ತಾಳವಾಡಿಯಲ್ಲಿ ಕೋಮು ಸಾಮರಸ್ಯದ ಕೊಂಡೋತ್ಸವ, ಭಾವೈಕ್ಯತೆ ಸಾರುವ ಜಾತ್ರೆಯ ವಿಶೇಷತೆ ಇಲ್ಲಿದೆ
ಅಪ್ಪಟ ಕನ್ನಡಿಗರೇ ಇರುವ ತಮಿಳುನಾಡಿನ ತಾಳವಾಡಿಯಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ಮಾರಮ್ಮನ ಕೊಂಡೋತ್ಸವ ವಿಜೃಂಭಣೆಯಿಂದ ನಡೆದಿದೆ. ಈ ಜಾತ್ರೆಯ ವಿಶೇಷತೆಯನ್ನು ಇಲ್ಲಿ ತಿಳಿಯಿರಿ.
ಚಾಮರಾಜನಗರ, ಮಾರ್ಚ್, 09: ಅಪ್ಪಟ ಕನ್ನಡಿಗರೇ ಇರುವ ತಮಿಳುನಾಡಿನ ತಾಳವಾಡಿಯಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ಮಾರಮ್ಮನ ಕೊಂಡೋತ್ಸವ ಇಂದು ವಿಜೃಂಭಣೆಯಿಂದ ನಡೆದಿದೆ. ಜಿಲ್ಲೆಯ ಗಡಿಭಾಗಕ್ಕೆ ಹೊಂದಿಕೊಂಡಿರುವ ತಮಿಳುನಾಡಿನ ತಾಳವಾಡಿಯಲ್ಲಿ ಮಾರಮ್ಮನ ಜಾತ್ರೆ ಪ್ರಯುಕ್ತ ಮಸೀದಿ ಮುಂಭಾಗದಲ್ಲೇ ಕೊಂಡೋತ್ಸವ ನಡೆಯಿತು.
ಈ ಮೂಲಕ ಹಿಂದೂ- ಮುಸ್ಲಿಂ ಭಾವೈಕ್ಯತೆಗೆ ತಾಳವಾಡಿ ಸಾಕ್ಷಿಯಾಯಿತು. ಸುಮಾರು 150 ವರ್ಷಗಳಿಂದ ಈ ಕೊಂಡೋತ್ಸವ ನಡೆಯುತ್ತಾ ಬಂದಿದೆ. ತಾಳವಾಡಿ ಫಿರ್ಕಾದ 58 ಗ್ರಾಮಗಳು ಸೇರಿದಂತೆ ಚಾಮರಾಜನಗರ, ತಮಿಳುನಾಡಿನ ಈರೋಡ್, ಕೊಯಮತ್ತೂರು ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಭಕ್ತರು ಧಾರ್ಮಿಕ ಉತ್ಸವದಲ್ಲಿ ಪಾಲ್ಗೊಂಡಿದ್ದರು.

