Siddaramaiah: ಚಾಮರಾಜನಗರಕ್ಕೆ ಭೇಟಿ ನೀಡಿ ಮತ್ತೆ ಮೌಢ್ಯಕ್ಕೆ ಸಡ್ಡು ಹೊಡೆಯಲು ಸಜ್ಜಾದ ಸಿಎಂ ಸಿದ್ದರಾಮಯ್ಯ
ಚಾಮರಾಜನಗರ, ಸೆಪ್ಟೆಂಬರ್, 26: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ಅವಧಿಗೆ ಸಿಎಂ ಆದ ಬಳಿಕ ಮೊದಲ ಬಾರಿಗೆ ಚಾಮರಾಜನಗರಕ್ಕೆ ಭೇಟಿ ಕೊಡುವ ಮೂಲಕ ಗಮನ ಸೆಳೆಯಲಿದ್ದಾರೆ.
ಚಾಮರಾಜನಗರಕ್ಕೆ ಸಿಎಂ ಆದವರು ಬಂದರೇ ಅಧಿಕಾರ ಹೋಗಲಿದೆ ಎಂಬ ಮೌಢ್ಯಕ್ಕೆ ಸಡ್ಡು ಹೊಡೆದು ಹತ್ತಾರು ಬಾರಿ ಭೇಟಿ ಕೊಟ್ಟು ಅನುದಾನದ ಹೊಳೆಯನ್ನೇ ಹರಿಸಿದ್ದರು. ಮನಸ್ವನಿ ಎಂಬ ಯೋಜನೆಯನ್ನು ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಉದ್ಘಾಟಿಸಿ ಗಮನ ಸೆಳೆದಿದ್ದರು. ಈಗ ಮತ್ತೇ ಸಿದ್ದರಾಮಯ್ಯ ಚಾಮರಾಜನಗರಕ್ಕೆ ಬುಧವಾರ ಭೇಟಿ ಕೊಡುತ್ತಿದ್ದು, ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಚಾಮರಾಜನಗರ ಜಿಲ್ಲೆಯ ಕೆಡಿಪಿ ಸಭೆ ನಡೆಯುತ್ತಿರುವುದು ಕೂಡ ಇದೆ ಮೊದಲ ಬಾರಿಯಾಗಿದೆ.

ಮೊದಲ ಅವಧಿಯಲ್ಲಿ ಸಿದ್ದರಾಮಯ್ಯ ಸಿಎಂ ಆದ ವೇಳೆ 6 ತಿಂಗಳಲ್ಲಿ ಚಾಮರಾಜನಗರ ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡಿದ್ದರು. ಈಗ, ಎರಡನೇ ಅವಧಿಯಲ್ಲಿ 4 ತಿಂಗಳಲ್ಲೇ ಚಾಮರಾಜನಗರ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆ.
ಮೊದಲ ಬಾರಿ ಚಾಮರಾಜನಗರಕ್ಕೆ ಸಿಎಂ ಭೇಟಿ ನೀಡಿದ ವೇಳೆ ವಿದ್ಯಾರ್ಥಿಗಳ ಹಾಸ್ಟೆಲ್, ಉಗ್ರಾಣದ ಗೋದಾಮುಗಳು, ಆರ್ಟಿಒ ಕಟ್ಟಡ ನಿರ್ಮಾಣ ಸೇರಿದಂತೆ ಹತ್ತಾರು ಯೋಜನೆಗಳಿಗೆ ನೂರಾರು ಕೋಟಿ ಅನುದಾನ ನೀಡಿ ಚಾಮರಾಜನಗರ ಅಭಿವೃದ್ಧಿಗೆ ನಾಂದಿ ಹಾಡಿದ್ದರು. ಈಗ ಚಾಮರಾಜನಗರದಲ್ಲೇ ಕೆಡಿಪಿ ಸಭೆ ನಡೆಸಲಿದ್ದು, ಇಲ್ಲಿನ ಅಭಿವೃದ್ಧಿ ಸಂಬಂಧ ನಿರೀಕ್ಷೆ ಗರಿಗೆದರಿದೆ.
