ಬಂಡೀಪುರ ಕಾಡಂಚಿನ ರೈತರಿಗೆ ನೆಮ್ಮದಿಯ ಬದುಕೇ ಇಲ್ಲ!
ಚಾಮರಾಜನಗರ, ಅಕ್ಟೋಬರ್.23: ಚಾಮರಾಜನಗರ ಜಿಲ್ಲೆಯ ಕಾಡಂಚಿನ ಗ್ರಾಮಗಳ ರೈತರು ಇದೀಗ ಸಂಕಷ್ಟಕ್ಕೀಡಾಗಿದ್ದಾರೆ. ಅರಣ್ಯದಿಂದ ನಾಡಿನತ್ತ ಬರುತ್ತಿರುವ ಕಾಡಾನೆಗಳು ಸೇರಿದಂತೆ ಹಲವು ಪ್ರಾಣಿಗಳು ಕೃಷಿಯನ್ನು ನಾಶ ಮಾಡುತ್ತಿರುವುದಲ್ಲದೆ, ಸಾಕುಪ್ರಾಣಿಗಳನ್ನೂ ಬಲಿತೆಗೆದುಕೊಳ್ಳುತ್ತಿವೆ.
ಮಹದೇಶ್ವರ ಬೆಟ್ಟ ವ್ಯಾಪ್ತಿಯಲ್ಲಿ ರಸ್ತೆಗಳಲ್ಲಿ ಚಿರತೆ, ಕಾಡಾನೆ ಕಾಣಿಸಿಕೊಂಡರೆ ಇತ್ತ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಓಂಕಾರ್ ವಲಯದ ಅರಣ್ಯ ಪ್ರದೇಶದಲ್ಲಿ ರೈಲ್ವೇ ಕಂಬಿಗಳನ್ನು ಅಳವಡಿಸಿದ್ದರೂ ಅವುಗಳನ್ನು ದಾಟಿ ನಾಡಿಗೆ ಬಂದು ರೈತರ ಕೃಷಿ ಜಮೀನಿಗೆ ನುಗ್ಗುತ್ತಿವೆ.
ಇದರಿಂದಾಗಿ ಕಷ್ಟಪಟ್ಟು ಮಾಡಿದ ಕೃಷಿ ಕಾಡುಪ್ರಾಣಿಗಳ ಪಾಲಾಗಿ ರೈತ ನಷ್ಟದ ಹಾದಿಯಲ್ಲೇ ಸಾಗುವಂತಾಗಿದೆ. ಓಂಕಾರ ವಲಯದ ಬೋಳೇಗೌಡನಕಟ್ಟೆ ಪ್ರದೇಶದಿಂದ ಹೊರಬರುವ ಆನೆಗಳು ಶ್ರೀಕಂಠಪುರ, ಹೊಸಪುರ, ಕೋಟೆಕೆರೆ, ಯಡವನಹಳ್ಳಿ ಗ್ರಾಮಗಳ ಜಮೀನುಗಳಿಗೆ ನುಗ್ಗುತ್ತಿವೆ. ಕಾಲಿಗೆ ಸಿಕ್ಕ ಬೆಳೆಯನ್ನು ತುಳಿಯುತ್ತಾ ತಿನ್ನುತ್ತಾ ಸಾಗುತ್ತವೆ.
ಇದರಿಂದ ಸಾಲ ಮಾಡಿ ಬೆಳೆದ ಕೃಷಿ ಫಸಲುಗಳು ಆನೆಗಳ ಪಾಲಾಗುತ್ತಿವೆ. ಈ ವ್ಯಾಪ್ತಿಯಲ್ಲಿನ ಕಾಡಾನೆಗಳ ಹಾವಳಿಯನ್ನು ತಡೆಗಟ್ಟಿ ಎಂದು ರೈತರು ಮನವಿ ಮಾಡುತ್ತಲೇ ಬರುತ್ತಿದ್ದಾರೆಯಾದರೂ ಪ್ರಯೋಜನವಾಗಿಲ್ಲ.
ಇಷ್ಟಕ್ಕೂ ಈ ವ್ಯಾಪ್ತಿಯ ಗ್ರಾಮಗಳಿಗೆ ಕಾಡಾನೆಗಳು ರಾಜಾರೋಷವಾಗಿ ಬರಲು ಕಾರಣವೂ ಇದೆ. ಅದೇನೆಂದು ಓದಿ...

