ಮಹದೇಶ್ವರ ಬೆಟ್ಟದಲ್ಲಿ ಸಾಂಪ್ರದಾಯಿಕ ಶಿವರಾತ್ರಿ ಮಹಾರಥೋತ್ಸವ
ಚಾಮರಾಜನಗರ, ಮಾರ್ಚ್ 14; ಭಕ್ತಾದಿಗಳ ಸಮ್ಮುಖದಲ್ಲಿ ಮಲೆ ಮಾದಪ್ಪನ ಶಿವರಾತ್ರಿ ಜಾತ್ರಾ ಮಹೋತ್ಸವದ ಮಹಾರಥೋತ್ಸವ ಭಾನುವಾರ ಬೆಳಗ್ಗೆ 10:30ರ ಶುಭ ವೇಳೆಯಲ್ಲಿ ಜರುಗಿತು. ಸಾವಿರಾರು ಭಕ್ತರು ದೇವರ ದರ್ಶನ ಪಡೆದು ಪುನೀತರಾದರು.
ಶಿವರಾತ್ರಿ ಜಾತ್ರಾ ಮಹೋತ್ಸವದ ಮಹಾರಥೋತ್ಸವವು ನೂರಾರು ಸ್ಥಳೀಯ ಭಕ್ತಾದಿಗಳ ಸಮ್ಮುಖದಲ್ಲಿ ಸರಳವಾಗಿ, ಸಾಂಪ್ರದಾಯಿಕವಾಗಿ ವಿಧಿವಿಧಾನಗಳೊಂದಿಗೆ ಜರುಗಿತು. ಪ್ರತಿವರ್ಷ ಲಕ್ಷಾಂತರ ಭಕ್ತಾದಿಗಳ ಸಮ್ಮುಖದಲ್ಲಿ ಜರುಗುತ್ತಿದ್ದ ಮಹಾರಥೋತ್ಸವವು ಕೋವಿಡ್-19 ನಿಯಮಾವಳಿ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಕ್ತಾದಿಗಳ ಸಮ್ಮುಖದಲ್ಲಿ ನೆರವೇರಿತು.
ಶಿವರಾತ್ರಿ ಜಾತ್ರಾ ಮಹೋತ್ಸವದ ಪ್ರಮುಖ ಆಕರ್ಷಣೀಯ ರಥೋತ್ಸವಕ್ಕೂ ಮುನ್ನ ಬೇಡಗಂಪಣ ಅರ್ಚಕರಿಂದ ವಿಧಿವಿಧಾನಗಳೊಂದಿಗೆ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಬಳಿಕ ಅರ್ಚಕರ ತಂಡ ಉತ್ಸವಮೂರ್ತಿಯನ್ನು ಸಿದ್ಧಗೊಳಿಸಿ ಬಿಳಿ ಆನೆ ವಾಹನದ ಮೇಲಿಟ್ಟು ದೇವಾಲಯದ ಸುತ್ತಲೂ ಪ್ರದಕ್ಷಿಣೆ ಹಾಕಲಾಯಿತು.

ಈ ವೇಳೆ ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿಗಳನ್ನು ಮಂಗಳವಾದ್ಯ ಸಮೇತ ದೇವಾಲಯಕ್ಕೆ ಕರೆತರಲಾಯಿತು. ಬಳಿಕ ಉತ್ಸವಮೂರ್ತಿಯನ್ನು ಸತ್ತಿಗೆ -ಸುರಪಾನಿ, ಜಾಗಟೆ, ಮಂಗಳವಾದ್ಯ ಸಮೇತ ದೇವಾಲಯದ ಹೊರಾಂಗಣದಲ್ಲಿ ವಿವಿಧ ಬಗೆಯ ಪುಷ್ಪ, ತಳಿರು-ತೋರಣ, ಬಣ್ಣ-ಬಣ್ಣದ ಬಟ್ಟೆಗಳಿಂದ ಅಲಂಕೃತಗೊಳಿಸಿ ಸಿದ್ಧಗೊಳಿಸಲಾಗಿದ್ದ ಮಹಾರಥೋತ್ಸವದ ಬಳಿಗೆ ತಂದು ರಥದಲ್ಲಿ ಇಡಲಾಯಿತು.
ಬಿಳಿಆನೆ ಉತ್ಸವದ ಮೂಲಕ ರಥೋತ್ಸವದ ಬಳಿಗೆ ಹೊತ್ತು ತಂದ ಉತ್ಸವಮೂರ್ತಿಯನ್ನು ರಥದಲ್ಲಿಟ್ಟು ಬೇಡಗಂಪಣ ಅರ್ಚಕರು ಸಂಪ್ರದಾಯದಂತೆ ಪೂಜಾ ಕೈಂಕರ್ಯ ನೆರವೇರಿಸಿದರು. ಬಳಿಕ ಬೂದುಗುಂಬಳಕಾಯಿಯಿಂದ ಆರತಿ ಬೆಳಗಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ಈ ವೇಳೆ ಹಸಿರು ಸೀರೆ ಮತ್ತು ಕುಪ್ಪಸ ಧರಿಸಿದ್ದ ಬೇಡಗಂಪಣ ಹೆಣ್ಣುಮಕ್ಕಳು ಬೆಲ್ಲದ ಆರತಿ ಬೆಳಗುವ ಮೂಲಕ ರಥೋತ್ಸವಕ್ಕೆ ಮೆರುಗು ತಂದರು. ಇದೇ ವೇಳೆ ಮಂಗಳ ವಾದ್ಯ, ವೀರಗಾಸೆ ಕುಣಿತ ತಂಡಗಳು ರಥೋತ್ಸವಕ್ಕೆ ರಂಗುತಂದವು.
ರಥೋತ್ಸವ ಪ್ರಾರಂಭವಾಗುತ್ತಿದ್ದಂತೆ ಭಕ್ತಾದಿಗಳು ಉಘೇ ಮಾದಪ್ಪ, ಉಘೇ ಮಾದಪ್ಪ ಎಂಬ ಘೋಷವಾಕ್ಯದೊಂದಿಗೆ ಮಾದಪ್ಪನನ್ನು ನೆನೆದರು. ರಥೋತ್ಸವದ ವೇಳೆ ಹರಕೆ ಹೊತ್ತ ಭಕ್ತಾದಿಗಳು ತಮ್ಮ ಜಮೀನಿನಲ್ಲಿ ಬೆಳೆದಿದ್ದ ದವಸ-ಧಾನ್ಯ, ಚಿಲ್ಲರೆ ಹಣ, ಎಳ್ಳು, ಹೂ-ಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. ರಥೋತ್ಸವ ದೇವಾಲಯದ ಸುತ್ತಲೂ ಒಂದು ಪ್ರದಕ್ಷಿಣೆ ಹಾಕುವ ಮೂಲಕ ಸಂಪನ್ನವಾಯಿತು.












Click it and Unblock the Notifications