ಅ. 24ರಿಂದ ನಾಲ್ಕು ದಿನ ಮಲೆ ಮಹದೇಶ್ವರನ ದರ್ಶನವಿಲ್ಲ
ಚಾಮರಾಜನಗರ, ಅಕ್ಟೋಬರ್ 22 : ದಸರಾ ಸಂದರ್ಭದಲ್ಲಿ ಭಕ್ತಾದಿಗಳಿಗೆ ಶ್ರೀ ಮಲೆ ಮಹದೇಶ್ವರನ ದರ್ಶನ ಸಿಗುವುದಿಲ್ಲ. ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ನಾಲ್ಕು ದಿನಗಳ ಕಾಲ ದೇವಾಲಯಕ್ಕೆ ಭಕ್ತರ ಪ್ರವೇಶ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಗುರುವಾರ ಚಾಮರಾಜನಗರ ಜಿಲ್ಲಾಧಿಕಾರಿ ಎಂ. ಆರ್. ರವಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಅಕ್ಟೋಬರ್ 24 ರಿಂದ 4 ದಿನಗಳ ಕಾಲ ಭಕ್ತರು ದೇವಾಲಯಕ್ಕೆ ಭೇಟಿ ನೀಡುವಂತಿಲ್ಲ.
ಆಯುಧ ಪೂಜೆ, ವಿಜಯದಶಮಿ ಹಿನ್ನಲೆಯಲ್ಲಿ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸುತ್ತಾರೆ. ಇದರಿಂದಾಗಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಲು ಸಾಧ್ಯವಿಲ್ಲ. ಆದ್ದರಿಂದ, ಭಕ್ತರ ಪ್ರವೇಶ ನಿಷೇಧಿಸಲಾಗಿದೆ.

ಕೋವಿಡ್ ಮಾರ್ಗಸೂಚಿ ಅನ್ವಯ ಹೆಚ್ಚು ಜನರು ಒಂದು ಕಡೆ ಸೇರುವಂತಿಲ್ಲ. ಸಾವಿರಾರು ಭಕ್ತರು ಆಗಮಿಸಿದರೆ ದೇವಾಲಯದಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಕಷ್ಟವಾಗಲಿದೆ. ಆದ್ದರಿಂದ ಜಿಲ್ಲಾಡಳಿತ ಈ ತೀರ್ಮಾನ ಕೈಗೊಂಡಿದೆ.
ಅಕ್ಟೋಬರ್ 21ರ ಮಾಹಿತಿಯಂತೆ ಚಾಮರಾಜನಗರದಲ್ಲಿ 33 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 5658. ಸಕ್ರಿಯ ಪ್ರಕರಣಗಳ ಸಂಖ್ಯೆ 636.
ಜಿಲ್ಲಾಧಿಕಾರಿಗಳ ಸೂಚನೆ : ಈ ವಾರಾಂತ್ಯದಿಂದ ಸಾಲು-ಸಾಲು ಸರ್ಕಾರಿ ರಜೆಗಳು ಇರುವುದರಿಂದ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದಾಗಿ ಪ್ರವಾಸಿ ತಾಣಗಳಲ್ಲಿ ಕೋವಿಡ್-19 ಹರಡುವಿಕೆ ತಡೆ ಮಾರ್ಗ ಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಗುಂಡ್ಲುಪೇಟೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನ, ಕೊಳ್ಳೇಗಾಲದ ಭರಚುಕ್ಕಿ ಜಲಪಾತ ಹಾಗೂ ಚಾಮರಾಜನಗರದ ಕೆ.ಗುಡಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ನಿರೀಕ್ಷೆ ಇದೆ.












Click it and Unblock the Notifications