ಬಂಡೀಪುರ ಸೂಕ್ಷ್ಮ ಪರಿಸರ ವಲಯದಲ್ಲಿ ತಲೆ ಎತ್ತಿದ ಅಕ್ರಮ ಕಟ್ಟಡ
ಚಾಮರಾಜನಗರ, ಏಪ್ರಿಲ್ 30: ನಿಸರ್ಗ ಸುಂದರ ತಾಣ ಬಂಡೀಪುರ ದೇಶ ವಿದೇಶಗಳ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ಇದನ್ನೇ ಬಂಡವಾಳವಾಗಿಸಿಕೊಂಡು ಕೆಲವು ಪ್ರಭಾವಿಗಳು ಹೋಂ ಸ್ಟೇ, ರೆಸಾರ್ಟ್ಗಳನ್ನು ನಿರ್ಮಿಸಿ ಹಣ ಸಂಪಾದಿಸಲು ಮುಂದಾಗಿದ್ದಾರೆ.
Recommended Video
ಈಗಾಗಲೇ ಹಲವಾರು ಹೋಂಸ್ಟೇ, ರೆಸಾರ್ಟ್ಗಳು ಕಾರ್ಯ ನಿರ್ವಹಿಸುತ್ತಿವೆ. ಬಂಡೀಪುರ ಸುತ್ತಮುತ್ತ ವಾಣಿಜ್ಯ ಉದ್ದೇಶಕ್ಕಾಗಿ ಯಾವುದೇ ರೀತಿಯ ಕಟ್ಟಡಗಳನ್ನು ಕಟ್ಟಬಾರದು ಎಂಬ ಕಾನೂನು ಇದ್ದರೂ ಅದನ್ನು ಉಲ್ಲಂಘಿಸಿ ಇಲ್ಲಿ ಕಟ್ಟಡ ಕಟ್ಟಲಾಗಿದೆ. ಬಂಡೀಪುರ ಸುತ್ತಮುತ್ತ ಮನೆ ನಿರ್ಮಾಣಕ್ಕೆ ಅನುಮತಿ ಪಡೆದು ಬಳಿಕ ಅಕ್ರಮ ಹೋಂ ಸ್ಟೇಗಳನ್ನು ನಿರ್ಮಿಸಲಾಗಿದೆ.
ಇಲ್ಲಿ ಸೂಕ್ಷ್ಮ ಪರಿಸರ ವಲಯದ ಅಧಿಸೂಚನೆಯನ್ನು ಉಲ್ಲಂಘಿಸಿ ವಾಣಿಜ್ಯ ಉದ್ದೇಶಕ್ಕಾಗಿ ಕಟ್ಟಡ ಕಟ್ಟಿರುವುದು ಗೌಪ್ಯವಾಗಿ ಉಳಿದಿಲ್ಲ. ಇದೀಗ ಈ ವ್ಯಾಪ್ತಿಯಲ್ಲಿ 12 ಬೃಹತ್ ಕಟ್ಟಡ ನಿರ್ಮಾಣ ಮಾಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ವಿಷಯ ತಿಳಿಯುತ್ತಲೇ ಈ ಕಟ್ಟಡವನ್ನು ಕೂಡಲೇ ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗೆ ಬಂಡೀಪುರ ಹುಲಿಯೋಜನೆಯ ನಿದೇರ್ಶಕ ಟಿ. ಬಾಲಚಂದ್ರ ಪತ್ರ ಬರೆದಿದ್ದಾರೆ.

ಕೇಂದ್ರ ಸರ್ಕಾರದ ಅಧಿಸೂಚನೆ ಪ್ರಕಾರ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಸೂಕ್ಷ್ಮ ಪರಿಸರ ವಲಯ ವ್ಯಾಪ್ತಿಗೆ ಗುಂಡ್ಲುಪೇಟೆ, ಚಾಮರಾಜನಗರ, ಎಚ್.ಡಿ.ಕೋಟೆ ಹಾಗೂ ನಂಜನಗೂಡು ತಾಲೂಕಿನ ಕಾಡಂಚಿನ 123 ಗ್ರಾಮಗಳು ಬರುತ್ತವೆ. ಇಲ್ಲಿ ಮನೆಗಳನ್ನು ನಿರ್ಮಿಸಬಹುದೇ ವಿನಃ ಯಾವುದೇ ವಾಣಿಜ್ಯ ಉದ್ದೇಶದಿಂದ ಕಟ್ಟಡಗಳನ್ನು ನಿರ್ಮಿಸುವಂತಿಲ್ಲ. ಆದರೆ ಬಂಡೀಪುರದ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆಗೆ ಸೇರಿದ ಹಾಗೂ ಮಂಗಳ ಗ್ರಾ.ಪಂ ವ್ಯಾಪ್ತಿಯಲ್ಲಿ ವಾಣಿಜ್ಯ ಉದ್ದೇಶಕ್ಕೆ ಬೃಹತ್ ಕಟ್ಟಡ ನಿರ್ಮಿಸುತ್ತಿರುವುದು ಬೆಳಕಿಗೆ ಬಂದ ಹಿನ್ನಲೆಯಲ್ಲಿ ಕ್ರಮ ಜರುಗಿಸುವಂತೆ ಜಿಲ್ಲಾಡಳಿತಕ್ಕೆ ಪತ್ರ ಬರೆಯಲಾಗಿದ್ದು, ಕೂಡಲೇ ಕಟ್ಟಡವನ್ನು ನೆಲಸಮಗೊಳಿಸುವಂತೆಯೂ ಮನವಿ ಮಾಡಲಾಗಿದೆ.
ಈ ಸಂಬಂಧ ಅರಣ್ಯ ಇಲಾಖೆಯಿಂದ ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಜೊತೆಗೆ ಕೂಡಲೇ ಅಕ್ರಮ ಕಟ್ಟಡ ನೆಲಸಮಗೊಳಿಸಲು ಪೊಲೀಸ್ ಇಲಾಖೆ, ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ, ಪ್ರವಾಸೋದ್ಯಮ ಇಲಾಖೆ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಉಪವಿಭಾಗಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಬಂಡೀಪುರ ವ್ಯಾಪ್ತಿಯಲ್ಲಿ ವಾಣಿಜ್ಯ ಚಟುವಟಿಕೆ ನಡೆಸುತ್ತಿರುವವರು ಹೊರಗಿನವರಾಗಿದ್ದು, ಪ್ರಭಾವಿಗಳಾಗಿದ್ದಾರೆ. ಹೀಗಾಗಿ ಅವರು ಕಾನೂನು ಉಲ್ಲಂಘಿಸಿ ತಮ್ಮ ಕಾರ್ಯ ಚಟುವಟಿಕೆ ನಡೆಸುತ್ತಿರುವುದು ಮಾಮೂಲಿಯಾಗಿದೆ. ಇದೀಗ ಅಕ್ರಮವಾಗಿ ನಿರ್ಮಿಸಿರುವ ಕಟ್ಟಡವನ್ನು ತೆರವುಗೊಳಿಸುವ ಬಗ್ಗೆ ಸಂಬಂಧಿಸಿದವರು ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.












Click it and Unblock the Notifications