ಮಾದಪ್ಪನ ಬೆಟ್ಟದಲ್ಲಿ ಇಂದಿನಿಂದ ದೀಪಾವಳಿ ಜಾತ್ರೆ: ಬೈಕ್ ನಿಷೇಧ, 500 ಬಸ್ ಸಂಚಾರ
ಚಾಮರಾಜನಗರ, ನವೆಂಬರ್ 10: ಕರ್ನಾಟಕದ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ದೀಪಾವಳಿ ಜಾತ್ರೆ ಆರಂಭಗೊಂಡಿದ್ದು ಭಕ್ತ ಸಾಗರವೇ ಹರಿದುಬರುತ್ತಿದೆ.
ನವೆಂಬರ್10ರಿಂದ 14ರವರಗೆ ನಡೆಯುವ ಮಾದಪ್ಪನ ದೀಪಾವಳಿ ಜಾತ್ರೆ ಹಾಗೂ ಮಾದಪ್ಪನ ಮಹಾ ರಥೋತ್ಸವಕ್ಕೆ ಶ್ರೀಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರ ಅಗತ್ಯ ಸಿದ್ಧತೆ ಕೈಗೊಂಡಿದ್ದು ವಿಶೇಷ ಪೂಜಾ ಕಾರ್ಯಗಳು ಆರಂಭಗೊಂಡಿವೆ.

ಜಾತ್ರೆಗೆ ಬರುವ ಲಕ್ಷಾಂತರ ಮಂದಿ ಭಕ್ತರಿಗೆ ಪ್ರಾಧಿಕಾರವು ನಿರಂತರ ದಾಸೋಹಕ್ಕೆ ಮುಂದಾಗಿದ್ದು ಬೆಳಗ್ಗೆ ತಿಂಡಿ, ಮಧ್ಯಾಹ್ನ, ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದೆ. ಭಕ್ತರಿಗೆ ಅಲ್ಲಲ್ಲಿ ಕುಡಿಯುವ ನೀರು, ಶೌಚಗೃಹದ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಭಕ್ತರಿಗೆ ಪ್ರಸಾದವನ್ನಾಗಿ ನೀಡುವ ಸಲುವಾಗಿ ಸಮಾರು ನಾಲ್ಕ ರಿಂದ ಐದು ಲಕ್ಷ ಲಡ್ಡು ಸಿದ್ದಪಡಿಸಿಕೊಂಡಿದೆ.
ದೀಪಾವಳಿ ಜಾತ್ರೆ ಅಂಗವಾಗಿ ದೇವಾಲಯದ ರಾಜಗೋಪುರ, ಮುಖ್ಯ ದ್ವಾರ ಹಾಗೂ ಇತರೆ ದ್ವಾರಗಳನ್ನು ತಳಿರು ತೋರಣ, ಹೂ ಗಳಿಂದ ಅಲಂಕರಿಸಲಾಗಿದೆ. ಅಲ್ಲದೆ ದೇವಾಲಯ ಹಾಗೂ ಸಾಲೂರು ಮಠಕ್ಕೆ ತೆರಳುವ ಮಾರ್ಗವನ್ನು ಹಾಗೂ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಮಾದಪ್ಪನ ದೇಗುಲಕ್ಕೆ ಮಾಡಲಾಗಿರುವ ಆಕರ್ಷಕ ವಿದ್ಯುತ್ ದೀಪಾಲಂಕಾರ ನೋಡುಗರನ್ನು ಆಕರ್ಷಿಸುತ್ತಿದೆ. ವಿದ್ಯುತ್ ದೀಪಾಲಂಕಾರದಿಂದ ಮಾದಪ್ಪನ ಸನ್ನಿಧಿ ಕೈಲಾಸದ ರಾಜಧಾನಿಯಂತೆ ಕಂಗೊಳಿಸುತ್ತಿದೆ.

