ಮಲೆಮಹದೇಶ್ವರ ವನ್ಯಧಾಮದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ
Recommended Video
ಬೆಂಗಳೂರು, ಜುಲೈ 31 : ಮಲೆಮಹದೇಶ್ವರ ವನ್ಯಧಾಮ, ಕಾವೇರಿ ವನ್ಯಧಾಮದಲ್ಲಿ ರಾತ್ರಿ ವೇಳೆ ವಾಹನ ಸಂಚಾರವನ್ನು ನಿಷೇಧಿಸುವ ಸಾಧ್ಯತೆ ಇದೆ. ಅರಣ್ಯ ಇಲಾಖೆ ಈ ಕುರಿತು ಪ್ರಸ್ತಾವನೆ ಸಿದ್ಧಪಡಿಸುತ್ತಿದ್ದು, ಶೀಘ್ರದಲ್ಲೇ ಆದೇಶ ಪ್ರಕಟವಾಗುವ ನಿರೀಕ್ಷೆ ಇದೆ.
ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಮಲೆಮಹದೇಶ್ವರ ಮತ್ತು ಅದಕ್ಕೆ ಹೊಂದಿಕೊಂಡಂತಿರುವ ಕಾವೇರಿ ವನ್ಯಧಾಮವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಣೆ ಮಾಡಿದೆ. ಈ ಹಿನ್ನಲೆಯಲ್ಲಿ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸುವ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ.
ಮಲೆಮಹದೇಶ್ವರ ವನ್ಯಧಾಮ ಪರಿಸರ ಸೂಕ್ಷ್ಮ ವಲಯವಾಗಿ ಘೋಷಣೆ
ಬಂಡೀಪುರ ಮತ್ತು ನಾಗರಹೊಳೆ ವನ್ಯಧಾಮದಲ್ಲಿ ಹಾದು ಹೋಗುವ ಹೆದ್ದಾರಿಯಲ್ಲಿ ಈಗಾಗಲೇ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಲಾಗಿದೆ. ಇದರಿಂದ ಪ್ರಾಣಿಗಳಿಗೆ ಸಹಾಯಕವಾಗಿದ್ದು, ಅಪಘಾತದಲ್ಲಿ ಕಾಡು ಪ್ರಾಣಿಗಳು ಮೃತಪಡುವ ಸಂಖ್ಯೆಯೂ ಕಡಿಮೆಯಾಗಿದೆ.
ಇದೇ ಮಾದರಿಯಲ್ಲಿ ಮಲೆಮಹದೇಶ್ವರ ಮತ್ತು ಅದಕ್ಕೆ ಹೊಂದಿಕೊಂಡಂತಿರುವ ಕಾವೇರಿ ವನ್ಯಧಾಮದಲ್ಲಿ ರಾತ್ರಿ 9 ರಿಂದ ಬೆಳಗ್ಗೆ 6ಗಂಟೆಯ ತನಕ ವಾಹನ ಸಂಚಾರ ನಿಷೇಧಿಸುವ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಎರಡು ಮೂರು ತಿಂಗಳಿನಲ್ಲಿ ಅಧಿಕೃತ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ.
ಪ್ರಾಣಿಗಳಿಗೆ ಕಿರಿಕಿರಿಯುಂಟು ಮಾಡುತ್ತಿರುವ ಪ್ರವಾಸಿಗರ ವರ್ತನೆ
ರಸ್ತೆಯ ಆರಂಭದಲ್ಲಿ ವಾಹನ ಸಂಚಾರವನ್ನು ತಡೆಯಲು ಗೇಟ್ ನಿರ್ಮಿಸಲಾಗುತ್ತದೆ. ಕೊಳ್ಳೇಗಾಲ-ಸತ್ಯಮಂಗಲ ಸಂಪರ್ಕಿಸುವ ರಾಜ್ಯ ಹೆದ್ದಾರಿ 38 ಮಲೆಮಹದೇಶ್ವರ ವನ್ಯಧಾಮದ ಮೂಲಕ ಹಾದು ಹೋಗುತ್ತದೆ.