ಚಾಮುಲ್ ಅಕ್ರಮ ನೇಮಕಾತಿ; ವಿಚಾರಣೆಗೆ ಸರ್ಕಾರದ ಆದೇಶ
ಚಾಮರಾಜನಗರ, ಫೆಬ್ರವರಿ 12: ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟ (ಚಾಮುಲ್) ದಲ್ಲಿ ನಡೆದಿರುವ ಅಕ್ರಮ ನೇಮಕಾತಿ ಆರೋಪಗಳ ಕುರಿತು ವಿಚಾರಣೆ ನಡೆಸಿ, ವರದಿ ನೀಡಲು ಸಹಕಾರ ಸಂಘಗಳ ಜಂಟಿ ನಿಬಂಧಕರನ್ನು ನೇಮಿಸಿ ರಾಜ್ಯ ಸಹಕಾರ ಸಂಘಗಳ ನಿಬಂಧಕರು ಆದೇಶ ಹೊರಡಿಸಿದ್ದಾರೆ.
ಮಲೆಮಹದೇಶ್ವರ ಬೆಟ್ಟಕ್ಕೆ ಇತ್ತೀಚೆಗೆ ಆಗಮಿಸಿದ್ದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ದೂರು ನೀಡಿದ್ದ ಚಾಮರಾಜನಗರ ಜಿಲ್ಲಾಭಿವೃದ್ಧಿ ಹೋರಾಟ ಸಮಿತಿ, ಚಾಮುಲ್ ಅಕ್ರಮ ನೇಮಕಾತಿ ಕುರಿತು ತನಿಖೆ ನಡೆಸುವಂತೆ ಒತ್ತಾಯಿಸಿತ್ತು.
ಹಿಂದಿನ ಜಿಲ್ಲಾಧಿಕಾರಿಗಳು ನೇಮಿಸಿದ್ದ ಜಂಟಿ ತನಿಖಾ ಸಮಿತಿ ನೀಡಿರುವ ವರದಿ ಬಗ್ಗೆ ಸರ್ಕಾರ ಒಂದು ವರ್ಷ ಕಳೆದರೂ ಯಾವುದೇ ಕ್ರಮ ಕೈಗೊಳ್ಳದೆ ಇರುವ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದಿತ್ತು. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಕ್ರಮ ಕೈಗೊಂಡಿರುವ ಸಹಕಾರ ಸಂಘಗಳ ನಿಬಂಧಕರು, ಸಹಕಾರ ಸಂಘಗಳ ಕಾಯ್ದೆ 1959 ಕಲಂ 64ರ ಅವಕಾಶಗಳ ಅನ್ವಯ ಶಾಸನ ಬದ್ಧ ವಿಚಾರಣೆ ಕೈಗೊಂಡು ವರದಿ ನೀಡಲು ಸಹಕಾರ ಸಂಘಗಳ ಜಂಟಿ ನಿಬಂಧಕ ಎಂ. ಡಿ. ನರಸಿಂಹಮೂರ್ತಿ ಅವರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.

ವಿವಾದವೇನು?; 2 ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿರುವ ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟದಲ್ಲಿ ಖಾಲಿ ಇದ್ದ 72 ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗಿತ್ತು. ಆದರೆ ಈ ನೇಮಕಾತಿಯಲ್ಲಿ ಭಾರಿ ಭ್ರಷ್ಟಾಚಾರ, ಸ್ವಜನಪಕ್ಷಪಾತ ನಡೆದಿರುವ ಬಗ್ಗೆ ಆರೋಪಗಳಿವೆ.
