ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಚಾಲನೆಗೆ ಗೈರಾದ ಸೋಮಣ್ಣ- ಏನಿದು ಸಚಿವರ ನಿಗೂಢ ನಡೆ?
ವಿಧಾನಸಭಾ ಚುನಾವಣಾ ಸಮೀಪದಲ್ಲಿ ಬಿಜೆಪಿ ಆರಂಭಿಸಿರುವ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಬುಧವಾರ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಚಾಲನೆ ನೀಡಿದ್ದಾರೆ.
ಚಾಮರಾಜನಗರ, ಮಾರ್ಚ್ 1: ಕರ್ನಾಟಕದಲ್ಲಿ ಇದು ಚುನಾವಣೆಯ ವರ್ಷವಾಗಿದ್ದು, ವಿಧಾನಸಭಾ ಚುನಾವಣೆಗೆ ದಿನಗಳು ಸಮೀಪಿಸಿದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಮಾವೇಶಗಳು, ರ್ಯಾಲಿಗಳು ಒಂದಾದ ಮೇಲೊಂದು ಭರ್ಜರಿಯಾಗಿ ನಡೆಯುತ್ತಿದೆ.
ಮತದಾರರನ್ನು ಸೆಳೆಯಲು ರಾಜ್ಯದ ಪಕ್ಷಗಳು ತಮ್ಮ ಚುನಾವಣಾ ಪ್ರಣಾಳಿಕೆ ಜೊತೆಗೆ ಒಂದಿಷ್ಟು ಭರವಸೆಗಳೊಂದಿಗೆ ರಾಜ್ಯಾದ್ಯಂತ ಪ್ರವಾಸ ಆರಂಭಿಸಿವೆ. ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ರಾಜ್ಯಾದ್ಯಂತ ಪಂಚರತ್ನ ಯಾತ್ರೆ ನಡೆಸುತ್ತಿದ್ದರೆ, ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರಜಾಧ್ವನಿ ನಡೆಸುತ್ತಿದೆ. ಇದೀಗ ಬಿಜೆಪಿ ಕೂಡ ವಿಜಯ ಸಂಕಲ್ಪ ಯಾತ್ರೆ ಆರಂಭಿಸಿದೆ.

ವಿಧಾನಸಭಾ ಚುನಾವಣಾ ಸಮೀಪದಲ್ಲಿ ಬಿಜೆಪಿ ಆರಂಭಿಸಿರುವ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಬುಧವಾರ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಚಾಲನೆ ನೀಡಿದ್ದಾರೆ. ಹೆಲಿಕಾಪ್ಟರ್ ಮೂಲಕ ಮಲೆಮಹದೇಶ್ವರ ಬೆಟ್ಟಕ್ಕೆ ಬಂದಿಳಿದ ಜೆ.ಪಿ. ನಡ್ಡಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುನೀಲ್ ಕುಮಾರ್, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸ್ವಾಗತಿಸಿಕೊಂಡರು.
ಮಲೆ ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಜೆ.ಪಿ. ನಡ್ಡಾ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿಯ ಬಹು ನಿರೀಕ್ಷೆಯ ವಿಜಯ ಸಂಕಲ್ಪ ಯಾತ್ರೆಗೆ ನಗಾರಿ ಬಾರಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಿದ್ದಾರೆ. ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ಸಿಕ್ಕ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂದಿನ ರಥಯಾತ್ರೆ ದಿಗ್ವಿಜಯದ ಯಾತ್ರೆ ಎಂದು ಬಣ್ಣಿಸಿದರು.
ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಚಾಲನೆಗೆ ಗೈರಾದ ಸಚಿವ ಸೋಮಣ್ಣ
ಇನ್ನು ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಚಾಮರಾಜನಗರದಲ್ಲಿಯೇ ಚಾಲನೆ ನೀಡಲಾಗಿದ್ದು, ರಾಷ್ಟ್ರೀಯ ನಾಯಕರು ಹಾಗೂ ರಾಜ್ಯದ ನಾಯಕರು ಜಿಲ್ಲೆಗೆ ಆಗಮಿಸಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಬಂದರೂ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಕಾರ್ಯಕ್ರಮಕ್ಕೆ ಗೈರಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

ರಾಜ್ಯ ಬಜೆಟ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮರಾಜನಗರ ಜಿಲ್ಲೆಗೆ ನಿರೀಕ್ಷಿಸಿದ ಅನುದಾನ ನೀಡಿಲ್ಲ, ಹಾಗೂ ಇತರ ಕಾರಣಗಳಿಂದ ಸಚಿವ ಸೋಮಣ್ಣ ಪಕ್ಷದ ವಿರುದ್ಧ ಅಸಮಧಾನಗೊಂಡಿದ್ದು, ಪಕ್ಷದ ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗಿದೆ.












Click it and Unblock the Notifications