ಚಾಮರಾಜನಗರ: ಜನಾಂದೋಲನ ಬಳಿಕ ಅಭಿಮಾನಿಗಳಿಂದ ಸಿಎಂ ಸಿದ್ದರಾಮಯ್ಯ ಪರ ಪ್ರತಿಭಟನೆ-ಕಾರಣ ಏನು?
ಚಾಮರಾಜನಗರ, ಆಗಸ್ಟ್, 07: ಹಿಂದುಳಿದ ವರ್ಗಗಳ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಅಸ್ಥಿರ ಗೊಳಿಸಲು ಹೊರಟಿರುವ ಬಿಜೆಪಿ, ಜೆಡಿಎಸ್ ಪಾದಯಾತ್ರೆ ವಿರುದ್ಧ ಶ್ರಮಿಕ ವರ್ಗಗಳ ಒಕ್ಕೂಟವು ಆಗಸ್ಟ್ 13ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಮುಖಂಡ ಪು.ಶ್ರೀನಿವಾಸನಾಯಕ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಸಮಾವೇಶಗೊಂಡು, ಅಲ್ಲಿಂದ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆಯ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಬೃಹತ್ ಪ್ರತಿಭಟನೆ ನಡೆಸಲಾಗುವುದು.

ಈ ಪ್ರತಿಭಟನೆಗೆ ಶ್ರಮಿಕ ವರ್ಗಕ್ಕೆ ಸೇರಿದ ಹಾಲಿ ಹಾಗೂ ಮಾಜಿ ಚುನಾಯಿತ ಜನಪ್ರತಿನಿಧಿಗಳು, ಯಜಮಾನರು, ಮುಖಂಡರುಗಳು, ವಿದ್ಯಾರ್ಥಿಗಳು, ಮಹಿಳಾ ಸಂಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದಯ ಮನವಿ ಮಾಡಿದರು.
ಸಿದ್ದರಾಮಯ್ಯ ಅವರು ಶ್ರಮಿಕ ವರ್ಗಗಳ ಪರ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿರುವುದನ್ನು ಸಹಿಸದೇ ಬಿಜೆಪಿ, ಜೆಡಿಎಸ್ ಪಕ್ಷಗಳು ರಾಜಕೀಯ ಅಸ್ಥಿರತೆಯನ್ನು ನಿರ್ಮಿಸಿ ಶ್ರಮಿಕ ವರ್ಗಗಳಿಗೆ ಸಿಗುವ ಸೌಲಭ್ಯಗಳನ್ನು ತಡೆಯುವ ಸಲುವಾಗಿ ಅವರ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿವೆ. ಅದ್ದರಿಂದ ಶ್ರಮಿಕ ವರ್ಗಗಳಿಗೆ ಆಗುವ ಅನ್ಯಾಯ ಹಾಗೂ ಶ್ರಮಿಕ ವರ್ಗಗಳ ನಾಯಕರ ಮೇಲೆ ಆಗುವ ರಾಜಕೀಯ ಅಸ್ಥಿರತೆಯನ್ನು ವಿರೋಧಿಸುವ ಸಲುವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಪಡೆದ ಜಾರಿಗೆ ತಂದ 5 ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ಸಿಗುತ್ತಿವೆ. ಆದರಲ್ಲೂ ಈ ಯೋಜನೆಗಳು ಉಳ್ಳವರಿಗೆ ಹೆಚ್ಚು ಲಾಭವಾಗಿದೆ. ಬಿಜೆಪಿ, ಜೆಡಿಎಸ್ ಅವಧಿಯಲ್ಲೂ ಅನೇಕ ಹಗರಣಗಳು ನಡೆದಿದ್ದು, ಯಾವುದೇ ಕ್ರಮವಾಗಿಲ್ಲ ಎಂದು ಆಕ್ರೊಶ ಹೊರಹಾಕಿದರು.
ನಿಮ್ಮ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿಗೆ ನಿವೇಶನ ನೀಡಲಾಗಿದೆ. ನಿಮ್ಮ ಪಕ್ಷದ ಶಾಸಕರು ಸಹ ನಿವೇಶನ ಪಡೆದಿದ್ದಾರೆ. ಅದರ ಬಗ್ಗೆ ಏಕೆ ಚಕಾರ ಎತ್ತದೆ, ಮುಖ್ಯಮಂತ್ರಿ ಅವರನ್ನೇ ಟಾರ್ಗೆಟ್ ಮಾಡಿ ಅಧಿಕಾರದಿಂದ ಕೆಳಗಿಸಲು ಪಾದಯಾತ್ರೆ ಹಮ್ಮಿಕೊಂಡಿರುವುದು ಸರಿಯಲ್ಲ ಎಂದರು. ಇನ್ನು ಬಿಜೆಪಿ, ಜೆಡಿಎಸ್ ನಾಯಕರ ಒತ್ತಡಕ್ಕೆ ಮಣಿದು ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೀಡಿರುವ ಶೋಕಾಸ್ ನೋಟಿಸ್ ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು.
ಮೈಸೂರಿನಲ್ಲಿ ಕಾಂಗ್ರೆಸ್ ಇದೇ ಆಗಸ್ಟ್ 9ರಂದು ಬೃಹತ್ ಜನಾಂದೋಲನ ಸಮಾವೇಶ ನಡೆಸಲಿದ್ದು, ಇದಾದ ಬಳಿಕ ಅಭಿಮಾನಿಗಳು ಸಿಎಂ ಪರ ಗಡಿಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಹೇಳಿದರು.












Click it and Unblock the Notifications