ಚಾಮರಾಜನಗರದಲ್ಲಿ ಆಡಳಿತ ಮಂಡಳಿ ಕಿತ್ತಾಟಕ್ಕೆ ಬಲಿಯಾಯಿತಾ 7 ಜೀವ?
ಚಾಮರಾಜನಗರ, ಡಿಸೆಂಬರ್ 14: ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ ಏಳು ಭಕ್ತರು ಮೃತಪಟ್ಟಿದ್ದು, 65ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ದಾರುಣ ಘಟನೆ ಇಂದು ಶುಕ್ರವಾರ ನಡೆದಿದೆ.
ಮೃತ ಭಕ್ತರನ್ನು ಗೋಪಿಯಮ್ಮ(35), ಶಾಂತಾ (20) ಪಾಪಣ್ಣ(35) ಹಾಗೂ ಬಾಲಕಿ ಅನಿತಾ(14) ಎಂದು ಗುರುತಿಸಲಾಗಿದೆ. ಅಸ್ವಸ್ಥರನ್ನು ಕೊಳ್ಳೇಗಾಲ ಸಮೀಪದ ಕಾಮಗೆರೆ ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆ ಬಳಿ ಸಂಬಂಧಿಕರು ಗುಂಪು ಸೇರಿದ್ದಾರೆ. ಗುಂಪು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆಯೂ ನಡೆದಿದೆ. ಕೊಳ್ಳೇಗಾಲ ಆಸ್ಪತ್ರೆ ಹಾಗೂ ಕೆ ಆರ್ ಆಸ್ಪತ್ರೆಯಲ್ಲಿಯೂ ಹಲವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು 9 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ.
ಸುಳ್ವಾಡಿಯ ಕಿಚ್ಚುಕುತ್ತಿ ಮಾರಮ್ಮ ದೇವಸ್ಥಾನದ ಗೋಪುರ ಶಂಕುಸ್ಥಾಪನೆ ಸಮಾರಂಭದಲ್ಲಿ ಈ ಅವಘಡ ಸಂಭವಿಸಿದೆ.

ಕಾರ್ಯಕ್ರಮದಲ್ಲಿ ರೈಸ್ಬಾತ್ ತಿಂದ ಬಳಿಕ ಎಲ್ಲರೂ ಅಸ್ವಸ್ಥರಾಗಿದ್ದಾರೆ. ಆದರೆ ದೇವಾಲಯದ ಗೋಪುರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಎರಡು ಬಣಗಳ ನಡುವೆ ದ್ವೇಷವಿತ್ತು. ಹೀಗಾಗಿ ಒಂದು ಬಣದವರು ಪ್ರಸಾದಕ್ಕೆ ವಿಷಪ್ರಾಶನ ಮಾಡಿರಬಹುದು ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಪ್ರಸಾದವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಜಿಲ್ಲಾಧಿಕಾರಿಗಳು ಸೇರಿದಂತೆ ಇತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ಹನೂರು ಶಾಸಕ ನಾಗೇಂದ್ರ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.











Click it and Unblock the Notifications