ಬಂಡೀಪುರ ಅರಣ್ಯದಲ್ಲಿ ಫ್ಲೈಓವರ್: ಕರ್ನಾಟಕ ಸರ್ಕಾರದ ರೆಡ್ ಸಿಗ್ನಲ್
Recommended Video

ಬೆಂಗಳೂರು, ಆಗಸ್ಟ್ 3: ಬಂಡೀಪುರ ಅಭಯಾರಣ್ಯದಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಅವಕಾಶ ಕೊಡುವುದಿಲ್ಲ ಎಂದು ಕರ್ನಾಟಕ ಸರ್ಕಾರ ಸ್ಪಷ್ಟಪಡಿಸಿದೆ.
ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಅನುವಾಗುವಂತೆ ಬಂಡೀಪುರ ಹಾಗೂ ವೈನಾಡು ಸಂಪರ್ಕಿಸುವ ಹೆದ್ದಾರಿಯಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಿಸಬೇಕು ಎಂಬ ಕೇಂದ್ರ ರಸ್ತೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವಾಲಯ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ತಳ್ಳಿ ಹಾಕಿದೆ.
ಇದರ ಜತೆಗೆ ರಾತ್ರಿ 9ರಿಂದ ಬೆಳಗ್ಗೆ 6ರವರೆಗೆ ಬಂಡೀಪುರ ರಾಷ್ಟ್ರೀಯ ಉದ್ಯಾನದ ಹೆದ್ದಾರಿಯಲ್ಲಿ ಸಂಚರಿಸಲು ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡುವುದಿಲ್ಲ ಎಂದು ಅರಣ್ಯ ಸಚಿವ ಆರ್.ಶಂಕರ್ ಸ್ಪಷ್ಟಪಡಿಸಿದ್ದಾರೆ. ರಾತ್ರಿ ವೇಳೆ ಬಂಡೀಪುರ ಹುಲಿ ಸಂರಕ್ಷಿತ ಅಭಯಾರಣ್ಯದಲ್ಲಿ ವಾಹನ ಸಂಚಾರದಿಂದ ವನ್ಯ ಜೀವಿಗಳಿಗೆ ಸಮಸ್ಯೆಯಾಗದಂತೆ ಎಲೆವೇಟೆಡ್ ಕಾರಿಡಾರ್ ನಿರ್ಮಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ಆದರೆ ಇದಕ್ಕೆ ಅವಕಾಶ ನೀಡಿದರೆ ವನ್ಯಜೀವಿಗಳಿಗೆ ಹಾಗೂ ಹುಲಿ ಸಂರಕ್ಷಿತ ಪ್ರದೇಶಕ್ಕೆ ಧಕ್ಕೆಯಾಗುತ್ತದೆ. ಹೀಗಾಗಿ ಕೇಂದ್ರ ಸರ್ಕಾರ ಹಾಗೂ ಕೇರಳ ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದೇವೆ, ಈ ಮೊದಲಿನಂತೆಯೇ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ವಾಹನಗಳ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಬಂಡೀಪುರದಲ್ಲಿ ರಾತ್ರಿ ತುರ್ತು ವಾಹನಗಳಿಗೆ ಮಾತ್ರ ಅವಕಾಶ
ಈ ಮೊದಲ ಒಪ್ಪಂದದಂತೆ ತುರ್ತು ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ, ಅದರೊಂದಿಗೆ ಕೇರಳ ಹಾಗೂ ಕರ್ನಾಟಕ ಸರ್ಕಾರದ ತಲಾ ಎರಡು ಸರ್ಕಾರಿ ಬಸ್ಸುಗಳು ರಾತ್ರಿ ಸಂಚಾರಕ್ಕೆ ಅವಕಾಶವಿದೆ. ಉಳಿದಂತೆ ಯಾವುದೇ ವಾಹನಗಳ ಪ್ರವೇಶಕ್ಕೂ ಅನುಮತಿ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಕೇಂದ್ರಕ್ಕೆ ಬರೆದ ಪತ್ರದಲ್ಲೇನಿದೆ?
ಕಳೆದ ಸರ್ಕಾರದ ಅವಧಿಯಲ್ಲೂ ಈ ಪ್ರಸ್ತಾವನೆಯನ್ನು ಸ್ಪಷ್ಟವಾಗಿ ತಿರಸ್ಕರಿಸಲಾಗಿತ್ತು. ಇದೀಗ ಸುಪ್ರೀಂಕೋರ್ಟ್ ರಚಿಸಿರುವ ಸಮಿತಿ ಹಾಗೂ ಕೇರಳ ಸರ್ಕಾರದ ಪ್ರಸ್ತಾವನೆ ಆಧರಿಸಿ ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಸಚಿವಾಲಯವು ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಈ ಯೋಜನೆ ಅನುಷ್ಠಾನಗೊಂಡರೆ ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಆವಾಸ ಹೊಂದಿರುವ ವನ್ಯಜೀವಿ ಸಂಕುಲಕ್ಕೆ ಅಪಾಯ ಒದಗುತ್ತದೆ.

