ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಪರಿಹಾರ?
ಚಾಮರಾಜನಗರ, ಮೇ 17: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ದುರಂತದಿಂದ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ಕಲ್ಪಿಸುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಅಲ್ಲದೆ ಮುಂದಿನ ವಿಚಾರಣೆಯ ದಿನಾಂಕದಂದು ಸರ್ಕಾರದ ನಿಲುವು ಏನೆಂಬುದನ್ನು ಹೈಕೋರ್ಟಿಗೆ ತಿಳಿಸಲಾಗುತ್ತದೆ ಎಂದು ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದ ದುರಂತ ಪ್ರಕಣದ ತನಿಖೆ ಹೈಕೋರ್ಟ್ ನಲ್ಲಿದ್ದು, ಈ ಬಗ್ಗೆ ನಾನೇನು ಹೆಚ್ಚು ಮಾತನಾಡುವುದಿಲ್ಲ. ಈ ಪ್ರಕರಣದ ಮೃತರ ಕುಟುಂಬಸ್ಥರಿಗೆ ಪರಿಹಾರ ನೀಡುವ ಸಂಬಂಧ ಹೈಕೋರ್ಟ್ ಸೂಚಿಸಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಕ್ರಮ ಕೈಗೊಳ್ಳಲಿದ್ದಾರೆ. ಮತ್ತು ಪ್ರಕರಣದಲ್ಲಿ ಅಧಿಕಾರಿಗಳ ಲೋಪದ ಸಂಬಂಧ ಹೈಕೋರ್ಟ್ ಮುಂದಿನ ವಿಚಾರಣೆ ಮತ್ತು ಆದೇಶದ ನಿರೀಕ್ಷೆಯಲ್ಲಿದ್ದೇವೆ ಎಂದರು.

ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಜನ ರೋಗಿಗಳು ಮೃತರಾಗಿದ್ದಾರೆ. ಅವರೆಲ್ಲರ ಕುಟುಂಬಕ್ಕೂ ಸೂಕ್ತ ಪರಿಹಾರ ಕೊಡಬೇಕು ಹಾಗೂ ಅಮೂಲಾಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಚಾಮರಾಜನಗರದ ವಕೀಲರೊಬ್ಬರು ರಾಜ್ಯ ಹೈಕೋರ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ವೇಳೆ ಕೋರ್ಟ್ ಪರಿಹಾರದ ಕುರಿತು ರಾಜ್ಯ ಸರ್ಕಾರದ ಅಭಿಪ್ರಾಯವನ್ನು ಕೋರಿತ್ತು.
ಕೋವಿಡ್ ಪರೀಕ್ಷೆ ಬಗ್ಗೆ ಮಾತನಾಡಿದ ಅವರು, ಕೋವಿಡ್ ಸೋಂಕಿತರ ಅಂಕಿ ಸಂಖ್ಯೆಯನ್ನು ಕಡಿಮೆ ಮಾಡುವುದು ಸರ್ಕಾರದ ಉದ್ದೇಶವಲ್ಲ. ಕೋವಿಡ್ ಗುಣ ಲಕ್ಷಣವಿರುವವರನ್ನು ಮತ್ತು ಅವರ ಪ್ರಾಥಮಿಕ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸುತ್ತಿದ್ದು, ಒಟ್ಟಾರೆ ರಾಜ್ಯದಲ್ಲಿ ಸೋಂಕಿತರು ಮತ್ತು ಮರಣ ಹೊಂದುವವರ ಸಂಖ್ಯೆಯನ್ನು ಕಡಿಮೆ ಮಾಡಬೇಕು ಎಂಬುದು ನಮ್ಮ ಉದ್ದೇಶ ಎಂದು ತಿಳಿಸಿದರು.
Recommended Video
ಲಾಕ್ಡೌನ್ ವಿಸ್ತರಣೆ ಸಂಬಂಧ ಮಾತನಾಡಿದ ಸಚಿವ ಸುರೇಶ್ ಕುಮಾರ್, ಇನ್ನೂ ಕಾಲಾವಕಾಶವಿದ್ದು, ಲಾಕ್ಡೌನ್ ವಿಸ್ತರಣೆ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ತಿಳಿಸಿದರು.












Click it and Unblock the Notifications