ಚಾಮರಾಜನಗರದ ಲೋಕಸಭೆ ಟಿಕೆಟ್ಗೆ ಕಾಂಗ್ರೆಸ್ ನಾಯಕಿ ಬೇಡಿಕೆ!
ಚಾಮರಾಜನಗರ, ಜನವರಿ 10: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ. ಕರ್ನಾಟಕದ 28 ಕ್ಷೇತ್ರಗಳಲ್ಲಿ ಯಾರಿಗೆ ಗೆಲುವು? ಎಂಬ ಲೆಕ್ಕಾಚಾರ ನಡೆಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಆದ್ದರಿಂದ ಪಕ್ಷದ ಟಿಕೆಟ್ಗೆ ಬೇಡಿಕೆಯೂ ಹೆಚ್ಚಿದೆ. ಕಳೆದ ಬಾರಿಯಂತೆ ಫಲಿತಾಂಶ ಬರುವುದಿಲ್ಲ ಎಂದು ಪಕ್ಷದ ನಾಯಕರು ನಂಬಿದ್ದಾರೆ.
ಗಡಿಜಿಲ್ಲೆಯಾದ ಚಾಮರಾಜನಗರದಲ್ಲಿಯೂ ಲೋಕಸಭೆ ಚುನಾವಣೆ ಕಾವು ಏರುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಟಿಕೆಟ್ಗಾಗಿ ಪೈಪೋಟಿ ನಡೆಯುತ್ತಿದೆ. ಕ್ಷೇತ್ರದ ಹಾಲಿ ಸಂಸದರು ಬಿಜೆಪಿಯ ವಿ. ಶ್ರೀನಿವಾಸ ಪ್ರಸಾದ್. ಆದರೆ ಅವರು ಸಹ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದು, ಬಿಜೆಪಿ ಸಹ ಅಭ್ಯರ್ಥಿ ಹುಡುಕುವುದು ಅನಿವಾರ್ಯವಾಗಿದೆ.

ಕಾಂಗ್ರೆಸ್ನ ಮಹಿಳಾ ನಾಯಕಿಯೊಬ್ಬರು ಚಾಮರಾಜನಗರ ಕ್ಷೇತ್ರದ ಟಿಕೆಟ್ಗಾಗಿ ಬೇಡಿಕೆ ಇಟ್ಟಿದ್ದಾರೆ. ಕಾಂಗ್ರೆಸ್ ನಾಯಕ ಆರ್. ಧ್ರುವ ನಾರಾಯಣ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. 2014ರ ಚುನಾವಣೆಯಲ್ಲಿ ಸಂಸದರಾಗಿಯೂ ಆಯ್ಕೆಯಾಗಿದ್ದರು. ಆದರೆ 2019ರಲ್ಲಿ ಸೋಲು ಕಂಡಿದ್ದರು.
2023ರ ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಆರ್. ಧ್ರುವ ನಾರಾಯಣ್ ಹೃದಯಾಘಾತದಿಂದ ಸಾವನ್ನಪ್ಪಿದರು. ಆದ್ದರಿಂದ ಕಾಂಗ್ರೆಸ್ ಪಕ್ಷ ಈ ಬಾರಿಯ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಹುಡುಕಬೇಕಿದೆ.
ಪುಷ್ಪಾ ಅಮರನಾಥ್ ಟಿಕೆಟ್ ಆಕಾಂಕ್ಷಿ; ಚಾಮರಾಜನಗರ ಕ್ಷೇತ್ರದಿಂದ 2024ರ ಲೋಕಸಭೆ ಚುನಾವಣೆಗೆ ಪುಷ್ಪಾ ಅಮರನಾಥ್ ಟಿಕೆಟ್ ಆಕಾಂಕ್ಷಿ. ಮೈಸೂರು ಜಿಲ್ಲಾ ರಾಜಕಾರಣದಲ್ಲಿ ಸಕ್ರಿಯರಾಗಿರುವ ಅವರು ಎರಡು ಬಾರಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಪಕ್ಷದ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
ಈ ಕುರಿತು ಪುಷ್ಪಾ ಅಮರನಾಥ್ ಮಾತನಾಡಿದ್ದು, "ಸುಮಾರು ವರ್ಷಗಳಿಂದ ಪಕ್ಷ ಸಂಘಟನೆಗೆ ಕೆಲಸ ಮಾಡಿಕೊಂಡು ಬಂದಿದ್ದೇನೆ. ಹಲವಾರು ಚುನಾವಣೆಗಳಲ್ಲಿ ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ. ಪಕ್ಷ ವಹಿಸಿದ ಎಲ್ಲಾ ಕೆಲಸಗಳನ್ನು ನಿಷ್ಠೆಯಿಂದ ಮಾಡಿದ್ದೇನೆ. ಆದ್ದರಿಂದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ" ಎಂದು ಹೇಳಿದ್ದಾರೆ.
