ಹಸಿರು ವಲಯವಾದರೂ ಚಾಮರಾಜನಗರದಲ್ಲಿ ಮತ್ತೆ 42 ಮಂದಿಗೆ ಕ್ವಾರೆಂಟೈನ್ ಯಾಕೆ?
ಚಾಮರಾಜನಗರ, ಏಪ್ರಿಲ್ 17: ಸದ್ಯ ಕೊರೊನಾ ಪಾಸಿಟಿವ್ ಇಲ್ಲದ ಹಸಿರು ವಲಯದಲ್ಲಿರುವ ಚಾಮರಾಜನಗರ ಜಿಲ್ಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಕೊರೊನಾ ಪಾಸಿಟಿವ್ ಮುಕ್ತವಾಗಿಸುವ ಶತಪ್ರಯತ್ನ ನಡೆಸುತ್ತಲೇ ಇದೆ.
ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಜುಬಿಲಿಯೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತಿದ್ದ ಜಿಲ್ಲೆಯ 52 ವ್ಯಕ್ತಿಗಳು 14 ದಿನಗಳ ಕ್ವಾರೆಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದರೂ ಅವರ ಪೈಕಿ ಮತ್ತೆ 42 ಜನರನ್ನು ಮುಂಜಾಗ್ರತಾ ಕ್ರಮವಾಗಿ ಮತ್ತೆ ಕ್ವಾರೆಂಟೈನ್ ಕೇಂದ್ರದಲ್ಲಿ ದಾಖಲಿಸಿಕೊಂಡು ಈ ಎಲ್ಲರ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು, ಜುಬಿಲಿಯೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತಿದ್ದ ಜಿಲ್ಲೆಯ 52 ವ್ಯಕ್ತಿಗಳ ಪೈಕಿ ಈಗಾಗಲೇ 5 ಜನರ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪರೀಕ್ಷಿಸಲಾಗಿದ್ದು, ಪರೀಕ್ಷೆಯ ಫಲಿತಾಂಶ ನೆಗೆಟಿವ್ ಬಂದಿದೆ. ಉಳಿದ 47 ಜನರಲ್ಲಿ 42 ಜನರನ್ನು ಮತ್ತೆ ಕ್ವಾರೆಂಟೈನ್ ಕೇಂದ್ರದಲ್ಲಿ ದಾಖಲಿಸಿಕೊಂಡು ಈ ಎಲ್ಲರ ಮಾದರಿಗಳನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ. ಉಳಿದ 5 ಜನರನ್ನು ಕ್ವಾರೆಂಟೈನ್ ಕೇಂದ್ರಕ್ಕೆ ಕರೆಸಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಐ.ಎಲ್.ಐ ರೋಗಲಕ್ಷಣವಿದ್ದ ಓರ್ವ ವ್ಯಕ್ತಿಯ ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆಗಾಗಿ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದ್ದು, ಫಲಿತಾಂಶ ನಿರೀಕ್ಷಿಸಲಾಗುತ್ತಿದೆ. ಈ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.












Click it and Unblock the Notifications