ಧ್ರುವನಾರಾಯಣ ಹಿರಿಯ ಪುತ್ರನಿಗೆ ಟಿಕೆಟ್ ಕೊಡಲೇಬೇಕು: ಬೆಂಬಲಿಗರಿಂದ ಕಾಂಗ್ರೆಸ್ ನಾಯಕರಿಗೆ ಒತ್ತಾಯ
ಚಾಮರಾಜನಗರ, ಮಾರ್ಚ್, 12: ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ಇಂದು ಧ್ರುವನಾರಾಯಣ ಅಂತ್ಯಕ್ರಿಯೆ ನಡೆಯುವ ವೇಳೆ ಅಭಿಮಾನಿಗಳು ದೊಡ್ಡ ಹೈಡ್ರಾಮವನ್ನೇ ಸೃಷ್ಟಿ ಮಾಡಿದ್ದರು. ಧ್ರುವನಾರಾಯಣ ಅವರ ಹಿರಿಯ ಪುತ್ರ ದರ್ಶನ್ ಅವರಿಗೆ ನಂಜನಗೂಡು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಕೊಡಬೇಕೆಂದು ಘೋಷಣೆಗಳನ್ನು ಕೂಗಿದರು.
ಧ್ರುವನಾರಾಯಣ ಅವರ ಟಿಕೆಟ್ ಅನ್ನು ಅವರ ಮಗನಿಗೆ ಕೊಡಬೇಕೆಂದು ಅಭಿಮಾನಿಗಳು ಅರ್ಧ ತಾಸಿಗಿಂತಲೂ ಹೆಚ್ಚು ಕಾಲ ಘೋಷಣೆ ಕೂಗಿದರು. ಈ ವೇಳೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಅಭಿಮಾನಿಗಳಿಗೆ ಕೈ ಮುಗಿದು ಸಮಾಧಾನದಿಂದ ಇರುವಂತೆ ಮನವಿ ಮಾಡಿದರು. ಆದರೂ ಸುಮ್ಮನಾಗದ ಕಾರ್ಯಕರ್ತರು ಟಿಕೆಟ್ಗೆ ಒತ್ತಾಯಿಸಿ ಘೋಷಣೆ ಕೂಗಿದರು. ಅಂತ್ಯಕ್ರಿಯೆ ವೇಳೆಯೂ ದರ್ಶನ್ ಮುಂದಿನ ಎಂಎಲ್ಎ ಆಗಬೇಕು ಎಂದು ಘೋಷಣೆಗಳನ್ನು ಕೂಗಿದರು.

ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ಧ್ರುವನಾರಾಯಣ ಅವರ ತಂದೆ-ತಾಯಿ ಪಕ್ಕವೇ ಧ್ರುವನಾರಾಯಣ ಅವರ ಅಂತ್ಯಕ್ರಿಯೆ ನಡೆಯಿತು. ಹಿಂದೂ ಧಾರ್ಮಿಕ ವಿಧಿ ವಿಧಾನದಂತೆ ಕುರ್ಜು ಕಟ್ಟಿ ಅಂತಿಮ ಮೆರವಣಿಗೆ ನಡೆಸಿ ಬಳಿಕ ಮಣ್ಣು ಮಾಡಲಾಯಿತು. ಪತ್ನಿ ವೀಣಾ, ಮಕ್ಕಳಾದ ದರ್ಶನ್, ಧೀರನ್ ಅವರ ಆಕ್ರಂದನ ಮುಗಿಲು ಮುಟ್ಟಿತ್ತು.
ಶನಿವಾರ ತಡರಾತ್ರಿ ಚಾಮರಾಜನಗರಕ್ಕೆ ಧ್ರುವನಾರಾಯಣ ಅವರ ಫಾರ್ಥೀವ ಶರೀರವನ್ನು ತರಲಾಗಿತ್ತು. ಜಿಲ್ಲಾ ಕೇಂದ್ರದಲ್ಲಿ ಮೆರವಣಿಗೆ ನಡೆಸಿದ ಬಳಿಕ ಹುಟ್ಟೂರಿಗೆ ಪಾರ್ಥೀವ ಶರೀರವನ್ನು ತಂದು ಡಾ.ಬಿ.ಆರ್.ಅಂಬೇಡ್ಕರ್ ಭವನ ಸಮೀಪ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಚಾಮರಾಜನಗರ ಜಿಲ್ಲಾಡಳಿತದ ವತಿಯಿಂದ ಮಾಜಿ ಸಂಸದ ಧ್ರುವನಾರಾಯಣ ಅವರಿಗೆ ಸರ್ಕಾರಿ ಗೌರವವನ್ನು ಸಲ್ಲಿಸಲಾಯಿತು.

ಚಾಮರಾಜನಗರ ಪೊಲೀಸ್ ಇಲಾಖೆಯು ಗಾಳಿಯಲ್ಲಿ ಗುಂಡು ಹಾರಿಸಿ ಅವರಿಗೆ ಗೌರವ ನಮನ ಸಲ್ಲಿಸಿತು. ಜಿಲ್ಲಾಡಳಿತದ ವತಿಯಿಂದ ಪೊಲೀಸ್ ವರಿಷ್ಠಾಧಿಕಾರಿ, ಹೆಚ್ಚುವರಿ ಜಿಲ್ಲಾಧಿಕಾರಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಶಾಸಕರು ಪುಷ್ಪಮಾಲೆ ಅರ್ಪಿಸುವ ಮೂಲಕ ಅಂತಿಮ ಗೌರವ ಸಲ್ಲಿಸಿದರು. ಅಂತಿಮ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಮತ್ತಿತರರು ಇದ್ದರು.












Click it and Unblock the Notifications