ದುಸ್ಥಿತಿಗೀಡಾದ ಸೋಲಾರ್ ಬೇಲಿ
ಕಾಡಂಚಿನಲ್ಲಿ ರೈಲ್ವೆ ಕಂಬಿ ಅಳವಡಿಸಿ ಅರಣ್ಯದಿಂದ ಹೊರಬರುವುದನ್ನು ತಡೆಗಟ್ಟುವ ವ್ಯವಸ್ಥೆಯಿಲ್ಲ. ರೈಲ್ವೆಕಂಬಿ ಅಳವಡಿಸಲು ಹೆಚ್ಚಿನ ಅನುದಾನ ಬೇಕಾಗಿದ್ದರಿಂದ ಆ ಕಾರ್ಯ ನಿಂತು ಹೋಗಿದೆ. ಇಲ್ಲಿರುವ ಸೋಲಾರ್ ಬೇಲಿ ದುಸ್ಥಿತಿಗೀಡಾಗಿದೆ.
ಅದನ್ನು ದುರಸ್ತಿ ಮಾಡುವ ಕಾರ್ಯ ನಡೆಯದ ಕಾರಣದಿಂದಾಗಿ ಕಾಡಾನೆಗಳು ಕಾಡಿನಿಂದ ನಾಡಿಗೆ ಯಾವುದೇ ಅಡೆ ತಡೆಯಿಲ್ಲದೆ ಬರುತ್ತಿವೆ. ನಾಡಿಗೆ ಬಂದ ಕಾಡಾನೆಗಳ ಹಿಂಡನ್ನು ಮತ್ತೆ ಅರಣ್ಯಕ್ಕೆ ಅಟ್ಟುವ ವೇಳೆಗೆ ಅವು ಎಲ್ಲೆಂದರಲ್ಲಿ ಓಡುವುದರಿಂದ ರೈತರು ಬೆಳೆದ ಬೆಳೆಗಳು ನಾಶವಾಗುತ್ತಿವೆ.
ಇತ್ತೀಚೆಗೆ ಎಂಟು ಗಂಡಾನೆಗಳು ತೊಂಡವಾಡಿ ಗ್ರಾಮದ ಸಿದ್ದನಾಯ್ಕ ಎಂಬುವವರ ಜಮೀನಿಗೆ ದಾಳಿಮಾಡಿ ಅಲ್ಲಿ ಬೆಳೆದಿದ್ದ ಟೊಮೆಟೊ, ಮೆಣಸು ಹಾಗೂ ತೆಂಗಿನ ಸಸಿಗಳನ್ನು ನಾಶಪಡಿಸಿದ್ದಲ್ಲದೆ ಜಮೀನಿನಲ್ಲಿ ಅಳವಡಿಸಿದ್ದ ನೀರಾವರಿಯ ಡ್ರಿಪ್ ಪೈಪ್ಗಳನ್ನು ಸಹ ಕಿತ್ತುಹಾಕಿದ್ದವು.
ಇಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಲೇ ಇದ್ದು, ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದ ಸ್ಥಿತಿ ನಿರ್ಮಾಣವಾಗಿದೆ.

ಚಿರತೆಯ ಕಾಟಕ್ಕೆ ಜನ ಹೈರಾಣ
ಕಾಡಾನೆಗಳ ಹಾವಳಿ ಒಂದೆಡೆಯಾದರೆ ಮತ್ತೊಂದೆಡೆ ಚಿರತೆಗಳು ಸದ್ದಿಲ್ಲದೆ ಸಾಕುಪ್ರಾಣಿಗಳ ಮೇಲೆ ದಾಳಿ ಕೊಲ್ಲುತ್ತಿವೆ. ಅದರಲ್ಲೂ ಹಸುಗಳ ಮೇಲೆ ದಾಳಿ ಮಾಡಿ ಸಾಯಿಸುತ್ತಿರುವುದರಿಂದ ರೈತರಿಗೆ ನಷ್ಟದ ಮೇಲೆ ನಷ್ಟವಾಗುತ್ತಿದೆ.
ರಾತ್ರಿಯಾಯಿತೆಂದರೆ ಕೊಟ್ಟಿಗೆಯಲ್ಲಿ ಕಟ್ಟಿದ ಹಸು ಮತ್ತು ಕುರಿ, ಮೇಕೆಗಳ ಮೇಲೆ ದಾಳಿ ಮಾಡುವ ಚಿರತೆ ಕೊಂದು ರಕ್ತ ಕುಡಿದು ಹೋಗುತ್ತಿವೆ. ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪದ ಕಲ್ಲಹಳ್ಳಿ ಗ್ರಾಮದ ಗುರುಸಿದ್ದಪ್ಪ ಎಂಬುವರ ಜಮೀನಿನಲ್ಲಿ ಮೇಯುತ್ತಿದ್ದ ಹಸುಗಳ ಮೇಲೆ ದಾಳಿ ನಡೆಸಿದ ಚಿರತೆ ಹಸುವನ್ನು ಕೊಂದು ಪರಾರಿಯಾಗಿದೆ.
