ಚಾಮರಾಜನಗರ: ಬಾಲಕನ ಮೇಲೆ ದಾಳಿ ಮಾಡಿ ಶಾಲಾ ವಿದ್ಯಾರ್ಥಿಗಳಿಗೆ ಭಯ ಹುಟ್ಟಿಸಿದ್ದ ಖತರ್ನಾಕ್ ಚಿರತೆ ಕೊನೆಗೂ ಸೆರೆ
ಚಾಮರಾಜನಗರ, ಆಗಸ್ಟ್, 02: ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಮಲ್ಲಿಗೆಹಳ್ಳಿಯಲ್ಲಿ ಶಾಲಾ ಬಾಲಕನ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಕೊನೆಗೂ ಅರಣ್ಯ ಇಲಾಖೆ ಬಲೆಗೆ ಕೆಡವಿದೆ.
ಇತ್ತೀಚೆಗಷ್ಟೇ ಮಲ್ಲಿಗೆಹಳ್ಳಿಯಲ್ಲಿ ಬಾಲಕನ ಮೇಲೆ ದಾಳಿ ಮಾಡಿದ್ದ 6 ವರ್ಷದ ಗಂಡು ಚಿರತೆ ಕೊನೆಗೂ ಇಂದು ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕು ಕುಂತೂರು ಬೆಟ್ಟದ ಬಳಿ ಸೆರೆಯಾಗಿದೆ. ಚಿರತೆ ದಾಳಿ ಭಯದಿಂದ ಮಕ್ಕಳು ಇಷ್ಟು ದಿನ ಶಾಲೆಗೆ ಹೋಗಲು ಹಿಂದೇಟು ಹಾಕುತ್ತಿದ್ದರು. ಅಲ್ಲದೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರಣ್ಯ ಇಲಾಖೆ ಶಾಲೆ ಮುಂದೆ ಸಿಬ್ಬಂದಿ ನಿಯೋಜನೆ ಮಾಡಿ ಬಂದುಬಸ್ತ್ ಅನ್ನು ಸಹ ಮಾಡಿತ್ತು.

ಹಾಗೆಯೇ ಬಾಲಕನ ಮೇಲೆ ಚಿರತೆ ದಾಳಿ ಮಾಡಿದಾಗಿನಿಂದ ಮಲ್ಲಿಗೆಹಳ್ಳಿ ಸೇರಿದಂತೆ ಸುತ್ತಮುಲಿನ 6-7 ಗ್ರಾಮಗಳ ಜನತೆ ಭಯಭೀತರಾಗಿದ್ದರು. ಆದರೆ ಅರಣ್ಯ ಇಲಾಖೆಯ ಸತತ ಕಾರ್ಯಾಚರಣೆಯಿಂದ ಇಂದು ಕೊನೆಗೂ ಖತರ್ನಾಕ್ ಚಿರತೆ ಸೆರೆಸಿಕಿದ್ದು,ಇದರಿಂದ ಗ್ರಾಮದ ಜನತೆ ನೆಮ್ಮದಿಯ ಬಿಡುವಂತಾಗಿದೆ.
ಬಾಲಕನ ಮೇಲೆ ಚಿರತೆ ದಾಳಿ
ಇತ್ತೀಚೆಗಷ್ಟೇ ಮಲ್ಲಿಗೆಹಳ್ಳಿಯಲ್ಲಿ ಚಿರತೆ ದಾಳಿಯಿಂದ ಹರ್ಷಿತ್ (09) ಬಾಲಕ ಗಂಭೀರವಾಗಿ ಗಾಯಗೊಂಡಿದ್ದ. ಗ್ರಾಮದ ಪ್ರಾಥಮಿಕ ಶಾಲೆ ಮುಂಭಾಗದಿಂದ ಮನೆಗೆ ತೆರಳುವಾಗ ಅವಿತು ಕುಳಿತಿದ್ದ ಚಿರತೆ ದಾಳಿ ಮಾಡಿದ್ದು, ಇದನ್ನು ಕಂಡ ಜನರು ಚೀರಾಟಿ ಕೂಗಾಡಿದ್ದಾರೆ. ಜನರ ಕಿರುಚಾಟಕ್ಕೆ ಬೆದರಿದ ಚಿರತೆ ಬಾಲಕನ್ನು ಬಿಟ್ಟು ಗದ್ದೆಗಳತ್ತ ಓಡಿಹೋಗಿದೆ. ಇನ್ನು ಹರ್ಷಿತ್ನ ಮುಖ, ಗಂಟಲು, ಕಾಲು, ಹೊಟ್ಟೆಯ ಭಾಗಕ್ಕೆ ಚಿರತೆ ಗೀರಿ ಕಚ್ಚಿ ಗಾಯಗೊಳಿಸಿತ್ತು.
ಬಳಿಕ ಯಳಂದೂರು ಆಸ್ಪತ್ರೆಯಲ್ಲಿ ಬಾಲಕನಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನೆ ಮಾಡಲಾಗಿತ್ತು.
ಚಿರತೆ ದಾಳಿಯಿಂದ ಬಾಲಕಿ ಸಾವು
ಹಾಗೆಯೇ ಹಲವು ದಿನಗಳಿಂದ ಯಳಂದೂರು ತಾಲೂಕಿನ ಕೆಸ್ತೂರು, ಮಲ್ಲಿಗಹಳ್ಳಿ, ಕಟ್ನವಾಡಿ, ಹೊಸೂರು ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಹಾಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಮಲ್ಲಿಗೆಹಳ್ಳಿ ಸೇರಿದಂತೆ 6 ಕಡೆ ಬೋನುಗಳನ್ನುಇಟ್ಟು ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಿದ್ದರು. ಆದರೆ, ಚಿರತೆ ಸೆರೆಯಾಗದೇ ಬಾಲಕನ ಮೇಲೆ ಎರಗಿದ ಆತಂಕಕಾರಿ ಘಟನೆ ನಡೆದಿತ್ತು.
ಕೆಲವು ದಿನಗಳ ಹಿಂದೆಯಷ್ಟೇ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ಮನೆ ಮುಂದೆ ಆಟ ಆಡುತ್ತಿದ್ದ 6 ವರ್ಷದ ಬಾಲಕಿ ಮೇಲೆ ಚಿರತೆ ದಾಳಿ ಮಾಡಿತ್ತು. ನಂತರ ಬಾಲಕಿ 15 ದಿನಗಳ ಕಾಲ ಚಿಕಿತ್ಸೆ ಪಡೆದರೂ ಫಲಕಾರಿಯಾಗದೇ ಅಸುನೀಗಿದ್ದಳು.












Click it and Unblock the Notifications