ಚಾಮರಾಜನಗರ ಜಿಲ್ಲೆ ಅಭಿವೃದ್ದಿಯ ರಾಯಭಾರಿಯದ 'ದೊಡ್ಮನೆ ಹುಡ್ಗ'
ಚಾಮರಾಜನಗರ, ಮಾರ್ಚ್ 8: ನಟ ಪುನೀತ್ ರಾಜ್ ಕುಮಾರ್ ಚಾಮರಾಜನಗರ ಜಿಲ್ಲೆ ಅಭಿವೃದ್ದಿಯ ರಾಯಭಾರಿಯಾಗಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಪುನೀತ್ ರಾಜ್ ಕುಮಾರ್ ರನ್ನು ಭೇಟಿ ಮಾಡಿ, ಅಧಿಕೃತ ಆಹ್ವಾನ ನೀಡಿದ್ದಾರೆ.
ಈ ಸಮಯದಲ್ಲಿ ಮಾತನಾಡಿದ ಪುನೀತ್ ರಾಜ್ ಕುಮಾರ್ '' ಚಾಮರಾಜನಗರ ಜಿಲ್ಲೆಯೊಂದಿಗೆ ನಮ್ಮದು ಭಾವನಾತ್ಮಕ ಸಂಬಂಧವಾಗಿದೆ. ನಮ್ಮ ತಂದೆ ಅವರು ಹುಟ್ಟಿ ಬೆಳೆದ ಜಿಲ್ಲೆ ಚಾಮರಾಜನಗರ. ಇಲ್ಲಿನ ಅಭಿವೃದ್ಧಿ ರಾಯಭಾರಿಯಾಗಿ ಕೆಲಸ ಮಾಡುವುದು ನಿಜಕ್ಕೂ ನನ್ನ ಸೌಭಾಗ್ಯ. ರಾಜ್ಯದ ಎಲ್ಲ ಜಿಲ್ಲೆಗಳು ಅಭಿವೃದ್ಧಿಯಾಗಿ ರಾಜ್ಯ ಪೂರ್ಣ ಅಭಿವೃದ್ಧಿಯಾಗಬೇಕಿದೆ.'' ಎಂದಿದ್ದಾರೆ.
''ಸಾಂಸ್ಕೃತಿಕವಾಗಿ ಶ್ರೀಮಂತ ಪರಂಪರೆ ಹೊಂದಿರುವ ಚಾಮರಾಜನಗರ ಜಿಲ್ಲೆ ಜೀವಂತ ಸಂಸ್ಕೃತಿಗೆ ಹೆಸರಾಗಿದೆ. ಸಿದ್ಧ ಪುರುಷರ ನಾಡು ಹಾಗೂ ಜಾನಪದ ಕಲೆಗಳ ತವರೂರು ಎಂದೇ ಖ್ಯಾತಿ ಪಡೆದಿದೆ. ಪ್ರಸ್ತುತ ಜಿಲ್ಲೆಯಲ್ಲಿ ಲಭ್ಯವಿರುವ ಸಂಪನ್ಮೂಲಗಳು ಮತ್ತು ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಿಂಬಿಸುವ ಚಿಂತನೆಯನ್ನು ಜಿಲ್ಲಾಡಳಿತ ಮಾಡಿದೆ. ಇದು ಆರಂಭದ ಹೆಜ್ಜೆ.'' ಎಂದಿದ್ದಾರೆ.

''ಚಾಮರಾಜನಗರ ಜಿಲ್ಲೆ ನಮ್ಮದು ಎಂಬ ಭಾವನೆ ಪ್ರತಿಯೊಬ್ಬರಲ್ಲೂ ಮೂಡುವಂತೆ ಸಮಗ್ರ ಅಭಿವೃದ್ದಿಯೊಂದಿಗೆ ಜಿಲ್ಲೆಯನ್ನು ಚಂದಗಾಣಿಸುವ ಉದ್ದೇಶ ಹೊಂದಲಾಗಿದೆ. ಜಿಲ್ಲೆಯು ತ್ವರಿತವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಪುನೀತ್ ರಾಜ್ ಕುಮಾರ್ ಅಭಿವೃದ್ಧಿ ರಾಯಭಾರಿಯಾಗಿ ಸೇವೆ ಸಲ್ಲಿಸುವುದರಿಂದ ಪ್ರವಾಸೋದ್ಯಮ, ಕೈಗಾರಿಕೆ ಹಾಗೂ ಇತರೆ ಕ್ಷೇತ್ರಗಳ ಪ್ರಗತಿಯಾಗಿ ಜಿಲ್ಲೆಯ ಅಭಿವೃದ್ಧಿಯ ವೇಗ ಇನ್ನೂ ಹೆಚ್ಚಾಗಲಿದೆ.'' ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.












Click it and Unblock the Notifications