ಒಕ್ಕೂಟದ ಅಂದಿನ ಅಧ್ಯಕ್ಷರು ಹಾಗೂ ನಿರ್ದೇಶಕರ ಸಂಬಂಧಿಗಳಿಗೆ ಹುದ್ದೆಗಳನ್ನು ನೀಡಿರುವ ಬಗ್ಗೆ ಪ್ರಭಾವಿ ರಾಜಕಾರಣಿಗಳ ಮಕ್ಕಳನ್ನು ಅಕ್ರಮವಾಗಿ ನೇಮಕಾತಿ ಮಾಡಿಕೊಂಡು, ಅರ್ಹ ಪ್ರತಿಭಾನ್ವಿತ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಿದೆ ಎಂಬ ಆರೋಪ ಕೇಳಿ ಬಂದಿತ್ತು. ವಿವಿಧ ಸಂಘಸಂಸ್ಥೆಗಳು ಈ ನೇಮಕಾತಿಯನ್ನು ರದ್ದುಗೊಳಿಸಲು ದೊಡ್ಡ ಹೋರಾಟ ನಡೆಸಿದ್ದವು.
ಒತ್ತಡದ ಹಿನ್ನೆಲೆಯಲ್ಲಿ ಹಿಂದಿನ ಜಿಲ್ಲಾಧಿಕಾರಿ ಬಿ. ಬಿ. ಕಾವೇರಿ ತನಿಖೆ ನಡೆಸಲು ಜಿಲ್ಲಾ ಮಟ್ಟದ ನಾಲ್ವರು ಅಧಿಕಾರಿಗಳ ಜಂಟಿ ಸಮಿತಿ ರಚಿಸಿದ್ದರು. ಈ ಸಮಿತಿ ಸುಮಾರು ಎರಡು ತಿಂಗಳ ಕಾಲ ತನಿಖೆ ನಡೆಸಿ ವರದಿ ಸಲ್ಲಿಸಿತ್ತು. ಈ ವರದಿಯನ್ನು ಚಾಮರಾಜನಗರ ಜಿಲ್ಲಾಧಿಕಾರಿ ಸರ್ಕಾರಕ್ಕೆ ಸಲ್ಲಿಸಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿರಲಿಲ್ಲ.
"ರೋಸ್ಟರ್ ಪದ್ದತಿ ಪ್ರಕಾರ ನೇಮಕಾತಿ ನಡೆಸದೇ ಇರುವ ಬಗ್ಗೆ ಎಸ್ಸಿ/ ಎಸ್ಟಿ ಆಯೋಗಕ್ಕು ದೂರು ಸಲ್ಲಿಸಲಾಗಿದ್ದು, ಆಯೋಗವು ಸೂಕ್ತ ದಾಖಲಾತಿ ಸಲ್ಲಿಸುವಂತೆ ಸೂಚಿಸಿದೆ" ಎಂದು ಚಾಮರಾಜನಗರ ಜಿಲ್ಲಾಭಿವೃದ್ಧಿ ಹೋರಾಟ ಸಮಿತಿ ಗೌರವಾಧ್ಯಕ್ಷ ವೆಂಕಟರಮಣಸ್ವಾಮಿ ಪಾಪು ತಿಳಿಸಿದ್ದಾರೆ.
"ಅಕ್ರಮ ನೇಮಕಾತಿಯನ್ನು ಕೂಡಲೇ ರದ್ದುಪಡಿಸಬೇಕು. ಅವ್ಯವಹಾರ ನಡೆಸಿರುವ ಜಿಲ್ಲಾ ಹಾಲು ಒಕ್ಕೂಟದ ಆಡಳಿತ ಸಮಿತಿಯನ್ನು ಸೂಪರ ಸೀಡ್ ಮಾಡಬೇಕು. ಹೊಸದಾಗಿ ಸಮಿತಿ ರಚಿಸಿ ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆ ನಡೆಸಬೇಕು" ಎಂದು ಚಾಮರಾಜನಗರ ಜಿಲ್ಲಾಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಕೆ. ವೀರಭದ್ರಸ್ವಾಮಿ ಒತ್ತಾಯಿಸಿದ್ದಾರೆ.












Click it and Unblock the Notifications