ಚಾಮರಾಜೇಶ್ವರ ರಥಕ್ಕೆ ಬೆಂಕಿ, ಫೆ.20ರಂದು ಚಾಮರಾಜನಗರ ಬಂದ್
ಚಾಮರಾಜನಗರದ ಚಾಮರಾಜೇಶ್ವರ ದೇವಸ್ಥಾನದ ರಥಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಇದರಿಂದ ಫೆಬ್ರವರಿ 20ರಂದು ಚಾಮರಾಜನಗರ ಬಂದ್ ಗೆ ಕರೆ ನೀಡಲಾಗಿದೆ.
ಚಾಮರಾಜನಗರ, ಫೆಬ್ರವರಿ. 19 : ಚಾಮರಾಜನಗರದ ಐತಿಹಾಸಿಕ ಚಾಮರಾಜೇಶ್ವರ ದೇವಾಲಯದ ಮುಂಭಾಗದಲ್ಲಿ ನಿಲ್ಲಿಸಿದ್ದ ಚಾಮರಾಜೇಶ್ವರ ಬ್ರಹ್ಮರಥಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಶನಿವಾರ ಮಧ್ಯರಾತ್ರಿ ನಡೆದಿದೆ.
ಎರಡು ವರ್ಷಗಳ ಹಿಂದೆ ಇದೇ ರಥಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಮತ್ತೆ ಶನಿವಾರ ಮಧ್ಯರಾತ್ರಿ 1.30ರ ಸಮಯದಲ್ಲಿ ಕಿಡಿಗೇಡಿಗಳು ರಥಕ್ಕೆ ಬೆಂಕಿ ಹಾಕಿದ್ದಾರೆ.
ಇದನ್ನು ಕಂಡ ಆಗ್ರಹಾರದ ಬೀದಿಯ ಸಾರ್ವಜನಿಕರು ಅಗ್ನಿಶಾಮಕ ದಳಕ್ಕೆ ದೂರವಾಣಿ ಕರೆ ಮಾಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ.
ಈ ರಥಕ್ಕೆ ದುಷ್ಕರ್ಮಿಗಳು ಅಗ್ನಿ ಸ್ಪರ್ಶ ಮಾಡಿರುವುದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ. ಇದರಿಂದ ಈ ಕೃತ್ಯ ಎಸಗಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಫೆಬ್ರವರಿ 20ರಂದು ಚಾಮರಾಜನಗರ ಬಂದ್ ಗೆ ಕರೆ ನೀಡಲಾಗಿದೆ.
2.10 ಕೊಟಿ ರೂ ವೆಚ್ಚದಲ್ಲಿ ದೇವಸ್ಥಾನದ ಜೀರ್ಣೋದ್ಧಾರದ ಕೆಲಸ ನಡೆಯುತ್ತಿದ್ದು, ಈ ಘಟನೆ ನಡೆದಿರುವುದು ಸಾರ್ವಜನಿಕರಲ್ಲಿ ಅತಂಕ ಮೂಡಿಸಿದೆ.