ವಿಷಪ್ರಸಾದ: ಸಂತ್ರಸ್ತರಾದ ಕುಟುಂಬಕ್ಕೆ ಧೈರ್ಯ ತುಂಬಿದ ಸಿಎಂ
ಚಾಮರಾಜನಗರ, ಡಿಸೆಂಬರ್ 26: ಹನೂರು ತಾಲೂಕು ಸುಳ್ವಾಡಿ ದೇವಾಲಯದ ಪ್ರಸಾದ ಸೇವನೆ ಪ್ರಕರಣದಲ್ಲಿ ಮೃತಪಟ್ಟವರ ಮನೆಗಳಿಗೆ ತೆರಳಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕುಟುಂಬದವರಿಗೆ ಧೈರ್ಯ ತುಂಬಿದರಲ್ಲದೆ, ಅಗತ್ಯ ಸೌಲಭ್ಯ ಕಲ್ಪಿಸುವ ಭರವಸೆಯನ್ನು ನೀಡಿದ್ದಾರೆ.
ಬಿದರಹಳ್ಳಿಯ ಪ್ರಸಾದ ಸೇವನೆ ಪ್ರಕರಣದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರು ಹಾಗೂ ಅಸ್ವಸ್ಥಗೊಂಡು ಚಿಕಿತ್ಸೆ ಪಡೆದಿರುವ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದ ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಂತ್ರಸ್ತರ ನೆಮ್ಮದಿ ಜೀವನಕ್ಕೆ ಶಾಶ್ವತವಾಗಿ ನೆರವಾಗುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಸರ್ಕಾರ ಜಾರಿಗೆ ತರಲಿದೆ.
ಕಿಚ್ಚುಗುತ್ತಿ ಮಾರಮ್ಮ ದೇಗುಲ ಸರ್ಕಾರಕ್ಕೊಪ್ಪಿಸಲು ಟ್ರಸ್ಟಿಗಳ ಒಪ್ಪಿಗೆ
ನೊಂದ ಸಂತ್ರಸ್ತರಿಗೆ ಅರ್ಥಿಕವಾಗಿ ಶಕ್ತಿ ತುಂಬಬೇಕಿದೆ. ಅವರ ಬದುಕಿಗೆ ನೆರವಾಗಬೇಕಾಗಿದೆ. ಭೂಮಿ ಇಲ್ಲದವರಿಗೆ ಹಾಗೂ ಕೂಲಿ ಕೆಲಸ ಮಾಡುವ ಕುಟುಂಬಗಳಿಗೆ ನೆಮ್ಮದಿಯಿಂದ ಜೀವನ ನಡೆಸಲು ಅನುಕೂಲವಾಗುವಂತೆ ಅರ್ಥಿಕ ಶಕ್ತಿ ತುಂಬುವ ಸಲುವಾಗಿ ಪೈಲಟ್ ಪ್ರಾಜೆಕ್ಟ್ ಯೋಜನೆಯೊಂದನ್ನು ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿಯವರಿಗೆ ಸೂಚಿಸಿದರು.
ಬಿಕೋ ಎನ್ನುತ್ತಿದೆ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮನ ದೇವಾಲಯ
ಸ್ವಸಹಾಯ ಗುಂಪುಗಳನ್ನು ರಚಿಸಿಕೊಂಡರೆ 10 ಲಕ್ಷ ರೂ. ಗಳ ಅರ್ಥಿಕ ನೆರವು ನೀಡಲು ಅವಕಾಶವಿದೆ. ಅಲ್ಲದೆ, ಬಡ್ಡಿರಹಿತವಾಗಿ 5 ಲಕ್ಷ ರೂ. ಸಾಲ ಸೌಲಭ್ಯ ನೀಡಲಾಗುತ್ತದೆ. ಈ ಅರ್ಥಿಕ ಸೌಲಭ್ಯಗಳನ್ನು ಪಡೆದು ಹೈನುಗಾರಿಕೆ, ಮೇಣದಬತ್ತಿ ಸೇರಿದಂತೆ ವಿವಿಧ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡಬಹುದು. ನೀವು ತಯಾರಿಸಿದ ವಸ್ತುಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆಯನ್ನು ಸರ್ಕಾರ ಒದಗಿಸಲಿದೆ ಎಂದು ಕುಮಾರಸ್ವಾಮಿ ತಿಳಿಸಿದರು.
ಯಾವುದೇ ಆತಂಕಪಡುವ ಅಗತ್ಯವಿಲ್ಲ
ಸಂತ್ರಸ್ತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದ ಮುಖ್ಯಮಂತ್ರಿಗಳು ಉತ್ತಮ ಜೀವನಕ್ಕಾಗಿ ಸರ್ಕಾರ ನಿಮ್ಮೊಂದಿಗಿದೆ. ಪ್ರಸಾದ ಸೇವನೆ ಪ್ರಕರಣದಲ್ಲಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಜರುಗಿಸಲಾಗುತ್ತದೆ. ಯಾವುದೇ ರಾಜಿಗೆ ಅವಕಾಶವಿಲ್ಲ. ಸಂತ್ರಸ್ತರು ತೊಂದರೆಯಿಲ್ಲದ ಜೀವನ ನಿರ್ವಹಣೆ ಮಾಡಲು ಅವರಿಗೆ ಎಲ್ಲಾ ಅವಶ್ಯಕ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.
