ಬಂಡೀಪುರದಲ್ಲಿ ಕಾಳ್ಗಿಚ್ಚು ನಂದಿಸಲು ಹೋದ ಸಿಬ್ಬಂದಿ ಸಜೀವ ದಹನ
ಚಾಮರಾಜನಗರ ಜಿಲ್ಲೆಯ ಬಂಡೀಪುರ ಅರಣ್ಯದಲ್ಲಿ ಕಿಡಿಗೇಡಿಗಳು ಹಾಕಿದ ಬೆಂಕಿಯನ್ನು ನಂದಿಸುವ ಯತ್ನದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ. ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ
ಗುಂಡ್ಲುಪೇಟೆ, ಫೆಬ್ರವರಿ 18: ಬಂಡೀಪುರ ಹುಲಿ ಯೋಜನೆಯ ಕಲ್ಕೆರೆ ವಲಯದಲ್ಲಿ ಕಿಡಿಗೇಡಿಗಳು ಹಚ್ಚಿದ ಬೆಂಕಿಯನ್ನು ನಂದಿಸಲು ಹೋದ ಅರಣ್ಯ ಸಿಬ್ಬಂದಿಯೊಬ್ಬರು ಸಜೀವ ದಹನವಾಗಿ, ಮೂವರು ಗಾಯಗೊಂಡ ಘಟನೆ ಶನಿವಾರ ನಡೆದಿದೆ. ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮವಾಗಿ 350 ಎಕರೆಗೂ ಹೆಚ್ಚಿನ ಅರಣ್ಯ ಸಂಪತ್ತು ಭಸ್ಮವಾಗಿದ್ದು, ಬೆಂಕಿ ನಂದಿಸಲು ಅರಣ್ಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಘಟನೆಯಲ್ಲಿ ಸಾವನ್ನಪ್ಪಿದ ಅರಣ್ಯ ಸಿಬ್ಬಂದಿ ಮುರುಗಪ್ಪ (30) ಎಂದು ಗುರುತಿಸಲಾಗಿದ್ದು, ಇವರು ಮೂಲತಃ ವಿಜಯಪುರ ಜಿಲ್ಲೆಯವರಾಗಿದ್ದಾರೆ. ಗಾಯಗೊಂಡ ಅರಣ್ಯಾಧಿಕಾರಿ ಗಂಗಾಧರ್ ಸೇರಿದಂತೆ ಮೂವರನ್ನು ಎಚ್.ಡಿ.ಕೋಟೆ ತಾಲೂಕಿನ ಸರಗೂರು ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ.[ಚಾಮರಾಜನಗರ: ಕೆಸರು ನೀರು ಕುಡಿದು ಹೆಣ್ಣಾನೆ ಸಾವು]

ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕಲ್ಕೆರೆ ವಲಯಕ್ಕೆ ಸೇರಿದ ಐನೂರು ಮಾರಿಗುಡಿ ಸಮೀಪ ಸೇರಿ 5 ಕಡೆ ಕಿಡಿಗೇಡಿಗಳು ಬೆಂಕಿಯಿಟ್ಟ ಪರಿಣಾಮವಾಗಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಕೆನ್ನಾಲಿಗೆ ವ್ಯಾಪಿಸಿದೆ. ಬಂಡೀಪುರ, ಮದ್ದೂರು, ಮೂಲೆಹೊಳೆ, ಗೋಪಾಲಸ್ವಾಮಿ ಬೆಟ್ಟವಲಯದ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.[ಬಂಡೀಪುರದಲ್ಲಿ 10 ವರ್ಷ ವಯಸ್ಸಿನ ಹೆಣ್ಣು ಹುಲಿ ಸಾವು]

ಬಂಡೀಪುರ ಹುಲಿಯೋಜನೆ ನಿರ್ದೇಶಕ ಟಿ.ಹೀರಾಲಾಲ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕೆ.ಪರಮೇಶ್, ಡಿ.ಎ.ಮರಡಿಮನಿ ಇತರರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.












Click it and Unblock the Notifications