ಚಾಮರಾಜನಗರ ದುರಂತ: ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದ ಸಿಎಂ
ಚಾಮರಾಜನಗರ, ಮೇ 3: ಚಾಮರಾಜನಗರ ಕೋವಿಡ್ ಕೇರ್ ಸೆಂಟರ್ ನಲ್ಲಿ ಆಕ್ಸಿಜನ್ ಕೊರತೆಯಿಂದ 22 ಜನ ಸೋಂಕಿತರು ಮೃತರಾಗಿರುವ ಕುರಿತು ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಜಿಲ್ಲಾಧಿಕಾರಿ ಎಂ.ಆರ್ ರವಿ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಜಿಲ್ಲಾಧಿಕಾರಿಗೆ ಕರೆ ಮಾಡಿದ ಅವರು, ದುರಂತಕ್ಕೆ ಕಾರಣ ಕುರಿತಾಗಿ ವಿವರಗಳನ್ನು ಪಡೆದುಕೊಂಡರು.
ಚಾಮರಾಜನಗರ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ಆಕ್ಸಿಜನ್ ಕೊರತೆಯ ಕಾರಣದಿಂದಾಗಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 22 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 24 ಗಂಟೆಯಲ್ಲಿ ಈ ದುರ್ಘಟನೆ ನಡೆದಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಕುರಿತು ಮಾಹಿತಿ ನೀಡಿರುವ ಮೈಸೂರು ಜಿಲ್ಲಾಡಳಿತ, ಆಕ್ಸಿಜನ್ ಕೊರತೆ ಉಂಟಾದ ಬೆನ್ನಲ್ಲೇ ಭಾನುವಾರ ರಾತ್ರಿ 12.30ರ ವೇಳೆಯಲ್ಲಿ ಮೈಸೂರಿನಿಂದ ಚಾಮರಾಜನಗರಕ್ಕೆ ಒಟ್ಟು 250 ಆಕ್ಸಿಜನ್ ಸಿಲಿಂಡರ್ ಕಳಿಸಲಾಗಿದೆ. ಆಕ್ಸಿಜನ್ ಲಿಕ್ವಿಡ್ ಬಳ್ಳಾರಿಯಿಂದ ಚಾಮರಾಜನಗರಕ್ಕೆ ಬರಬೇಕಿತ್ತು. ಅದು ಸೂಕ್ತ ಸಮಯದಲ್ಲಿ ಬರಲಿಲ್ಲ ಎನ್ನಲಾಗಿದೆ.

ಆದರೆ ಚಾಮರಾಜನಗರದವರ ಬೇಡಿಕೆಯಂತೆ ಮಾನವೀಯ ದೃಷ್ಟಿಯಿಂದ ಆಕ್ಸಿಜನ್ ಸಿಲಿಂಡರ್ ಕಳಿಸಲಾಗಿದೆ. ಅಧಿಕೃತವಾಗಿ 250 ಆಕ್ಸಿಜನ್ ಸಿಲಿಂಡರ್ ನಿನ್ನೆ ಮಧ್ಯರಾತ್ರಿಯ ವೇಳೆಗೆ ಕಳಿಸಿರುವುದು ದಾಖಲೆಯಲ್ಲಿದೆ. ಮೈಸೂರು ಜಿಲ್ಲಾಡಳಿತ ವಿಳಂಬ ಮಾಡಿಲ್ಲ ಎಂದು ತಿಳಿಸಿದೆ.












Click it and Unblock the Notifications