ಬಂಡೀಪುರ ವಿವಾದವೇನು?
1973ರಲ್ಲಿಯೇ ಹುಲಿ ಸಂರಕ್ಷಿತ ಪ್ರದೇಶವೆಂದು ಯುನೆಸ್ಕೋದಿಂದ ಮಾನ್ಯತೆ ಪಡೆದ ಪ್ರದೇಶ ಬಂಡೀಪುರ ಉದ್ಯಾನವಾಗಿದೆ. 100ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಹುಲಿಗಳು, 2 ಸಾವಿರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಆನೆಗಳು ಸೇರಿದಂತೆ ಅನೇಕ ವನ್ಯಜೀವಿಗಳು ವಾಸಿವಿದೆ.
ಇವುಗಳಲ್ಲಿ ರಾತ್ರಿ ವೇಳೆ ತುರ್ತು ವಾಹನಗಳ ಹೊರತಾಗಿ ಉಳಿದ ವಾಹನಗಳಿಗೆ ಸಂಚಾರ ನಿರ್ಭಂದಿಸಿದ್ದರು. ಇದಕ್ಕೆ ತಮಿಳುನಾಡು ಸರ್ಕಾರವೂ ಒಪ್ಪಿಗೆ ಸೂಚಿಸಿದೆ. ಆದರೆ ಕೇರಳ ಸರ್ಕಾರ ಮಾತ್ರ ರಾಜ್ಯ ಹೆದ್ದಾರಿ 212ರಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಪಡಿಸುತ್ತದೆ.
ರಾತ್ರಿ ವಾಹನ ಸಂಚಾರಕ್ಕೆ ಕುಮಾರಸ್ವಾಮಿ ಒಪ್ಪಿಗೆ ನೀಡಿಲ್ಲ
ಬಂಡೀಪುರದಲ್ಲಿ ತುರ್ತು ವಾಹನಗಳು ಕೇರಳ, ಕರ್ನಾಟಕದ ಎರಡು ಸರ್ಕಾರಿ ಬಸ್ ಹೊರತುಪಡಿಸಿ ಇನ್ಯಾವುದೇ ಬಸ್ಗಳಿಗೆ ರಾತ್ರಿ 9ರಿಂದ ಬೆಳಗ್ಗೆ 6ರವರೆಗೆ ಅವಕಾಶವಿರುವುದಿಲ್ಲ, ರಾತ್ರಿ ವಾಹನ ಸಂಚಾರಕ್ಕೆ ಕುಮಾರಸ್ವಾಮಿ ಸರ್ಕಾರ ಅನುಮತಿ ನೀಡಿದೆ ಎನ್ನುವ ಮಾತುಗಳು ಸುಳ್ಳು ಎಂದು ಸಚಿವ ಶಂಕರ್ ಸ್ಪಷ್ಟಪಡಿಸಿದ್ದಾರೆ.












Click it and Unblock the Notifications