ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ ಮಾಡಿರುವುದು ಅಮಾನವೀಯ: ಕುಮಾರಸ್ವಾಮಿ
ಚಾಮರಾಜನಗರ, ಜೂನ್ 12: ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ , ಬೆತ್ತಲೆ ಮೆರವಣಿಗೆ ಮಾಡಿರುವುದು ಅತ್ಯಂತ ಅಮಾನವೀಯ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ತಿಳಿಸಿರುವುದಾಗಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಗುಂಡ್ಲುಪೇಟೆಯಲ್ಲಿ ದಲಿತ ವ್ಯಕ್ತಿಯೊಬ್ಬ ದೇವಾಲಯ ಪ್ರವೇಶಿಸಿದ್ದ ಎನ್ನುವ ಒಂದೇ ಕಾರಣಕ್ಕೆ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಅವರ ಮೇಲೆ ಹಲ್ಲೆ ನಡೆಸಿದ್ದಷ್ಟೇ ಅಲ್ಲದೆ ಬೆತ್ತಲೆಯಾಗಿ ಮೆರವಣಿಗೆಯನ್ನೂ ಕೂಡ ಮಾಡಿದ್ದರು.
ಸಮಾಜದಲ್ಲಿ ಜಾತಿ ವೈಷಮ್ಯ ಇನ್ನೂ ಮುಂದುವರೆದಿರುವುದು ದುರದೃಷ್ಟಕರ, ಇಂಥ ಕೃತ್ಯಗಳನ್ನು ವಿರೋಧಿಸಬೇಕು ಎಂದು ಕುಮಾರಸ್ವಾಮಿಯವರು ತಿಳಿಸಿದ್ದಾರೆ.
ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು, ಈ ಬಗ್ಗೆ ಗುಂಡ್ಲುಪೇಟೆ ದೇವಾಲಯದಲ್ಲಿ ದೂರು ನೀಡಿರುವುದಾಗಿ ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಆ ವ್ಯಕ್ತಿ ವಿಗ್ರಹದ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿದ್ದ ಎಂದು ಗ್ರಾಮಸ್ಥರು ದೂರು ನೀಡಿದ್ದಾರೆ ಎಂದು ಗುಂಡ್ಲುಪೇಟೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿ ಮಾನಸಿಕವಾಗಿ ಅಸಮರ್ಥನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.












Click it and Unblock the Notifications