ಬೈಕ್ಗಳ ಪ್ರವೇಶ ಬಂದ್
ಐದು ದಿನಗಳ ಕಾಲ ಮಹದೇಶ್ವರಬೆಟ್ಟದಲ್ಲಿ ನಡೆಯುವ ಮಾದಪ್ಪನ ದೀಪಾವಳಿ ಜಾತ್ರೆಗೆ ಬರುವ ದ್ವಿಚಕ್ರ ವಾಹನಗಳ ಸಂಚಾರವನ್ನು ಬಂದ್ ಮಾಡಲಾಗಿದೆ. ವಾಹನ ನಿಲುಗಡೆ ಹಾಗೂ ರಸ್ತೆ ಕಿರಿದಾಗಿರುವ ಕಾರಣ ಟ್ರಾಫಿಕ್ ಸಮಸ್ಯೆ ಉಂಟಾಗದಿರಲೆಂದು ಡಿಸಿ 5 ದಿನ ಕಾಲ ತಾಳುಬೆಟ್ಟದಿಂದ ಮಲೆಮಹದೇಶ್ವರ ಬೆಟ್ಟಕ್ಕೆ ಬೈಕ್ ಪ್ರವೇಶವನ್ನು ನಿರ್ಬಂಧಿಸಿದ್ದಾರೆ.
ಮಹದೇಶ್ವರಬೆಟ್ಟದಲ್ಲಿ 5 ದಿನಗಳ ಕಾಲ ನಡೆಯುವ ದೀಪಾವಳಿ ಜಾತ್ರೆಗೆ ರಾಜ್ಯದ ವಿವಿಧೆಡೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಹೀಗಾಗಿ ಚಾಮರಾಜನಗರ ಜಿಲ್ಲೆಯ ಎಲ್ಲ ಡಿಪೋಗಳಿಂದ ಸುಮಾರು 500ಕ್ಕೂ ಹೆಚ್ಚು ಬಸ್ ಸೌಲಭ್ಯ ನೀಡಲಾಗುತ್ತಿದೆ. ದೀಪಾವಳಿ ಹಬ್ಬದ ಸಂದರ್ಭವಾಗಿರುವುದರಿಂದ ಬೆಂಗಳೂರು ಹಾಗೂ ಮೈಸೂರು ಬಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ.

ಈ ನಿಟ್ಟಿನಲ್ಲಿ ಈ ಮಾರ್ಗಗಳಲ್ಲಿ ಹೆಚ್ಚು ವಾಹನಗಳನ್ನು ಬಿಡಲಾಗುವುದು. ಜೊತೆಗೆ ಜಿಲ್ಲೆಯ ವಿವಿಧೆಯಿಂದಲೂ ಬರುವ ಭಕ್ತರಿಗೆ ತೊಂದರೆಯಾಗಬಾರದು ಎನ್ನುವ ನಿಟ್ಟಿನಲ್ಲಿ ಹೆಚ್ಚಿನ ಸಂಚಾರ ವ್ಯವಸ್ಥೆ ಕಲ್ಕಪಿಸಲಾಗಿದೆ ಎಂದು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅಶೋಕ್ ಕುಮಾರ್ ಹೇಳಿದ್ದಾರೆ.
ಬೆಟ್ಟದಲ್ಲಿ ಪೊಲೀಸ್ ಬಂದೋಬಸ್ತ್
ಬೆಟ್ಟಕ್ಕೆ ಹೋಗಲು ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಸಲುವಾಗಿ ತಾಳಬೆಟ್ಟದಲ್ಲಿ ಬಸ್ ನಿಲ್ದಾಣ ಮಾಡಲಾಗಿದೆ. ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಸಂಚಾರಕ್ಕೆ ತಡೆಯೊಡ್ಡಲಾಗಿದೆ. ಜಾತ್ರಾ ಮಹೋತ್ಸವದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎನ್ನುವ ಮುನ್ನೆಚ್ಚರಿಕೆ ಕ್ರಮವಹಿಸಿ ಪೊಲೀಸ್ ಇಲಾಖೆಯಿಂದ ಕೆಎಸ್ಆರ್ಪಿ ತುಕಡಿ, ಜಿಲ್ಲೆಯ ವಿವಿಧೆಡೆಯಿಂದ ಪೊಲೀಸ್ ಅಧಿಕಾರಿಗಳು ಹಾಗೂ ಹೋಂ ಗಾರ್ಡ್ಸ್ ಗಳನ್ನು ನಿಯೋಜಿಸಲಾಗಿದೆ. ಒಟ್ಟಾರೆ 550 ಜನರ ಪೊಲೀಸ್ ಹಾಗೂ ಹೋಂ ಗಾರ್ಡ್ಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ದೀಪಾವಳಿ ಜಾತ್ರೆಗೆ ಮಹದೇಶ್ವರಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಹಾಗೂ ವಾಹನಗಳ ಮೂಲಕ ಸುಮಾರು 5ರಿಂದ6 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ.












Click it and Unblock the Notifications