Himavad Gopalaswamy Hill: ಹಿಮವದ್ ಗೋಪಾಲಸ್ವಾಮಿ ದರ್ಶನಕ್ಕೆ ಆಗಮಿಸುವವರಿಗೆ ಶಾಕ್.!
ಚಾಮರಾಜನಗರ, ಫೆಬ್ರವರಿ, 15: ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ದೇವರ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ತಾಲ್ಲೂಕು ಆಡಳಿತ ಶಾಕ್ ನೀಡಿದ್ದು, ಭಕ್ತಾದಿಗಳಿಗೆ ಮಧ್ಯಾಹ್ನ 3 ಗಂಟೆಯವರೆಗೆ ಮಾತ್ರ ದೇವರ ದರ್ಶನಕ್ಕೆ ಅನುಮತಿ ನೀಡಿ ಆದೇಶ ಹೊರಡಿಸಿದೆ.
ಈ ಹಿಂದೆ ಬೆಳಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ದೇವರ ದರ್ಶನಕ್ಕೆ ಭಕ್ತಾದಿಗಳಿಗೆ ಅವಕಾಶವಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿಗರು ಮತ್ತು ಭಕ್ತಾದಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದ್ದು, ಸಂಜೆ ಸಮಯದಲ್ಲಿ ಬರುವ ಪ್ರವಾಸಿಗರು ದೇವಸ್ಥಾನದ ಬಳಿ ಆಗಮಿಸುವ ಕಾಡಾನೆಯ ಬಳಿ ತೆರಳಿ ಸೆಲ್ಪಿ ತೆಗೆದುಕೊಳ್ಳುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಿನ ರೀತಿಯಲ್ಲಿ ಹರಿದಾಡುತ್ತಿತ್ತು.

ಕಾಡಾನೆಯಿಂದ ಪ್ರವಾಸಿಗರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಬಂಡೀಪುರ ಸಹಾಯಕ ಅರಣ್ಯ ಅಧಿಕಾರಗಳ ಕೋರಿಕೆಯ ಮೇರೆಗೆ ತಹಶೀಲ್ದಾರ್ ಟಿ.ರಮೇಶ್ ಬಾಬು ಮಧ್ಯಾಹ್ನ 3 ಗಂಟೆ ಬೆಟ್ಟಕ್ಕೆ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಈ ಮೂಲಕ ಬೆಳಗ್ಗೆ 9 ಗಂಟೆಯಿಂದ ಸಂಜೆ 3ರ ವರೆಗೆ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. 3 ಗಂಟೆಗೆ ದೇವಸ್ಥಾನದಿಂದ ಹೊರಡುವ ಬಸ್ನಲ್ಲಿ ಭಕ್ತಾದಿಗಳು ಹಾಗೂ 4-30ಕ್ಕೆ ಹೊರಡುವ ಬಸ್ನಲ್ಲಿ ದೇವಸ್ಥಾನದ ಸಿಬ್ಬಂದಿ ವಾಪಸ್ ತೆರಳಲು ಸೂಚನೆ ನೀಡಿದ್ದಾರೆ. ಜೊತೆಗೆ ಭಕ್ತರಿಗೆ ನೀಡುವ ಪ್ರಸಾದ ವಾಸನೆಯಿಂದ ಕಾಡಾನೆಯು ದೇವಸ್ಥಾನದ ಬಳಿ ಬರುವ ಸಂಭವವಿರುವುದರಿಂದ ಪ್ರಸಾದ ನೀಡಲು ಅರಣ್ಯದ ಹೊರಗಿನ ಬೆಟ್ಟದ ತಪ್ಪಲಿನಲ್ಲಿ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಅರ್ಚಕರಿಗೆ ಸೂಚನೆ ನೀಡಿದ್ದಾರೆ.
ಹಂಗಳ ಹೋಬಳಿ ವ್ಯಾಪ್ತಿಯಲ್ಲಿರುವ ಇಬ್ಬರು ಅಧಿಕಾರಿಗಳನ್ನು ಪ್ರತಿ ಶನಿವಾರ ಮತ್ತು ಭಾನುವಾರ ಭಕ್ತಾದಿಗಳನ್ನು ನಿಯಂತ್ರಿಸಲು ನಿಯೋಜನೆ ಮಾಡುವಂತೆ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.












Click it and Unblock the Notifications