ಬಂಡೀಪುರದಲ್ಲಿ ವಾಹನಕ್ಕೆ ಬಲಿಯಾದ ಜಿಂಕೆ!
ಚಾಮರಾಜನಗರ, ಜನವರಿ 30: ರಸ್ತೆ ದಾಟುತ್ತಿದ್ದ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಂಡೀಪುರ ಅಭಯಾರಣ್ಯದ ವ್ಯಾಪ್ತಿಯ ಬೇಗೂರು ಹೆಡಿಯಾಲ ರಸ್ತೆಯ ಕುರುಬರಹುಂಡಿ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.
ಮೂರು ವರ್ಷದ ಗಂಡು ಜಿಂಕೆ ಸಾವನ್ನಪ್ಪಿದ್ದು ಬೆಳಿಗ್ಗೆ ಸುಮಾರು 8ಗಂಟೆಯ ಸಮಯದಲ್ಲಿ ಘಟನೆ ನಡೆದಿರಬಹುದೆಂದು ಹೇಳಲಾಗಿದೆ. ಡಿಕ್ಕಿ ಹೊಡೆದ ಬಳಿಕ ಚಾಲಕ ವಾಹನವನ್ನು ನಿಲ್ಲಿಸದೆ ತೆರಳಿದ್ದಾನೆ. ಜಿಂಕೆ ಡಿಕ್ಕಿ ಹೊಡೆದ ರಭಸಕ್ಕೆ ಸಂಪೂರ್ಣ ಗಾಯಗೊಂಡು ರಕ್ತಸ್ರಾವದಿಂದ ಸಾವನ್ನಪ್ಪಿದೆ.[ನಾಗರಹೊಳೆ ಅರಣ್ಯದಲ್ಲಿ ಜಿಂಕೆ ಬೇಟೆಗಾರನ ಬಂಧನ]
ಇದೇ ಮಾರ್ಗವಾಗಿ ಸಂಚರಿಸುತ್ತಿದ್ದವರು ಜಿಂಕೆ ಸತ್ತು ಬಿದ್ದಿರುವುದನ್ನು ಕಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಘಟನಾ ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ನವೀನ್ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಜಿಂಕೆಯ ಮೃತದೇಹವನ್ನು ವೈದ್ಯರು ಮರಣೋತ್ತರ ಪರೀಕ್ಷೆ ನಂತರ ಅಂತ್ಯಕ್ರಿಯೆ ನಡೆಸಲಾಯಿತು.
ಘಟನೆಗೆ ಸಂಬಂಧಿಸಿದಂತೆ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಳ್ಳಲಾಗಿದೆ.