"ಸಿದ್ದರಾಮಯ್ಯ ಅವರು ರಾಜಕೀಯವಾಗಿ ನನ್ನ ಗುರುಗಳು. ಎರಡು ಬಾರಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಲು ಅವಕಾಶ ನೀಡಿದರು. ಮಹಿಳಾ ಘಟಕದ ಅಧ್ಯಕ್ಷಳಾಗಿ ಕೆಲಸ ಮಾಡಲು ಅವಕಾಶ ನೀಡಿದರು. ಟಿಕೆಟ್ ಆಕಾಂಕ್ಷಿಯಾಗಿರುವ ಕುರಿತು ಅವರಿಗೆ ಸಹ ಮಾಹಿತಿ ನೀಡಿದ್ದೇನೆ" ಎಂದರು.
2019ರ ಚುನಾವಣೆಯಲ್ಲಿ ಚಾಮರಾಜನಗರದಲ್ಲಿ ಕಾಂಗ್ರೆಸ್ನ ಆರ್. ಧ್ರುವನಾರಾಯಣ 5,66,720 ಮತಗಳನ್ನು ಪಡೆದು ಬಿಜೆಪಿಯ ವಿ. ಶ್ರೀನಿವಾಸ ಪ್ರಸಾದ್ (568,537) ವಿರುದ್ಧ ಸೋಲು ಕಂಡಿದ್ದರು. ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಹೊಸ ಅಭ್ಯರ್ಥಿ ಹುಡುಕಬೇಕಿದೆ.
ಎದುರಾಳಿ ಯಾರು?; ಡಾ. ಪುಷ್ಪಾ ಅಮರನಾಥ್ ಕಾಂಗ್ರೆಸ್ ಅಭ್ಯರ್ಥಿಯಾದರೆ ಎದುರಾಳಿ ಯಾರು? ಎಂಬುದು ಪ್ರಶ್ನೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿವೆ. ಆದ್ದರಿಂದ ಕ್ಷೇತ್ರದಲ್ಲಿ ಜಂಟಿ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ಜೆಡಿಎಸ್ನ ಬೆಂಬಲವೂ ಬಿಜೆಪಿಗೆ ಸಿಗಲಿದೆ.
ಸದ್ಯದ ಮಾಹಿತಿ ಪ್ರಕಾರ ಚಾಮರಾಜನಗರ ಮೀಸಲು ಕ್ಷೇತ್ರದಿಂದ ಡಾ. ಎಸ್. ಎಸ್. ಮೋಹನ್ ಟಿಕೆಟ್ ಬಯಸಿದ್ದಾರೆ. ಮೂಳೆ ಮತ್ತು ಬೆನ್ನುಹುರಿ ಸರ್ಜನ್ ಆಗಿರುವ ಮೋಹನ್ ಬೆಂಗಳೂರಿನ ಸಂಜಯ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಟ್ರಾಮಾ ಅಂಡ್ ಆರ್ಥೋಪೀಡಿಕ್ಸ್ ಪ್ರಾಧ್ಯಾಪಕ ಹುದ್ದೆಗೆ ಕೆಲವು ದಿನಗಳ ಹಿಂದೆ ರಾಜೀನಾಮೆ ಸಲ್ಲಿಸಿದ್ದಾರೆ.
ಡಾ. ಎಸ್. ಎಸ್. ಮೋಹನ್ ಹಾಲಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅಳಿಯ. 2019ರಲ್ಲಿಯೂ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಪಕ್ಷ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದಿದ್ದ ವಿ. ಶ್ರೀನಿವಾಸ್ ಪ್ರಸಾದ್ಗೆ ಟಿಕೆಟ್ ನೀಡಿತ್ತು. ಈ ಬಾರಿ ಆರೋಗ್ಯದ ಕಾರಣ ಅವರು ರಾಜಕೀಯ ನಿವೃತ್ತಿಯನ್ನು ಘೋಷಣೆ ಮಾಡಿದ್ದು, ಡಾ. ಎಸ್. ಎಸ್. ಮೋಹನ್ಗೆ ಟಿಕೆಟ್ ಸಿಗಲಿದೆಯೇ? ಕಾದು ನೋಡಬೇಕಿದೆ.












Click it and Unblock the Notifications