ಗೀತಾಮಹದೇವಪ್ರಸಾದ್, ನಿರಂಜನಕುಮಾರ್ ವಿರುದ್ಧ ಪ್ರಕರಣ ದಾಖಲು
ಚಾಮರಾಜನಗರ, ಮೇ 03 : ಚುನಾವಣಾ ನೀತಿಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಗುಂಡ್ಲುಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಗೀತಾಮಹದೇವಪ್ರಸಾದ್ ಹಾಗೂ ಬಿಜೆಪಿ ಅಭ್ಯರ್ಥಿ ಸಿ.ಎಸ್.ನಿರಂಜನಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಳ್ಳಲಾಗುತ್ತಿತ್ತು. ಆದ್ದರಿಂದ, ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಡಾ.ಗೀತಾಮಹದೇವಪ್ರಸಾದ್ ಹಾಗೂ ಬಿಜೆಪಿ ಅಭ್ಯರ್ಥಿ ಸಿ.ಎಸ್.ನಿರಂಜನಕುಮಾರ್ ವಿರುದ್ಧ ಪ್ರಕರಣಗಳು ದಾಖಲಾಗಿವೆ.
ಚಾಮರಾಜನಗರ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಪರಿಚಯ
ಏ.23ರಂದು ಕಬ್ಬಹಳ್ಳಿ ಗ್ರಾಮದಲ್ಲಿ ಡಾ.ಗೀತಾಮಹದೇವಪ್ರಸಾದ್ ಮತಯಾಚನೆ ಮಾಡುವ ಸಂದರ್ಭದಲ್ಲಿ ಶಾಲಾ ಮಕ್ಕಳು ಕೈಯಲ್ಲಿ ಪಕ್ಷದ ಧ್ವಜ ಹಿಡಿದು ತಲೆಗೆ ಕಾಂಗ್ರೆಸ್ ಚಿಹ್ನೆಯಿರುವ ಟೋಪಿಧರಿಸಿ ಮೆರವಣಿಗೆಯಲ್ಲಿ ಸಾಗಿದ್ದರು.
ಈ ಹಿನ್ನೆಲೆಯಲ್ಲಿ ಫ್ಲೆಂಯಿಂಗ್ ಸ್ಕ್ವಾಡ್ ಅಧಿಕಾರಿ ರಾಜಕುಮಾರ್ ತೆರಕಣಾಂಬಿ ಠಾಣೆಯಲ್ಲಿ ದೂರು ನೀಡಿದ್ದು, ಗೀತಾ ಮಹದೇವಪ್ರಸಾದ್ ಹಾಗೂ ಪ್ರಧಾನ ಕಾರ್ಯದರ್ಶಿ ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಮುನಿಸು ಬಿಜೆಪಿಗೆ ವರದಾನವಾಗುತ್ತಾ?
ತಾಲೂಕಿನ ಸ್ಕಂದಗಿರಿ ಪಾರ್ವತಾಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ದೇವಸ್ಥಾನದ ಆವರಣದಲ್ಲಿ ಮತಯಾಚನೆ ಮಾಡಿದ್ದ ಸಂಬಂಧ ಗೀತಾಮಹದೇವಪ್ರಸಾದ್ ಹಾಗೂ ಸಂಸದ ಆರ್.ಧ್ರುವನಾರಾಯಣ್ ವಿರುದ್ಧ ಮೊದಲನೇ ಪ್ರಕರಣ ಹಾಗೂ ಕೋಡಹಳ್ಳಿ ಗ್ರಾಮದ ಶ್ರೀ ಆಂಜನೇಯ ದೇವಸ್ಥಾನದ ಆವರಣದಲ್ಲಿ ಸಚಿವೆ ಹಾಗೂ ಕಾಡಾ ಅಧ್ಯಕ್ಷ ಎಚ್.ಎಸ್.ನಂಜಪ್ಪ ಪ್ರಚಾರ ಭಾಷಣ ಮಾಡಿದ್ದ ಬಗ್ಗೆ ಪ್ರಕರಣ ದಾಖಲಾಗಿದ್ದವು.
ಏ.29 ಬಿ.ವೈ.ವಿಜಯೇಂದ್ರ ಹಾಗೂ ಬಿಜೆಪಿ ಅಭ್ಯರ್ಥಿ ಸಿ.ಎಸ್.ನಿರಂಜನಕುಮಾರ್ ತೆರಕಣಾಂಬಿ ಗ್ರಾಮದ ಆಂಜನೇಯ ದೇವಸ್ಥಾನದ ಎದುರು ಪ್ರಚಾರ ವಾಹನದಲ್ಲಿ ಭಾಷಣ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಫ್ಲೆಯಿಂಗ್ ಸ್ಕ್ವಾಡ್ ಅಧಿಕಾರಿ ಬಸವರಾಜು ದೂರು ತೆರಕಣಾಂಬಿ ಠಾಣೆಗೆ ನೀಡಿದ್ದು ಪ್ರಕರಣ ದಾಖಲಾಗಿದೆ.
ಮೇ 2ರಂದು ಫ್ಲೆಯಿಂಗ್ ಸ್ಕ್ವಾಡ್ ಅಧಿಕಾರಿ ಫ್ಲೆಯಿಂಗ್ ಸ್ಕ್ವಾಡ್ ಅಧಿಕಾರಿ ಬಸವರಾಜು ವಾಹನಗಳ ತಪಾಸಣೆ ಮಾಡುವಾಗ ಪೆಟ್ರೋಲ್ ಬಂಕ್ ಮಾಲೀಕರಿಂದ ದಾಖಲೆಯಿಲ್ಲದೆ ಕೊಂಡೊಯ್ಯುತ್ತಿದ್ದ 10 ಲಕ್ಷದ 10 ಸಾವಿರದ 600 ರೂಪಾಯಿಗಳನ್ನು ವಶಕ್ಕೆ ಪಡೆದುಕೊಂಡು ಪಟ್ಟಣದ ಖಜಾನೆಯ ವಶಕ್ಕೆ ನೀಡಿದ್ದರು. ಬ್ಯಾಂಕಿಗೆ ಕಟ್ಟಲು ಕೊಂಡೊಯ್ಯುತ್ತಿದ್ದುದಾಗಿ ಬಂಕ್ ಮಾಲೀಕರು ಹೇಳಿದರೂ ಸೂಕ್ತದಾಖಲೆಗಳನ್ನು ಒದಗಿಸದ ಹಿನ್ನೆಲೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳು ಹಣವನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.