ಕೊಳ್ಳೇಗಾಲದಲ್ಲಿ ಕಲುಷಿತ ನೀರು ಕುಡಿದು ಏಳು ಮಂದಿ ಅಸ್ವಸ್ಥ
ಚಾಮರಾಜನಗರ, ಅಕ್ಟೋಬರ್ 27; ಇಲ್ಲಿಗೆ ಸಮೀಪದ ಕೊಳ್ಳೇಗಾಲ ನಗರದ ಆಶ್ರಯ ಬಡಾವಣೆಯಲ್ಲಿ ಕಲುಷಿತ ನೀರಿನ ಸೇವನೆಯಿಂದ ಏಳಕ್ಕೂ ಹೆಚ್ಚು ನಿವಾಸಿಗಳು ಅಸ್ವಸ್ಥರಾದ ಘಟನೆ ನಡೆದಿದೆ.
ನಗರದ 22ನೇ ವಾರ್ಡ್ ಆಶ್ರಯ ಬಡಾವಣೆಯಲ್ಲಿ ಕುಡಿಯುವ ನೀರಿಗೆ ಚರಂಡಿ ನೀರು ಬೆರೆತಿರುವ ಅನುಮಾನವಿದ್ದು, ಈ ನೀರನ್ನು ಸೇವಿಸಿ ಬಡಾವಣೆಯ ನಿವಾಸಿಗಳು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಅಸ್ವಸ್ಥರಲ್ಲಿ ಇಬ್ಬರು ಮಕ್ಕಳಿದ್ದು, ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಸೇರಿಸಲಾಗಿದೆ.
ಇನ್ನುಳಿದವರು ಕೊಳ್ಳೇಗಾಲದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾ ಸಾಂಕ್ರಮಿಕ ಭೀತಿಯ ನಡುವೆ ಕಲುಷಿತ ನೀರಿನಿಂದ ಜನರು ಅನಾರೋಗ್ಯಕ್ಕೀಡಾಗಿದ್ದು, ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ನಗರಸಭೆ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಬಡಾವಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆರೋಗ್ಯ ಇಲಾಖೆ ಸಿಬ್ಬಂದಿ ಮನೆಮನೆಗೆ ತೆರಳಿ ನಿವಾಸಿಗಳ ಆರೋಗ್ಯ ವಿಚಾರಿಸಿದ್ದಾರೆ. ಈ ಬಗ್ಗೆ ನಗರಸಭೆ ಪೌರಾಯುಕ್ತ ನಾಗಶೆಟ್ಟಿ ಅವರು ಪ್ರತಿಕ್ರಿಯಿಸಿ, ದೂರುಗಳು ಬಂದ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತಿದ್ದೇವೆ. ಕುಡಿಯುವ ನೀರಿನ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳಿಸಿಕೊಡಲಾಗಿದೆ ಎಂದು ಹೇಳಿದರು. ಕೆಲ ಅಸ್ವಸ್ಥರಿಗೆ ಭೇದಿ ಲಕ್ಷಣ, ಇನ್ನೂ ಕೆಲವರಿಗೆ ವಾಂತಿಯಂತಹ ಲಕ್ಷಣಗಳು ಕಂಡುಬಂದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಯೋಗಾಲಯದ ವರದಿ ಬಂದ ನಂತರವೇ ಅಸ್ವಸ್ಥತೆಗೆ ಕಾರಣ ತಿಳಿಯಲಿದೆ ಎಂದು ತಿಳಿಸಿದರು.












Click it and Unblock the Notifications