮಲ್ಲಿ ಈಗ 165 ಮೊರಾರ್ಜಿ ದೇಸಾಯಿ ವಸತಿ ಶಾಲೆ, 2700 ಹಾಸ್ಟೆಲ್ ಗಳಿವೆ. ಅಗತ್ಯವಿರುವ ಹೋಬಳಿಗಳಲ್ಲಿ ಮತ್ತಷ್ಟು ಹಾಸ್ಟೆಲ್ ಗಳನ್ನು ನಿರ್ಮಾಣ ಮಾಡಲು ಮುಂದಾಗಿದ್ದೇವೆ ಎಂದರು.

ಸಿಎಂ ಜತೆ ಸಮಾಲೋಚನೆ
ಸಾಮಾಜಿಕ, ಶೈಕ್ಷಣಿಕ ಪ್ರಗತಿ ಕುರಿತಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ತಯಾರಿಸಿರುವ ವರದಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸುತ್ತೇನೆ.
2015ರಲ್ಲಿ ಜಾತಿ ಜನಗಣತಿ ಸಮೀಕ್ಷೆ ನಡೆಸಲು 195 ಕೋಟಿ ರೂ. ಅನುದಾನ ನೀಡಿದ್ದು, ಅದರಲ್ಲಿ 150 ಕೋಟಿ ರೂ. ಖರ್ಚಾಗಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎಚ್.ಎಂ.ಕಾಂತರಾಜ್ ಅವರು ವರದಿ ಸಲ್ಲಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಬೇಕಾಗಿದೆ ಎಂದರು.












Click it and Unblock the Notifications