ಕೊರೊನಾ ವೈರಸ್; ನಿರ್ಲಕ್ಷ್ಯ ವಹಿಸಿದ ಮೂವರು ವೈದ್ಯರಿಗೆ ಚಾಮರಾಜನಗರ ಡಿಸಿ ನೋಟಿಸ್
ಚಾಮರಾಜನಗರ, ಜುಲೈ 4: ಕರ್ತವ್ಯ ಲೋಪವೆಸಗಿದ ಆರೋಪದಡಿಯಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಎಂ.ಆರ್. ರವಿ ಅವರು ಮೂವರು ವೈದ್ಯಾಧಿಕಾರಿಗಳಿಗೆ ನೋಟಿಸ್ ನೀಡಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿದಿನ ತಾಲ್ಲೂಕು ಹಂತದಲ್ಲಿ ಗಂಟಲು ದ್ರವದ ಮಾದರಿ ಸಂಗ್ರಹಿಸುವಂತೆ ವೈದ್ಯಾಧಿಕಾರಿಗಳಿಗೆ ನಿರ್ದಿಷ್ಟ ಗುರಿ ನೀಡಲಾಗಿತ್ತು. ಆದರೆ ಕೆಲವು ವೈದ್ಯಾಧಿಕಾರಿಗಳು ಜುಲೈ 2ರಂದು ಒಂದೇ ಒಂದು ಗಂಟಲು ದ್ರವ ಮಾದರಿ ಸಂಗ್ರಹಿಸಿಲ್ಲ.
ರೋಗಿಗೆ ಚಿಕಿತ್ಸೆ ನಿರಾಕರಿಸಿದ 18 ಆಸ್ಪತ್ರೆಗಳಿಗೆ ಶೋಕಾಸ್ ನೋಟಿಸ್
ಆದ ಕಾರಣ ಗುರಿ ತಲುಪುವಲ್ಲಿ ವಿಫಲವಾದ ಗುಂಡ್ಲುಪೇಟೆಯ ಬೇಗೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಶಿವಸ್ವಾಮಿ, ಸಂತೇಮರಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ವೆಂಕಟಸ್ವಾಮಿ ಹಾಗೂ ಕಬ್ಬಳ್ಳಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ದೇವರಾಜುರವರಿಗೆ ವಿವರಣೆ ಕೇಳಿ ನೋಟಿಸ್ ನೀಡಿದ್ದಾರೆ.
ನೋಟಿಸ್ ತಲುಪಿದ 24 ಗಂಟೆಯಲ್ಲಿ ಉತ್ತರಿಸಬೇಕು, ಇಲ್ಲದಿದ್ದರೆ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ನೋಟಿಸ್ ನಲ್ಲಿ ಎಚ್ಚರಿಸಲಾಗಿದೆ.