ಕೊರೊನಾದಿಂದ ಬಂಡೀಪುರ ಪ್ರವೇಶಕ್ಕೆ ನಿರ್ಬಂಧ
ಚಾಮರಾಜನಗರ, ಮಾರ್ಚ್ 16: ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಹಾಗೂ ಬಂಡೀಪುರ ವ್ಯಾಪ್ತಿಯಲ್ಲಿ ಬರುವ ಎಲ್ಲ ಹೋಟೆಲ್ ಹಾಗೂ ರೆಸಾರ್ಟ್ಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರ ಮತ್ತು ಪ್ರವಾಸಿಗರ ಆರೋಗ್ಯದ ಹಿತದೃಷ್ಟಿಯಿಂದ ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಾರ್ಚ್ 15 ರಿಂದ 22ರ ವರೆಗೆ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಅಲ್ಲದೆ ಬಂಡೀಪುರ ವ್ಯಾಪ್ತಿಯಲ್ಲಿ ಬರುವ ಎಲ್ಲ ಹೋಟೆಲ್, ರೆಸಾರ್ಟ್ಗಳನ್ನು ಮುಚ್ಚುವಂತೆಯೂ ಸೂಚಿಸಲಾಗಿದೆ.

ಹಾಗೆ ನೋಡಿದರೆ ಸಾಮಾನ್ಯ ದಿನಗಳಲ್ಲಿ ಬಂಡೀಪುರಕ್ಕೆ ವಿದೇಶಿ ಪ್ರವಾಸಿಗರೇ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುತ್ತಾರೆ. ಕೊರೊನಾ ಕಾಣಿಸಿಕೊಂಡ ನಂತರವೂ ಪ್ರವಾಸಿಗರು ಬಂಡೀಪುರದ ಕಡೆಗೆ ಬರುತ್ತಿದ್ದರು. ಆದರೆ ಸಂಖ್ಯೆಯಲ್ಲಿ ಇಳಿಮುಖವಾಗಿರುವುದು ಕಂಡು ಬಂದಿತ್ತು. ಬಂಡೀಪುರ ರಾಷ್ಟ್ರೀಯ ಉದ್ಯಾನ ಕೇರಳ ಮತ್ತು ತಮಿಳುನಾಡಿಗೆ ಹೊಂದಿಕೊಂಡಂತಿರುವುದರಿಂದ ಜಿಲ್ಲೆಯಲ್ಲಿ ಎಚ್ಚರಿಕೆ ವಹಿಸಲಾಗಿದ್ದು, ಅದರಂತೆ ಬಂಡೀಪುರಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಿರುವುದಕ್ಕೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.












Click it and Unblock the Notifications