ಚಾಮರಾಜನಗರ; ಕೊರೊನಾಗೆ ನಾಲ್ಕು ದಿನಗಳಲ್ಲಿ ನಾಲ್ಕು ಸಾವು
ಚಾಮರಾಜನಗರ, ಜುಲೈ 14: ಕೊರೊನಾ ಸೋಂಕಿಗೆ ಚಾಮರಾಜನಗರ ಜಿಲ್ಲೆಯಲ್ಲಿ ಇಂದು ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಕೊರೊನಾ ಸೋಂಕಿನಿಂದ ಜಿಲ್ಲೆಯಲ್ಲಿ ನಾಲ್ಕು ದಿನಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.
ಗುಂಡ್ಲುಪೇಟೆಯ ಎಪಿಎಂಸಿ ಮಾಜಿ ನಿರ್ದೇಶಕರಾಗಿದ್ದ ಮರದ ವ್ಯಾಪಾರಿಯೊಬ್ಬರಿಗೆ ನಾಲ್ಕು ದಿನಗಳ ಹಿಂದೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಇವರನ್ನು ಚಾಮರಾಜನಗರದ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಐಸಿಯು ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯ ಪತ್ನಿ, ಮಗ, ಮಗಳು, ಅಳಿಯನಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರನ್ನೂ ಚಾಮರಾಜನಗರ ಜಿಲ್ಲೆ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊರೊನಾ ಸೋಂಕಿತರು ಅಸ್ಪೃಶ್ಯರಲ್ಲ: ಗುಣಮುಖಗೊಂಡ ಚಾಮರಾಜನಗರ ಮಹಿಳೆ ಮಾತು
ಜುಲೈ 11 ರಂದು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಕಾಮಗೆರೆಯ 58 ವರ್ಷದ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದರು. ಜುಲೈ 12ರಂದು ಕೊಳ್ಳೇಗಾಲದ 65 ವರ್ಷದ ನಿವೃತ್ತ ನರ್ಸಿಂಗ್ ಸೂಪರಿಂಟೆಂಡೆಂಟ್ ಸೋಂಕಿನಿಂದ ಸಾವನ್ನಪ್ಪಿದ್ದರು. ಜುಲೈ 13ರಂದು ಪಾಳ್ಯ ಗ್ರಾಮದ 60 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದರು. ಇದೀಗ ಗುಂಡ್ಲುಪೇಟೆಯ 65 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ದಿನಕ್ಕೆ ಒಬ್ಬರು ಹೀಗೆ ಸೋಂಕಿಗೆ ಬಲಿಯಾಗುತ್ತಿರುವುದು ಜನರಲ್ಲಿ ಆತಂಕ ತಂದಿದೆ. ಈವರೆಗೆ ಚಾಮರಾಜನಗರ ಜಿಲ್ಲೆಯಲ್ಲಿ 187 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಗುಂಡ್ಲುಪೇಟೆ ತಾಲೂಕಿನಲ್ಲೇ ಸೋಂಕಿತರ ಸಂಖ್ಯೆ 103 ಆಗಿದೆ.