ಮುರುಘಾ ಶ್ರೀ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವಷ್ಟು ನೀಚ ಸರಕಾರ ನಮ್ಮದಲ್ಲ: ಸೋಮಣ್ಣ
ಚಾಮರಾಜನಗರ, ಸೆಪ್ಟೆಂಬರ್ 1: ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಮುರುಘಾ ಶರಣರ ವಿರುದ್ಧ ಕೇಳಿ ಬರುತ್ತಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಪೊಲೀಸರ ತನಿಖೆಗೆ ಸರಕಾರದಿಂದ ಯಾವುದೇ ಹಸ್ತಕ್ಷೇಪ ಇರುವುದಿಲ್ಲ ಎಂದು ವಸತಿ ಸಚಿವ ಸೋಮಣ್ಣ ಹೇಳಿದ್ದಾರೆ.
ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಈ ಪ್ರಕರಣ ನ್ಯಾಯಾಲಯದಲ್ಲಿ ಇದೆ, ಇದರ ಬಗ್ಗೆ ನಾವು ಹೆಚ್ಚು ಮಾತನಾಡುವುದು ಸೂಕ್ತವಲ್ಲ,
ಕಾನೂನಿಗಿಂತ ಯಾರು ದೊಡ್ಡವರಲ್ಲ, ಎಷ್ಟೇ ಪ್ರಭಾವಿಗಳಾದರೂ ಎಲ್ಲರಿಗೂ ಕಾನೂನು ಒಂದೇ. ಮುಖ್ಯಮಂತ್ರಿ ಬೊಮ್ಮಾಯಿ ಪ್ರಕರಣ ಸಂಬಂಧ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ತನಿಖೆಯಲ್ಲಿ ಹಸ್ತಕ್ಷೇಪ ಮಾಡುವಷ್ಟು ನೀಚ ಸರಕಾರ ನಮ್ಮದಲ್ಲ, ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ಇದೆ ಎಂದರು.
ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಮಳೆಹಾನಿ ಪ್ರದೇಶಗಳಿಗೆ ಸಚಿವ ಸೋಮಣ್ಣ ಭೇಟಿ ನೀಡಿ ಗ್ರಾಮಗಳ ಪರಿಸ್ಥಿತಿ ಖುದ್ದು ಪರಿಶೀಲನೆ ನಡೆಸಿ ಮಾತನಾಡಿದ ಸೋಮಣ್ಣ, " ಜಿಲ್ಲೆಯಲ್ಲಿ ಹಿಂದೆಂದೂ ಬಾರದಷ್ಟು ಮಳೆ ಈ ಬಾರಿ ಬಂದಿದೆ. ಇದಕ್ಕಾಗಿ ಮುಖ್ಯಮಂತ್ರಿಗಳು ಸಾಕಷ್ಟು ಕ್ರಮ ಕೈಗೊಂಡಿದ್ದಾರೆ. ಸುಮಾರು ಆರುವರೆ ಸಾವಿರ ಕೋಟಿ ಹಣ ಸಹ ಬಿಡುಗಡೆ ಮಾಡಿದ್ದಾರೆ. ಕೂಡಲೇ ಸಂತ್ರಸ್ತರಿಗೆ ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಶುಕ್ರವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ" ಎಂದರು

ಕೊಳ್ಳೇಗಾಲ - ತಮಿಳುನಾಡು ಹೆದ್ದಾರಿ ಬಂದ್
ಬಿಆರ್ ಟಿ ಅರಣ್ಯ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಕೊಳ್ಳೇಗಾಲ -ತಮಿಳುನಾಡು ಅಂತಾರಾರಾಜ್ಯ ಹೆದ್ದಾರಿಯಲ್ಲಿ ಬರುವ ಹನೂರು ತಾಲ್ಲೂಕಿನ ಒಡೆಯರಪಾಳ್ಯ ಸಮೀಪದ ಮಸಕತ್ತಿ ಉಡುತೊರೆ ಹಳ್ಳ ತುಂಬಿ ಹರಿಯುತ್ತಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಹಳ್ಳಕ್ಕೆ ನಿರ್ಮಿಸಿರುವ ಹಳೆ ಸೇತುವೆ ಮುಳುಗಡೆಯಾಗಿದ್ದು, ಸಂಜೆ ಹೊತ್ತಿಗೆ ನೀರಿನ ಪ್ರಮಾಣ ಹೆಚ್ಚಾಗಿದ್ದು, ಪೂರ್ಣ ಮುಳುಗಡೆಯಾಗಿದೆ.
ಗ್ರಾಪಂ ಕಚೇರಿ ಮುಂದೆ ಶವ ಹೂತ ಗ್ರಾಮಸ್ಥರು
ಸ್ಮಶಾನಕ್ಕೆ ತೆರಳಲು ಸೇತುವೆ ಇಲ್ಲದಿರುವುದರಿಂದ ಮಹಿಳೆಯ ಶವವನ್ನು ಗ್ರಾಪಂ ಕಚೇರಿ ಮುಂಭಾಗವೇ ಹೂತು ಆಕ್ರೋಶ ಹೊರಹಾಕಿರುವ ಘಟನೆ ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಚಂದ್ರಮ್ಮ(48) ಎಂಬ ಮಹಿಳೆಯ ಶವವನ್ನು ಗ್ರಾಪಂ ಕಚೇರಿ ಮುಂಭಾಗವೇ ಹೂತು ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ.

ಮಾಂಬಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ತೆರಳಲು ಕಾಲುವೆಯನ್ನು ದಾಟಿ ಹೋಗಬೇಕಿದ್ದು ಸುವರ್ಣಾವತಿ ಜಲಾಶಯದ ಹೊರಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲು ಅಸಾಧ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲಾಡಳಿತ ಮತ್ತು ಸ್ಥಳೀಯ ಶಾಸಕರಿಗೆ ಹತ್ತಾರು ವರ್ಷಗಳಿಂದ ಮನವಿ ಮಾಡುತ್ತಾ ಬಂದಿದ್ದರೂ ಸೇತುವೆ ನಿರ್ಮಾಣವಾಗದ ಹಿನ್ನೆಲೆಯಲ್ಲಿ ಇಂದು ಗ್ರಾಪಂ ಕಚೇರಿ ಆವರಣದಲ್ಲೇ ಶವವನ್ನು ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಸ್ಥಳಕ್ಕೆ ಈಗ ಎಸಿ ಗೀತಾ ಹುಡೇದಾ, ಪೊಲೀಸ್ ಡಿವೈಎಸ್ಪಿ ಭೇಟಿ ಕೊಟ್ಟಿದ್ದಾರೆ.












Click it and Unblock the Notifications