ಕೊಂಡೋತ್ಸವದ ವಿಶೇಷತೆ ಏನು?
ಗ್ರಾಮದ ಮುಖ್ಯ ಬೀದಿಯಲ್ಲಿರುವ ಮಾರಮ್ಮನ ದೇಗುಲದ ಪಕ್ಕ ಮಸೀದಿ ಇದೆ. ಇದರ ಗೋಡೆಗೆ ಅಂಟಿಕೊಂಡಂತೆ ಟಿಪ್ಪುಸುಲ್ತಾನ್ ಕಾಲದಲ್ಲಿ ನಿರ್ಮಾಣವಾಗಿರುವ ವೇಣುಗೋಪಾಲ ಸ್ವಾಮಿ ಗುಡಿ ಇದೆ. ಮಸೀದಿ ಮುಂಭಾಗದಲ್ಲೇ ಕೊಂಡೋತ್ಸವ ಜರುಗುವುದು ಈ ಜಾತ್ರೆಯ ವಿಶೇಷವಾಗಿದೆ. ನಾಲ್ಕು ದಶಕದ ಹಿಂದೆ ಜಾತ್ರೆ ವಿಚಾರವಾಗಿ ಘರ್ಷಣೆ ಆಗಿತ್ತು.
ಸಾಮಾರಸ್ಯದಿಂದ ನಡೆದ ಕೊಂಡೋತ್ಸವ
ನಂತರ ಊರಿನ ಎಲ್ಲಾ ಕೋಮಿನ ಮುಖಂಡರು ಕುಳಿತು ಚರ್ಚಿಸಿ ಯಾವುದೇ ಗಲಾಟೆಗೆ ಅವಕಾಶ ನೀಡದಂತೆ ಸಮಾಜದಲ್ಲಿ ಸಾಮರಸ್ಯ ಕಾಪಾಡುವುದರೊಂದಿಗೆ ಜಾತ್ರಾ ಮಹೋತ್ಸವ ಆಚರಣೆಗೆ ಮುಂದಾಗಿದ್ದರು. ಅಂದಿನಿಂದಲೂ ಮಸೀದಿ ಮುಂಭಾಗ ಸಾಮಾರಸ್ಯದಿಂದ ಕೊಂಡೋತ್ಸವ ನಡೆದುಕೊಂಡು ಬಂದಿದೆ.

ಗಮನ ಸೆಳೆದ ಕಲಾ ತಂಡಗಳು
ಗೊರವರ ಕುಣಿತ, ವೀರಗಾಸೆ, ಬೀರೇದೇವರ ಕುಣಿತ ಇತ್ಯಾದಿ ಜಾನಪದ ಕಲಾ ತಂಡಗಳು ಮತ್ತು ಮಂಗಳ ವಾದ್ಯಗಳೊಂದಿಗೆ ಅದ್ಧೂರಿಯಾಗಿ ಉತ್ಸವ ನಡೆದಿದೆ. ಜಾತ್ರೆ ವೇಳೆ ಯಾರ ಮನೆಯಲ್ಲಿಯೂ ಘಾಟು, ಒಗ್ಗರಣೆ, ಕರಿದ ತಿನಿಸು, ಮಾಂಸಾಹಾರ ಮಾಡುವುದಿಲ್ಲ. ಜೊತೆಗೆ, ಸತ್ತವರ ಶವವನ್ನು ಕೂಡ ಊರಿನೊಳಗೆ ತರುವಂತಿಲ್ಲ. ಇದು ಹಿಂದಿನಿಂದಲೂ ನಡೆದುಕೊಂಡುಬಂದ ಪದ್ಧತಿಯಾಗಿದೆ.
ಈ ಪದ್ಧತಿಯನ್ನು ಎಲ್ಲಾ ಕೋಮಿನವರು ಇಂದಿಗೂ ಪಾಲಿಸಿಕೊಂಡು ಬರುತ್ತಿದ್ದಾರೆ. ಜಾತ್ರೆಯ ಅಂಗವಾಗಿ ಗ್ರಾಮದ ಒಂದೊಂದು ಜನಾಂಗದವರಿಗೂ ನಿರ್ಧಿಷ್ಟ ಜವಾಬ್ದಾರಿಯನ್ನು ವಹಿಸಿ ಅಚ್ಚುಕಟ್ಟಾಗಿ ಕೊಂಡೋತ್ಸವವನ್ನು ನಡೆಸಲಾಯಿತು. ಹಾಗೆಯೇ ಅರ್ಚಕ ಶಿವಣ್ಣ 60 ಅಡಿ ಉದ್ದ 4 ಅಡಿ ಆಳವಿರುವ ಕೊಂಡವನ್ನು ಹಾಯ್ದು ಗಮನ ಸೆಳೆದಿದ್ದಾರೆ.












Click it and Unblock the Notifications