ಚಾಮರಾಜನಗರ: ಕೆರೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ
ಚಾಮರಾಜನಗರ, ಜನವರಿ, 30: ಜಿಲ್ಲಾಧಿಕಾರಿ ಶಿಲ್ಪಾನಾಗ್ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಶ್ರೀಧರ ಅವರು ಚಾಮರಾಜನಗರ ತಾಲೂಕಿನ ವಿವಿಧ ಕೆರೆಗಳಿಗೆ ಭೇಟಿ ನೀಡಿ ಒತ್ತುವರಿ ಸಂಬಂಧ ಸ್ಥಳ ಪರಿಶೀಲನೆ ನಡೆಸಿದರು.
ಚಾಮರಾಜನಗರ ತಾಲೂಕಿನ ಕೋಡಿಮೋಳೆ ಕೆರೆ, ನಾಗವಳ್ಳಿ ಕೆರೆ, ಜ್ಯೋತಿಗೌಡನಪುರ ಕೆರೆ, ಕಾಗಲವಾಡಿ ಕೆರೆ, ಹೊಂಗನೂರು ಕೆರೆ, ಹೊಂಡರಬಾಳು ಕೆರೆ, ಇನ್ನಿತರ ಕೆರೆಗಳನ್ನು ವೀಕ್ಷಿಸಿದರು. ಕಾವೇರಿ ನೀರಾವರಿ ನಿಗಮ ಹಾಗೂ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಗೆ ಒಳಪಡುವ ಕೆರೆಗಳ ವಿಸ್ತೀರ್ಣ, ಒತ್ತುವರಿಯಾಗಿರುವ ಭಾಗಗಳು, ಕೆರೆಗಳ ಅಭಿವೃದ್ದಿ ಕುರಿತ ಮಾಹಿತಿಯನ್ನು ಅಧಿಕಾರಿಗಳಿಂದ ಆಯಾ ಸ್ಥಳದಲ್ಲಿಯೇ ಪಡೆದು ಪರಿಶೀಲನೆ ನಡೆಸಿದರು.

ಕೆರೆಗಳ ಹದ್ದುಬಸ್ತು ಮಾಡಿ ಒತ್ತುವರಿ ತೆರವುಗೊಳಿಸಿ, ಕೆಲವೆಡೆ ಕೆರೆಗಳಿಗೆ ಹರಿಯಬಿಟ್ಟಿರುವ ಕಲುಷಿತ ನೀರು ಸೇರದಂತೆ ಕೂಡಲೇ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ಕೆರೆ ಸುತ್ತಮುತ್ತಲ ಪ್ರದೇಶದಲ್ಲಿ ಸ್ವಚ್ಚತೆ ಕಾಪಾಡಬೇಕು, ತ್ಯಾಜ್ಯ ವಸ್ತುಗಳನ್ನು ಕೆರೆಯ ಬಳಿ ಹಾಕುವುದನ್ನು ತಡೆಗಟ್ಟಬೇಕು. ಕೆರೆಯ ವ್ಯಾಪ್ತಿಯಲ್ಲಿ ನೈರ್ಮಲ್ಯ ಕಾಪಾಡಬೇಕೆಂದು ಡಿಸಿ ಅಧಿಕಾರಿಗಳಿಗೆ ಸೂಚಿಸಿದರು.
ನರೇಗಾ ಅನುದಾನವನ್ನು ಗ್ರಾಮೀಣ ಭಾಗಗಳಲ್ಲಿ ಹೆಚ್ಚು ಸದ್ಬಳಕೆಯಾಗಬೇಕು. ಸ್ಥಳೀಯವಾಗಿ ಕೆಲಸ ನೀಡಬೇಕು, ಕೆರೆಗಳ ಅಭಿವೃದ್ದಿ ಕೆಲಸವನ್ನು ಕೈಗೆತ್ತಿಕೊಳ್ಳಬೇಕು. ಕೆರೆಗಳ ಸಂರಕ್ಷಣೆ ಆಗಬೇಕು ಎಂದು ಪಂಚಾಯಿತಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ವೇಳೆ ತಹಶೀಲ್ದಾರ್ ಬಸವರಾಜು, ಭೂ ದಾಖಲೆಗಳ ಉಪ ನಿರ್ದೇಶಕಿ ವಿದ್ಯಾಯಿನಿ, ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ಎಂ.ಬಿ.ಪಾಟೀಲ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಟಿ.ಜಯರಾಮ್, ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ನಿರಂಜನ್ ಸೇರಿದಂತೆ ಇನ್ನಿತರ ಇಲಾಖೆಯ ಅಧಿಕಾರಿಗಳು ಇದ್ದರು.
ಶಾಲೆಗೆ ನ್ಯಾಯಾಧೀಶರ ದಿಢೀರ್ ಭೇಟಿ
ಕೆರೆ ಪರಿಶೀಲನೆಗೆ ಸಾಗುವ ವೇಳೆ ಚಾಮರಾಜನಗರ ತಾಲೂಕಿನ ಪುಟ್ಟನಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿ ಹಾಗೂ ನ್ಯಾಯಾಧೀಶರು ದಿಢೀರ್ ಭೇಟಿ ನೀಡಿದರು. ಶಾಲಾ ಮಕ್ಕಳೊಂದಿಗೆ ಮಾತನಾಡಿ ಕಲಿಕೆ ಪ್ರಗತಿ ವೀಕ್ಷಿಸಿದರು. ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಶಾಲೆಯಲ್ಲಿ ವಿದ್ಯಾರ್ಥಿನಿಗೆ ಗಣಿತ ಪಾಠವನ್ನು ಪ್ರೀತಿಯಿಂದ ಹೇಳಿಕೊಟ್ಟರು. ಜೊತೆಗೆ ಬಿಸಿಯೂಟ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಮಕ್ಕಳಿಂದ ಮಾಹಿತಿ ಪಡೆದರು.












Click it and Unblock the Notifications