ಸಿದ್ದರಾಮಯ್ಯ ಮುಂದೆ ಸತ್ಯ ಒಪ್ಪಿಕೊಂಡ ಚಾಮರಾಜನಗರ ಡಿಸಿ
ಚಾಮರಾಜನಗರ, ಮೇ 4: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇಂದು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ನಂತರ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಈ ವೇಳೆ, 24 ಜನರ ಸಾವಿಗೆ ಕಾರಣವಾದ ಅಂಶವನ್ನು ಡಿಸಿ, ಸಿದ್ದರಾಮಯ್ಯಗೆ ವಿವರಿಸಿದ್ದಾರೆ.
ಸಾವಿಗೆ ಆಮ್ಲಜನಕ ಕೊರತೆಯೇ ಕಾರಣ ಎಂದು ಡಿಸಿ ಎಂ.ಆರ್ ರವಿ, ಸಿದ್ದರಾಮಯ್ಯನವರ ಮುಂದೆ ಒಪ್ಪಿಕೊಂಡಿದ್ದಾರೆ ಎನ್ನುವ ಮಾಹಿತಿಯಿದೆ. ಆದರೆ, ಸಾವಿನ ವಿಚಾರದಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಅವರ ಹೇಳಿಕೆ ಇದಕ್ಕೆ ತದ್ವಿರುದ್ದವಾಗಿತ್ತು.
ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ವಿಪಕ್ಷ ನಾಯಕ, ಕೆಪಿಸಿಸಿ ಅಧ್ಯಕ್ಷ
"ಇಷ್ಟು ದೊಡ್ಡ ಪ್ರಮಾಣದಲ್ಲಿ ಆಮ್ಲಜನಕದ ಕೊರತೆ ಹಿಂದೆ ಎಂದೂ ಎದುರಾಗಿರಲಿಲ್ಲ. ಸಕಾಲದಲ್ಲಿ ಆಕ್ಸಿಜನ್ ಸಿಗದೇ ಮೂರು ಜನ ಸಾವನ್ನಪ್ಪಿದ್ದಾರೆ. ಸರಕಾರ ಮುಂದೆ ಇಂತಹ ತೊಂದರೆಯಾಗದಂತೆ ಎಚ್ಚರ ವಹಿಸುತ್ತದೆ" ಎಂದು ಸಚಿವ ಸುಧಾಕರ್ ಹೇಳಿದ್ದರು.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ "ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯವಿರುವ ಆಕ್ಸಿಜನ್, ಬೆಡ್ಗಳು, ವೈದ್ಯರು ಸೇರಿದಂತೆ ವಿವಿಧ ವೈದ್ಯಕೀಯ ಸವಲತ್ತುಗಳನ್ನು ಪೂರೈಕೆ ಮಾಡಬೇಕಾದುದ್ದು ರಾಜ್ಯ ಸರ್ಕಾರದ ಜವಾಬ್ದಾರಿ, ಈ ಜವಾಬ್ದಾರಿಯನ್ನು ನಿಭಾಯಿಸುವಲ್ಲಿಸರ್ಕಾರ ವಿಫಲವಾಗಿರುವುದೇ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿನ ರೋಗಿಗಳ ಸಾವಿಗೆ ಕಾರಣ"ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
"ಚಾಮರಾಜನಗರ ಜಿಲ್ಲಾಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳೊಂದಿಗಿನ ಸಭೆಯಲ್ಲಿ ಈ ಬಗ್ಗೆ ನಾನು ಪ್ರಶ್ನಿಸಿದಾಗ "ರೋಗಿಗಳ ಸಾವಿಗೆ ಆಕ್ಸಿಜನ್ ಕೊರತೆಯೇ ಕಾರಣ, ನಾವು ಆಕ್ಸಿಜನ್ ವ್ಯವಸ್ಥೆ ಮಾಡುವ ಎಷ್ಟೇ ಪ್ರಯತ್ನ ಮಾಡಿದರೂ ಅದರಿಂದ ಪ್ರಯೋಜನವಾಗಿಲ್ಲ" ಎಂಬ ಸತ್ಯಸಂಗತಿಯನ್ನು ಅಧಿಕಾರಿಗಳು ಹೇಳಿದ್ದಾರೆ. ಇದಕ್ಕೆ ಸಚಿವ ಸುಧಾಕರ್ ಏನಂತಾರೆ"ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಚಾಮರಾಜನಗರ ಸರಣಿ ಸಾವಿಗೆ ಹೊಣೆ ಹೊತ್ತು ಸುರೇಶ್ ಕುಮಾರ್ ರಾಜೀನಾಮೆ ಕೊಡ್ತಾರಾ ?
Recommended Video
"ಕಳೆದು ಒಂದು ದಿನದಲ್ಲಿ ಚಾಮರಾಜನಗರ ಜಿಲ್ಲೆಯೊಂದರಲ್ಲೇ 24 ರೋಗಿಗಳು ಆಮ್ಲಜನಕ ಸಿಗದೆ ಸಾವಿಗೀಡಾಗಿದ್ದಾರೆ. ಕೇವಲ 3 ಜನ ಮಾತ್ರ ಆಮ್ಲಜನಕ ಸಿಗದೆ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಸಚಿವರು ಹೇಳಿರುವುದು ಶುದ್ಧ ಸುಳ್ಳು" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.