ಗ್ರಾಮಗಳ ಜಮೀನಿನ ಬದಿಯ ಕುರುಚಲು ಕಾಡುಗಳಲ್ಲಿ ವಾಸ್ತವ್ಯ ಹೂಡುವ ಚಿರತೆ ಹೊಂಚು ಹಾಕಿ ಸಾಕುಪ್ರಾಣಿಗಳ ಮೇಲೆ ದಾಳಿ ಮಾಡುತ್ತಿದೆ. ಅರಣ್ಯ ಇಲಾಖೆ ಕಣ್ಣಿಗೂ ಕಾಣಿಸದೆ, ಬೋನಿಗೂ ಬೀಳದೆ ತಪ್ಪಿಸಿಕೊಳ್ಳುತ್ತಿರುವ ಚಿರತೆಯ ಕಾಟಕ್ಕೆ ಜನ ಹೈರಾಣರಾಗಿದ್ದಾರೆ.

ಭಯ ಹುಟ್ಟಿಸಿದ ಹುಲಿ ಹೆಜ್ಜೆ
ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶದ ತಮಿಳುನಾಡಿನ ಗಡಿ ಭಾಗಕ್ಕೆ ಹೊಂದಿಕೊಂಡಂತಿರುವ ಕಾಡಂಚಿನ ಗ್ರಾಮವಾದ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ರೈತ ಮಹದೇವಪ್ಪ ಎಂಬುವರ ಜಮೀನಿನಲ್ಲಿ ರಾತ್ರಿ ಹುಲಿ ಹೆಜ್ಜೆಗಳು ಕಂಡು ಬಂದಿರುವುದರಿಂದ ಗ್ರಾಮ ವ್ಯಾಪ್ತಿಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಹುಲಿ ಹೆಜ್ಜೆಗಳನ್ನು ನೋಡಿದ ಬಳಿಕ ಜಮೀನಿಗೆ ತೆರಳಲು, ಗ್ರಾಮದಲ್ಲಿ ಓಡಾಡಲು ಜನ ಹೆದರುತ್ತಿದ್ದಾರೆ. ಆದರೆ ಹುಲಿ ಮಾತ್ರ ಯಾರ ಕಣ್ಣಿಗೂ ಬಿದ್ದಿಲ್ಲ. ಜಾನುವಾರು ಅಥವಾ ಜನರ ಮೇಲೆ ದಾಳಿ ಮಾಡಿಬಿಟ್ಟರೆ ಏನಪ್ಪಾ ಗತಿ ಎಂದು ಜನರು ಭಯದಲ್ಲೇ ದಿನ ಕಳೆಯುತ್ತಿದ್ದಾರೆ. ಅರಣ್ಯ ಇಲಾಖೆ ಹುಲಿಯನ್ನು ಸೆರೆ ಹಿಡಿದು ಆತಂಕ ದೂರ ಮಾಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಕಾಡುಹಂದಿಗಳ ಅಟ್ಟಹಾಸ
ಇದೆಲ್ಲದರ ನಡುವೆ ಕಾಡುಹಂದಿಗಳ ಹಾವಳಿಯೂ ರೈತರಿಗೆ ಸಂಕಟ ತಂದಿದೆ. ಹಿಂಡು ಹಿಂಡಾಗಿ ಬರುವ ಕಾಡು ಹಂದಿಗಳು ರೈತರ ಬೆಳೆಯನ್ನು ಸರ್ವ ನಾಶ ಮಾಡುವುದಲ್ಲದೆ, ರೈತರ ಮೇಲೆಯೇ ದಾಳಿ ಮಾಡುತ್ತಿವೆ. ಈಗಾಗಲೇ ಕಾಡುಹಂದಿಗೆ ಕೆಲವು ರೈತರು ಪ್ರಾಣ ಬಿಟ್ಟರೆ ಮತ್ತೆ ಕೆಲವರು ಗಾಯಗೊಂಡಿದ್ದಾರೆ.
ಒಟ್ಟಾರೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅರಣ್ಯದಂಚಿನಲ್ಲಿರುವ ರೈತರಿಗೆ ಒಂದಲ್ಲ ಒಂದು ರೀತಿಯ ಸಮಸ್ಯೆ ತಲೆದೋರುತ್ತಲೇ ಇದ್ದು ನೆಮ್ಮದಿಯ ಬದುಕೇ ಇಲ್ಲದಂತಾಗಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications