ಸೋಲಾರ್ ಸಂಸ್ಥೆಗೆ ಜಮೀನು ನೀಡಿದ ರೈತರಿಗೆ ಪರದಾಟ ತಪ್ಪಿಲ್ಲ!
ಚಾಮರಾಜನಗರ, ಡಿಸೆಂಬರ್ 28: ರೈತರಿಂದ ಜಮೀನು ಪಡೆಯುವಾಗ ಜಮೀನು ಕಳೆದುಕೊಳ್ಳುವ ರೈತರಿಗೆ ಉದ್ಯೋಗ ನೀಡುವ ಭರವಸೆ ನೀಡಿದ ಸೋಲಾರ್ ಸಂಸ್ಥೆ ಇದೀಗ ಕೆಲವರಿಗೆ ಭದ್ರತಾ ಸಿಬ್ಬಂದಿ ಸೇರಿದಂತೆ ಸಣ್ಣಪುಟ್ಟ ಉದ್ಯೋಗ ನೀಡಿದ್ದರೆ, ಮತ್ತೆ ಕೆಲವರಿಗೆ ಉದ್ಯೋಗವನ್ನು ನೀಡದೆ ವಂಚಿಸಿದೆ. ಜೊತೆಗೆ ಉದ್ಯೋಗ ಪಡೆದಿರುವ ಸಿಬ್ಬಂದಿಗೆ ಅನಗತ್ಯ ಕಿರುಕುಳ ನೀಡುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು ಪ್ರಕರಣ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಸೋಮಹಳ್ಳಿ ಗ್ರಾಮದ ಸಮೀಪದಲ್ಲಿ ಸುಮಾರು 150ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಮೀರಾ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕವನ್ನು ಸ್ಥಾಪಿಸಿದ್ದು, ಇಲ್ಲಿ ಕಳೆದ ಒಂದು ವರ್ಷದಿಂದ ಹಲವರು ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ ಮೇಲಾಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎನ್ನಲಾಗಿದ್ದು ಈ ಸಂಬಂಧ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದಾರೆ.
ರೈತರ ಭೂಮಿಯನ್ನು ಖರೀದಿಸುವ ವೇಳೆ ತಮ್ಮ ಭೂಮಿಯನ್ನು ಮಾರಾಟ ಮಾಡಲೊಪ್ಪದ ಕುಟುಂಬಗಳಿಗೆ ಉದ್ಯೋಗ ಕೊಡುವ ಭರವಸೆ ನೀಡಿ ಖರೀದಿಸಲಾಗಿತ್ತು. ಕುಟುಂಬದ ಒಬ್ಬರಿಗೆ ಉದ್ಯೋಗ ದೊರಕುವ ಆಸೆಯಿಂದ ರೈತರು ತಮ್ಮ ಭೂಮಿಯನ್ನು ಮಾರಾಟ ಮಾಡಿದ್ದರು.

ನಂತರ ಇಲ್ಲಿ ಕಳೆದ ಒಂದು ವರ್ಷದಿಂದ ಕೆಲವರು ಭದ್ರತಾ ಸಿಬ್ಬಂದಿಯಾಗಿ ಕೆಲಸಮಾಡುತ್ತಿದ್ದರೆ, ಇನ್ನು ಕೆಲವರು ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಮತ್ತೆ ಕೆಲವರು ಕೆಲಸ ನೀಡಬಹುದೆಂಬ ನಿರೀಕ್ಷೆಯಲ್ಲಿದ್ದಾರೆ. ಹೀಗಿರುವಾಗ ಇತ್ತೀಚೆಗೆ ಬದಲಾದ ಆಡಳಿತ ಮಂಡಳಿಯು ಸಿಬ್ಬಂದಿಗೆ ಅನಗತ್ಯ ಕಿರುಕುಳ ನೀಡುತ್ತಿದ್ದಾರೆ.
ಹಿಂದಿಯಲ್ಲಿ ಮಾತನಾಡುವ ಮೇಲ್ವಿಚಾರಕರು ಸ್ಥಳೀಯ ಸಿಬ್ಬಂದಿಗಳನ್ನು ಹೀನಾಯವಾಗಿ ನಡೆಸಿಕೊಳ್ಳುತ್ತಿದ್ದು, ಕಳೆದ ತಿಂಗಳಿನಿಂದ ಕೆಲಸವನ್ನೂ ಕೊಡದೆ ಸಂಬಳವನ್ನೂ ನೀಡಿಲ್ಲ. ಬಿಹಾರ ಮೂಲದ ಕಾರ್ಮಿಕರನ್ನು ಕರೆತಂದು ಭದ್ರತಾ ಕೆಲಸಕ್ಕೆ ನಿಯೋಜಿಸಿದ್ದರಿಂದ ಕಳೆದ ವರ್ಷದಿಂದ ಕಾರ್ಯನಿರ್ವಹಿಸಿ ತಮ್ಮ ಕುಟುಂಬವನ್ನು ನಿರ್ವಹಿಸುತ್ತಿದ್ದ ಕಾರ್ಮಿಕರ ಬದುಕು ಬೀದಿಗೆ ಬಿದ್ದಿದೆ.

ಇದ್ದ ಭೂಮಿಯನ್ನು ಮಾರಿ ಮಾಡಲು ಬೇರಾವುದೇ ಉದ್ಯೋಗವಿಲ್ಲದೆ ಜೀವನೋಪಾಯಕ್ಕೆ ಪರದಾಡುವಂತಾಗಿದೆ. ಆದ್ದರಿಂದ ಹಿಂದೆ ಮಾಡಿಕೊಂಡಿದ್ದ ಒಪ್ಪಂದದಂತೆ ತಮ್ಮನ್ನು ಉದ್ಯೋಗದಲ್ಲಿ ಮುಂದುವರೆಸಲು ನೆರವಾಗಬೇಕು ಎಂದು ಪೊಲೀಸರಿಗೆ ದೂರು ನೀಡಲಾಗಿದೆ.
ದೂರು ಸ್ವೀಕರಿಸಿರುವ ಪೊಲೀಸರು ಸರ್ಕಲ್ ಇನ್ಸ್ಪೆಕ್ಟರ್ ಸಮ್ಮುಖದಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.












Click it and Unblock the Notifications