ಡಿ.12 ರಿಂದ 14ರವರೆಗೆ ಮಲೆ ಮಹದೇಶ್ವರನ ದರ್ಶನವಿಲ್ಲ
ಚಾಮರಾಜನಗರ, ಡಿಸೆಂಬರ್ 08: ಪವಾಡ ಪುರುಷನ ನೆಲೆಯಾಗಿರುವ ಜಿಲ್ಲೆಯ ಹನೂರು ತಾಲೂಕಿನ ಧಾರ್ಮಿಕ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಕಡೇ ಕಾರ್ತಿಕ ಸೋಮವಾರ ಮತ್ತು ಅಮಾವಾಸ್ಯೆ ಹಿನ್ನೆಲೆಯಲ್ಲಿ ಡಿ. 12ರಿಂದ 14ರವರೆಗೆ 3 ದಿನಗಳ ಕಾಲ ಭಕ್ತಾದಿಗಳ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.
ಕೊರೊನಾ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಈ ಆದೇಶ ಹೊರಡಿಸಿದ್ದಾರೆ. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷದಂತೆ ವಾರಾಂತ್ಯ ಎಣ್ಣೆಮಜ್ಜನ ಸೇವೆ, ಅಮಾವಾಸ್ಯೆ ಪೂಜಾ ಕೈಂಕರ್ಯ, ಐದನೇ ಕಾರ್ತಿಕ ಸೋಮವಾರ ಮತ್ತು ತೆಪ್ಪೋತ್ಸವ ನಡೆಯುತ್ತಿದೆ. ಆದರೆ ಈ ಬಾರಿ ಧಾರ್ಮಿಕ ಕೈಂಕರ್ಯ ಮತ್ತು ಪೂಜಾ ಕಾರ್ಯಗಳು ನಡೆಯುತ್ತವೆಯಾದರೂ ಈ ಪೂಜಾ ಕಾರ್ಯಗಳಲ್ಲಿ ಭಾಗವಹಿಸಲು ಹಾಗೂ ಮಾದಪ್ಪನ ದರ್ಶನಕ್ಕೆ ಯಾವುದೇ ಅವಕಾಶವಿಲ್ಲ. ಹೀಗಾಗಿ ಭಕ್ತರು ದೇವಾಲಯದತ್ತ ಬಾರದಂತೆ ಸೂಚಿಸಲಾಗಿದೆ.
ಮಲೆಮಹದೇಶ್ವರ ಬೆಟ್ಟದಲ್ಲಿ 2 ಕೋಟಿಗೂ ಹೆಚ್ಚು ಕಾಣಿಕೆ ಸಂಗ್ರಹ
ಭಕ್ತರು ಆಗಮಿಸಿದರೆ ಕೋವಿಡ್-19 ನಿಯಮಾವಳಿ ಪಾಲನೆ ಮಾಡಲು ಕಷ್ಟವಾಗುತ್ತದೆ. ಹೀಗಾಗಿ ಭಕ್ತಾದಿಗಳ ಸುರಕ್ಷತೆ ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮೂರು ದಿನಗಳ ಕಾಲ ಭಕ್ತಾದಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸುವಂತೆ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಮನವಿ ಪತ್ರ ಸಲ್ಲಿಸಿದ್ದರು.
Recommended Video
ಈ ಹಿನ್ನೆಲೆ ಡಿಸೆಂಬರ್ 12 ರಿಂದ 14 (ಶನಿವಾರ, ಭಾನುವಾರ ಮತ್ತು ಸೋಮವಾರ) ಭಕ್ತಾದಿಗಳ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಆದೇಶ ಹೊರಡಿಸಿದ್ದಾರೆ. ಆದರೆ ಆ ದಿನಗಳಂದು ಸರ್ಕಾರಿ ಕೆಲಸ ನಿಮಿತ್ತ ಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ಜನಪ್ರತಿನಿಧಿಗಳು ಮತ್ತು ಅಧಿಕಾರಿ, ಸಿಬ್ಬಂದಿ ವರ್ಗದವರಿಗೆ ಯಾವುದೇ ರೀತಿಯ ಅಡ್ಡಿ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.