ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಹಸುವಿನ ಮೇಲೆ ಚಿರತೆ ದಾಳಿ
ಚಾಮರಾಜನಗರ, ಜುಲೈ 4: ಜಮೀನಿನಲ್ಲಿರುವ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಹಸುವಿನ ಮೇಲೆ ಚಿರತೆ ದಾಳಿ ಮಾಡಿ ಸಾಯಿಸಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಶಿವಕುಮಾರ್ ಎಂಬುವರಿಗೆ ಸೇರಿದ ಹಸು ಚಿರತೆ ದಾಳಿಗೆ ಬಲಿಯಾಗಿದ್ದು, ಹಸುವನ್ನು ಕಳೆದುಕೊಂಡ ರೈತ ಕಂಗಾಲಾಗಿದ್ದಾರೆ. ಈ ವ್ಯಾಪ್ತಿಯಲ್ಲಿ ಚಿರತೆಯಿದೆ ಎಂಬುದರ ಬಗ್ಗೆ ಅರಿವಿಲ್ಲದ ಶಿವಕುಮಾರ್ ಅವರು ಎಂದಿನಂತೆ ಹಸುವನ್ನು ಜಮೀನಿನಲ್ಲಿದ್ದ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದರು.
ಆದರೆ ಆಹಾರ ಅರಸಿಕೊಂಡು ಬೆಳಗ್ಗಿನ ಜಾವ ಬಂದ ಚಿರತೆ ನೇರವಾಗಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸುವಿನ ಮೇಲೆ ದಾಳಿ ಮಾಡಿದೆ. ಚಿರತೆ ದಾಳಿ ಮಾಡಿದ ಸಂದರ್ಭ ಹಸು ಜೋರಾಗಿ ಕಿರುಚಿಕೊಂಡಿದ್ದು, ಹಸುವಿನ ಅರಚಾಟ ಕೇಳಿದ ಮಾಲೀಕ ಶಿವಕುಮಾರ್ ಕೊಟ್ಟಿಗೆಯತ್ತ ಓಡಿ ಬಂದಿದ್ದಾರೆ. ಈ ವೇಳೆ ಹಸು ಸಾವನ್ನಪ್ಪಿದ್ದು, ಹಸುವಿನ ರಕ್ತ ಹೀರಿದ ಚಿರತೆ ಅಲ್ಲಿಂದ ಪರಾರಿಯಾಗಿತ್ತು.

ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಕಣಾಂಬಿ ಠಾಣೆಯ ಸಬ್ ಇನ್ಸ್ ಪೆಕ್ಸರ್ ಚಿಕ್ಕರಾಚಶೆಟ್ಟಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಶಿವಕುಮಾರ್ ಅವರಿಗೆ ಪರಿಹಾರ ನೀಡುವ ಭರವಸೆಯನ್ನು ನೀಡಿದ್ದಲ್ಲದೆ, ಬೋನು ಅಳವಡಿಸಿ ಚಿರತೆಯನ್ನು ಸೆರೆಹಿಡಿಯುವ ಚಿಂತನೆ ನಡೆಸಿದ್ದಾರೆ. ಇದೀಗ ಹಸುವಿನ ಮೇಲೆ ಚಿರತೆ ದಾಳಿ ಮಾಡಿದ ಸುದ್ದಿ ಗ್ರಾಮದಲ್ಲಿ ಹರಡುತ್ತಿದ್ದಂತೆಯೇ ಸುತ್ತಮುತ್ತಲಿನ ರೈತರು ಭಯಭೀತಗೊಂಡಿದ್ದಾರೆ. ತಮ್ಮ ಜಾನುವಾರುಗಳನ್ನು ರಕ್ಷಿಸಿಕೊಳ್ಳುವುದು ಹೇಗೆ ಚಿಂತೆಯಲ್ಲಿದ್ದಾರೆ. ಆದಷ್ಟು ಬೇಗ ಚಿರತೆಯನ್ನು ಸೆರೆಹಿಡಿದು ರೈತರಲ್ಲಿ ಮನೆ ಮಾಡಿರುವ ಆತಂಕವನ್ನು ದೂರಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.












Click it and Unblock the Notifications