ಈ ಬಾರಿಯೂ 5 ವರ್ಷ ಪೂರೈಸುತ್ತಾರಾ?
ಕಳೆದ ಬಾರಿ ಮೌಢ್ಯಕ್ಕೆ ಸಡ್ಡು ಹೊಡೆದು ಚಾಮರಾಜನಗರಕ್ಕೆ ಭೇಟಿ ನೀಡಿದ ವೇಳೆ 5 ವರ್ಷ ಪೂರೈಸಿದ್ದರು. ಈಗ ಮತ್ತೇ ಭೇಟಿ ಕೊಡುತ್ತಿದ್ದು, ಎರಡನೇ ಅವಧಿಯಲ್ಲೂ 5 ವರ್ಷ ಪೂರೈಸುವವರೇ ಎಂಬ ಕುತೂಹಲ ಮೂಡಿದೆ. ಸಿದ್ದರಾಮಯ್ಯ ಅವರು ಚಾಮರಾಜನಗರದಲ್ಲಿ ಬುಧವಾರ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ನಂತರ ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡುವುದಲ್ಲದೇ, ಅಲ್ಲಿಯೇ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇದೇ ಸಂದರ್ಭದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುತ್ತಾರೆಯೇ ಎಂದು ಜನರು ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಬರದ ಛಾಯೆ ಇದ್ದು, ಹಲವಾರು ಜಿಲ್ಲೆಗಳನ್ನು ಬರಪೀಡಿತ ಜಿಲ್ಲೆ ಎಂದು ಸರ್ಕಾರ ಘೋಷಣೆ ಮಾಡಲಾಗಿದೆ. ಹಾಗೆಯೇ ಚಾಮರಾಜನಗರವನ್ನು ಕೂಡ ಬರಗಾಲಪೀಡಿತ ಜಿಲ್ಲೆಯನ್ನಾಗಿ ಘೋಷಣೆ ಮಾಡುವ ಸಾಧ್ಯತೆಯಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಚಾಮರಾಜನಗರದಲ್ಲಿ ಈ ಬಾರಿ ಮಳೆ ಸಂಪೂರ್ಣ ಕೈಕೊಟ್ಟಿದ್ದು, ಬರ ಎದ್ದುಕಾಣುತ್ತಿದೆ. ಆದರೂ ಸಹ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿರುವುದಿಲ್ಲ. ಸ್ವತಃ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿರುವುದರಿಂದ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡುವರೇ ಎಂದು ಕಾದು ನೋಡಬೇಕಿದೆ.
ಸಾಮೂಹಿಕ ವಿವಾಹದಲ್ಲಿ ಭಾಗಿ
ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಆಯೋಜನೆ ಮಾಡಿರುವ ಸಾಮೂಹಿಕ ವಿವಾಹದಲ್ಲಿ ಬೆಳಗ್ಗೆ ಸಿಎಂ ಭಾಗಿಯಾಗಲಿದ್ದು, ಬಳಿಕ ಪ್ರಾಧಿಕಾರದ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಚಾಮರಾಜನಗರಕ್ಕೆ ಭೇಟಿ ಕೊಡಲಿದ್ದು, ಕುರುಬ ಸಮುದಾಯದ
ಕನಕ ಭವನ ವಾಣಿಜ್ಯ ಸಂಕೀರ್ಣದ ಗುದ್ದಲಿ ಪೂಜೆ ನಡೆಸಿ ಬಳಿಕ ಚಾಮರಾಜನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಸಲಿದ್ದಾರೆ.
ಇನ್ನು ಕಾವೇರಿ ಕಾವು ಕೂಡ ಜಿಲ್ಲೆಯಲ್ಲಿ ಜೋರಾಗಿದ್ದು, ಸಿದ್ದರಾಮಯ್ಯ ಅವರನ್ನು ರೈತರು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸಲು ಪ್ಲಾನ್ ಮಾಡಿಕೊಂಡಿದ್ದಾರೆ.












Click it and Unblock the Notifications