ಮಲೆ ಮಾದೇಶ್ವರ ಜಾತ್ರೆ; ಸ್ಥಳೀಯರಿಗೆ ಮಾತ್ರ ಅವಕಾಶ
ಚಾಮರಾಜನಗರ, ಮಾರ್ಚ್ 03: ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರನ ಬೆಟ್ಟದಲ್ಲಿ ನಡೆಯುವ ಮಹಾಶಿವರಾತ್ರಿ ಜಾತ್ರೆಗೆ ಮಲೆಮಹದೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ಥಳೀಯ ಗ್ರಾಮಸ್ಥರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಚಾಮರಾಜನಗರ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅಧ್ಯಕ್ಷತೆಯಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಸಂಬಂಧ ಪೂರ್ವಭಾವಿ ಸಭೆ ನಡೆಯಿತು. ಮಾರ್ಚ್ 10 ರಿಂದ 14ರ ತನಕ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಸಂಪ್ರದಾಯದಂತೆ ನಡೆಯಲಿದೆ.
ಈ ಜಾತ್ರೆಗೆ ಬೆಟ್ಟದ ತಪ್ಪಲಿನ ಗ್ರಾಮಸ್ಥರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಬೇರೆ ಜಿಲ್ಲೆ ಹಾಗೂ ವಿವಿಧ ರಾಜ್ಯಗಳಿಂದ ಬರುವ ಭಕ್ತರಿಗೆ ನಿಷೇಧ ಹೇರಲಾಗಿದೆ. ಪಾದಯಾತ್ರೆ ಮೂಲಕ ಬರುವ ಭಕ್ತರಿಗೂ ಸಹ ಜಿಲ್ಲಾಡಳಿತ ನಿರ್ಬಂಧ ಹೇರಿದೆ.

ಕರ್ತವ್ಯ ನಿರತ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಕೋವಿಡ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಮಾದಪ್ಪನ ಭಕ್ತರು ಸಹಕಾರ ನೀಡಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.
ರಾತ್ರಿ ವಾಸ್ತವ್ಯ ನಿಷೇಧ: ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಸಂಪ್ರದಾಯದಂತೆ ನಡೆಯಲಿದೆ. ಸ್ಥಳೀಯರಿಗೆ ಮಾತ್ರ ಅವಕಾಶ ಕಲ್ಪಿಸಿರುವುದರಿಂದ ಮಾರ್ಚ್ 9ರಿಂದ 14ರ ತನಕ ರಾತ್ರಿ ವಾಸ್ತವ್ಯಕ್ಕೆ ನಿಷೇಧ ಹೇರಲಾಗಿದೆ.
ಮಹದೇಶ್ವರನಿಗೆ ಚಾಮರಾಜನಗರ ಜಿಲ್ಲೆ ಮಾತ್ರವಲ್ಲದೆ, ರಾಜ್ಯ, ಹೊರ ರಾಜ್ಯಗಳಲ್ಲಿಯೂ ಭಕ್ತರಿದ್ದು, ಲಾಕ್ ಡೌನ್ ತೆರವು ಆದ ಬಳಿಕ ಕ್ಷೇತ್ರಕ್ಕೆ ಆಗಮಿಸುತ್ತಿರುವ ಭಕ್ತರ ಸಂಖ್ಯೆ ಹೆಚ್ಚುತ್ತಲೇ ಇದೆ.
ಫೆಬ್ರವರಿ ತಿಂಗಳಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಮಲೆಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರನ ಹುಂಡಿಗೆ ಭಕ್ತರು 1,48,73,233 ರೂಪಾಯಿಯನ್ನು ಸಮರ್ಪಿಸಿದ್ದಾರೆ. ಕಾಣಿಕೆ ಹುಂಡಿ ಎಣಿಕೆ ಪ್ರಕ್ರಿಯೆ ಕಳೆದ ವಾರ ಬಿಗಿ ಭದ್ರತೆಯಲ್ಲಿ ನಡೆದಿದೆ.












Click it and Unblock the Notifications