ಸಂತ್ರಸ್ತ 3 ಕುಟುಂಬಗಳಿಗೆ ಟ್ಯಾಕ್ಸಿ ಸೌಲಭ್ಯ
ಈಗಾಗಲೇ ಮೃತಪಟ್ಟ ಕುಟುಂಬಗಳಿಗೆ ಪರಿಹಾರವಾಗಿ ಒಟ್ಟಾರೆ 80 ಲಕ್ಷ ರೂ. ಗಳ ಹಣ ಬಿಡುಗಡೆ ಮಾಡಲಾಗಿದೆ. ಭೂಮಿ ಇಲ್ಲದ ಸಂತ್ರಸ್ತರಿಗೆ ಭೂ ಒಡೆತನ ಯೋಜನೆಯಡಿ ಜಮೀನು ಒದಗಿಸಲಾಗುತ್ತದೆ. ಸಂತ್ರಸ್ತ 3 ಕುಟುಂಬಗಳಿಗೆ ಟ್ಯಾಕ್ಸಿ ಸೌಲಭ್ಯವನ್ನು ನೀಡಲಾಗುತ್ತದೆ. ಸಣ್ಣ ನೀರಾವರಿ ಇಲಾಖೆಯಿಂದ 10 ಲಕ್ಷ ರೂ. ಗಳಂತೆ 9 ಕೋಟಿ ಅನುದಾನವನ್ನು ತೋಟಗಾರಿಕೆ ಚಟುವಟಿಕೆಗಳಿಗೆ ಒದಗಿಸಲು ತೀರ್ಮಾನಿಸಲಾಗಿದೆ. ಹಿಂದುಳಿದ ವರ್ಗಗಳ ನಿಗಮಗಳಿಂದ ಸ್ವಯಂ ಉದ್ಯೋಗ ಹೊಂದುವ ಸಂತ್ರಸ್ತರಿಗೆ 1 ಲಕ್ಷ ರೂ. ನೆರವು ನೀಡಲಾಗುವುದು. ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ೨ ಲಕ್ಷ ರೂ. ಗಳ ಅರ್ಥಿಕ ನೆರವು ಒದಗಿಸಲಾಗುತ್ತದೆ. ರಾಜೀವ್ ಗಾಂಧಿ ವಸತಿ ನಿಗಮದಿಂದ ವಸತಿರಹಿತರಿಗೆ 30 ನಿವೇಶನಗಳನ್ನು ಮಂಜೂರು ಮಾಡಿ ಮನೆ ನಿರ್ಮಿಸಿಕೊಡಲಾಗುತ್ತದೆ ಎಂದು ಕುಮಾರಸ್ವಾಮಿ ಭರವಸೆ ನೀಡಿದರು.
ವಿಷಪ್ರಸಾದ ಪ್ರಕರಣದ ಸಂಪೂರ್ಣ ಮಾಹಿತಿ: ಇದು ಮೂವರ ದ್ವೇಷದ ಕತೆ
ಆತ್ಮವಿಶ್ವಾಸ ತುಂಬಿದ ಸಿಎಂ
ಇದೇ ವೇಳೆ ಮೃತರ ಗೌರವಾರ್ಥ 2 ನಿಮಿಷಗಳ ಮೌನ ಆಚರಿಸಲಾಯಿತು. ಪ್ರತಿ ಸಂತ್ರಸ್ತರ ಕುಟುಂಬದವರೊಂದಿಗೆ ಸಮಾಲೋಚಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಂತ್ರಸ್ತರ ಕಷ್ಟ, ನೋವುಗಳನ್ನು ಆಲಿಸಿದರು. ವೈಯಕ್ತಿಕವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ಸಂತ್ರಸ್ತರು ಹೇಳಿಕೊಂಡರು. ಸಾವಕಾಶವಾಗಿ ಎಲ್ಲವನ್ನು ಆಲಿಸಿದ ಮುಖ್ಯಮಂತ್ರಿಯವರು ಧೈರ್ಯವಾಗಿರಿ. ನಿಮಗೆ ನೀಡಬೇಕಿರುವ ಎಲ್ಲಾ ಸಹಾಯವನ್ನು ಒದಗಿಸಲಿದ್ದೇವೆ ಎಂದು ಸಂತ್ರಸ್ತರಲ್ಲಿ ಆತ್ಮವಿಶ್ವಾಸ ತುಂಬಿದರು.
ಹಾಜರಿದ್ದ ಗಣ್ಯರು
ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ, ಉನ್ನತ ಶಿಕ್ಷಣ ಸಚಿವರಾದ ಜಿ.ಟಿ. ದೇವೆಗೌಡ, ರೇಷ್ಮೆ ಹಾಗೂ ಪ್ರವಾಸೋದ್ಯಮ ಸಚಿವರಾದ ಸಾ.ರಾ. ಮಹೇಶ್, ಸಣ್ಣ ನೀರಾವರಿ ಸಚಿವರಾದ ಸಿ.ಎಸ್. ಪುಟ್ಟರಾಜು, ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಎಚ್. ವಿಶ್ವನಾಥ್, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್, ಉಪವಿಭಾಗಾಧಿಕಾರಿ ಫೌಜಿಯಾ ತರನ್ನುಮ್ ಸೇರಿದಂತೆ ಹಲವರು ಇದ್ದರು.
ಈಗ 'ಮಾರಮ್ಮನೇ' ಹೇಳಿದ್ದಾಳೆ; ಆರೋಪಿಗಳು ಇನ್ನೂ ಆರು ಮಂದಿ ಇದ್ದಾರಂತೆ!